ರಾಜ್ಯ ಸರ್ಕಾರಕ್ಕೆ ಜವಾಬ್ದಾರಿ ನೆನಪಿಸಿದ ಹೆಚ್.ಡಿ.ಕುಮಾರಸ್ವಾಮಿ!
ಬೆಂಗಳೂರು, ಜುಲೈ.17: ಕೊರೊನಾವೈರಸ್ ಸೋಂಕು ಹರಡುವಿಕೆ ಪ್ರಮಾಣವು ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇಂಥ ಸಂದರ್ಭದಲ್ಲಿ ಸರ್ಕಾರವು ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.
ಯಾವುದೇ ಕಾರಣಕ್ಕೂ ಇಂತಹ ಕ್ಲಿಷ್ಟ ಪರಿಸ್ಥಿತಿಯಲ್ಲಿ ಸರ್ಕಾರ ಹೊಣೆ ಗೇಡಿತನ ಪ್ರದರ್ಶಿಸಬಾರದು. ಅಲೋಪತಿ ಮತ್ತು ಆಯುಷ್ ವೈದ್ಯರ ನಡುವಣ ಅಜಗಜಾಂತರ ವೇತನ ತಾರತಮ್ಯ ಸಹಜವಾಗಿಯೇ ಕಂದಕ ಸೃಷ್ಟಿಸಿದೆ. ಸರ್ಕಾರ ಕೂಡಲೇ ಈ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಕರೋನ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಬಲು ಕಷ್ಟವಾಗುತ್ತದೆ.
ವೇತನ ತಾರತಮ್ಯ ಬಗೆಹರಿಸುವಂತೆ ಒತ್ತಾಯಿಸಿ ರಾಜ್ಯದ 2000 ಸರ್ಕಾರಿ ಗುತ್ತಿಗೆ ಆಯುಷ್ ವೈದ್ಯರು ಸಾಮೂಹಿಕ ರಾಜೀನಾಮೆ ಸಲ್ಲಿಸಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಅವರೊಂದಿಗೆ ಮಾತುಕತೆ ನಡೆಸಿ ಬಿಕ್ಕಟ್ಟು ಪರಿಹರಿಸುವಂತೆ ಒತ್ತಾಯಿಸುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ವೈದ್ಯರ ನಡುವಿನ ವೇತನ ತಾರತಮ್ಯ ನಿವಾರಿಸಲು ಸಲಹೆ:
"ಕೊರೊನಾ ನಿಯಂತ್ರಣ ಮತ್ತು ಚಿಕಿತ್ಸೆಗೆ ಆಯುಷ್ ವೈದ್ಯರಿಗೆ ಮಾಸಿಕ 20000 ರೂ. ಅಲೋಪತಿ ವೈದ್ಯರಿಗೆ ಮಾಸಿಕ 60000 ರೂ. ವೇತನ ನೀಡುತ್ತಿರುವುದು ತಾರತಮ್ಯ ಎಂದು ಆಯುಷ್ ವೈದ್ಯರು ರಾಜೀನಾಮೆ ನೀಡಿದ್ದಾರೆ. ಈಗಾಗಲೇ ವೈದ್ಯಕೀಯ ಸಿಬ್ಬಂದಿ ಕೊರತೆ ಎದುರಿಸುತ್ತಿರುವ ರಾಜ್ಯ ಸರ್ಕಾರ ಆಯುಷ್ ವೈದ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮನವೊಲಿಸಬೇಕು" ಎಂದು ಹೆಚ್ ಡಿಕೆ ಟ್ವಿಟರ್ ನಲ್ಲಿ ಸಲಹೆ ನೀಡಿದ್ದಾರೆ.












Click it and Unblock the Notifications