ರಕ್ಕಸ ರಾಜಕಾರಣಕ್ಕೆ ಕೊನೆಗಾಲ ಬಂದಿದೆ; ಸಿದ್ದರಾಮಯ್ಯ ವಿರುದ್ಧ ಎಚ್ಡಿಕೆ ಆಕ್ರೋಶ
ಬೆಂಗಳೂರು, ಡಿಸೆಂಬರ್ 3: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದನ್ನು ಅವಕಾಶವಾದಿ ರಾಜಕಾರಣಿ ಎಂದು ಹೇಳಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಮೋದಿ ಭೇಟಿ ಮಾಡಿದ್ದ ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಸಿದ್ದರಾಮಯ್ಯ ರಾಜಕೀಯ ಲಾಭದ ಭೇಟಿ ಎಂದು ಪ್ರತಿಕ್ರಿಯೆ ನೀಡಿದ್ದರು. ಇದರಿಂದ ಕುಪಿತರಾಗಿರುವ ಮಾಜಿ ಸಿಎಂ ಎಚ್ಡಿಕೆ, ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.
ಎಚ್.ಡಿ. ಕುಮಾರಸ್ವಾಮಿ ಸರಣಿ ಟ್ವೀಟ್ನಲ್ಲೇನಿದೆ?
"ಮಾಜಿ ಪ್ರಧಾನಿಗಳೊಬ್ಬರು ಹಾಲಿ ಪ್ರಧಾನಿಯನ್ನು ಭೇಟಿ ಮಾಡುವುದು ತಪ್ಪೇ? ಸಂಸತ್ ಕಲಾಪಕ್ಕೆ ತೆರಳಿದ್ದ ಎಚ್.ಡಿ. ದೇವೇಗೌಡರು ಅಲ್ಲಿಯೇ ಇದ್ದ ಪ್ರಧಾನಮಂತ್ರಿಗಳ ಕಚೇರಿಯಲ್ಲಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಆ ಭೇಟಿ ರಾಜಕೀಯ, ಸಂಕುಚಿತತೆಯ ಎಲ್ಲೆ ಮೀರಿದ್ದು ಎನ್ನುವುದನ್ನು ಆ ಇಬ್ಬರು ನಾಯಕರ ಭೇಟಿಯ ಚಿತ್ರಗಳೇ ಹೇಳುತ್ತವೆ," ಎಂದು ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಅಸೂಯೆ, ದ್ವೇಷ, ಅಸಹನೆ, ಸರ್ವಾಧಿಕಾರಿ ಮನೋಭಾವದ ಸಿದ್ದಕಲೆಯ ನಿಪುಣನಿಗೆ ರಾಜಕೀಯದಲ್ಲಿ ವಿರಳಾತಿ ವಿರಳವಾಗಿ ಕಾಣುವ ಇಂಥ ಭೇಟಿಗಳನ್ನು ಅರಗಿಸಿಕೊಳ್ಳುವುದು ಹೇಗೆ ತಾನೇ ಸಾಧ್ಯ? ಎಂದು ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಟಾಂಗ್ ನೀಡಿದರು.
'ರಾಜಕೀಯ ರಕ್ಕಸತನ'ಕ್ಕೆ ಅವರು ರಾಜಾಧಿರಾಜ. 'ರಾಜಕೀಯ ಆಶ್ರಯ' ನೀಡಿದ ಕಾಂಗ್ರೆಸ್ ಪಕ್ಷವನ್ನೇ ಹೆಬ್ಬಾವಿನಂತೆ ನುಂಗಲು ಹೊರಟ 'ಸಿದ್ದಸೂತ್ರಧಾರ'ನಿಗೆ ರಾಜಕೀಯ ಬದುಕು ಕೊಟ್ಟು, ಬೆಳೆಸಿದ ಜೆಡಿಎಸ್ ಪಕ್ಷವನ್ನು ಮುಳುಗಿಸಿಬಿಡುವ ಹಗಲುಕನಸು ಬೇರೆ ಇದೆ ಎಂದು ಎಚ್ಡಿಕೆ ಹರಿಹಾಯ್ದಿದ್ದಾರೆ.

"ದೇವೇಗೌಡರು ಅವಕಾಶವಾದಿ ರಾಜಕಾರಣಿ ಎನ್ನುವ ಸಿದ್ದರಾಮಯ್ಯರ ನಾಲಗೆ, ಜೆಡಿಎಸ್ ಪಕ್ಷ ಬಿಜೆಪಿಯ ಬಿ ಟೀಂ ಎನ್ನುವ ಆ ನಾಲಗೆಯ ಮೇಲೆ 'ಪಕ್ಷನಿಷ್ಠೆ' ಎನ್ನುವ ಪದ ಎಂದಾದರೂ ಬಂದಿದೆಯಾ? ಅದಕ್ಕೆ ಆ ಪದ 'ಪರಮ ಅಪಥ್ಯ' ಎನ್ನುವುದು ಇಡೀ ರಾಜ್ಯದ ಜನರಿಗೆ ಗೊತ್ತು".
"ನನಗಿಲ್ಲದಿದ್ದರೆ ಯಾರಿಗೂ ಬೇಡ ಎನ್ನುವ ಸ್ವಾರ್ಥ ಮನೋಭಾವದಿಂದ ಸ್ವಪಕ್ಷವೂ ಇದ್ದ ಮೈತ್ರಿ ಸರಕಾರವನ್ನೇ 'ಸ್ವಾಹಾ' ಮಾಡಿ ಆಪರೇಷನ್ ಕಮಲದ ಕೆಸರಿನಲ್ಲಿ ವಿಕೃತವಾಗಿ ಹೊರಳಾಡಿಸಿದವರು ಯಾರು ಎನ್ನುವುದು ಅವರ ಸ್ವಪಕ್ಷೀಯರಿಗೇ ಚೆನ್ನಾಗಿ ಗೊತ್ತಿದೆ," ಎಂದು ಸಿದ್ದರಾಮಯ್ಯ ಹೆಸರು ಹೇಳದೇ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಪಕಕ್ಷದಲ್ಲಿ ನಾಯಕರಿಗೆ ಗತಿ ಇಲ್ಲ, ಅಭ್ಯರ್ಥಿಗಳಿಗಂತೂ ದಟ್ಟ ದಾರಿದ್ರ್ಯ. ಇನ್ನು ಪಕ್ಷದ ಬಗ್ಗೆ ಹೇಳುವುದೇ ಬೇಡ. ಅಧ್ಯಕ್ಷರಿಗೊಂದು ಕಾಂಗ್ರೆಸ್, ಪ್ರತಿಪಕ್ಷ ನಾಯಕರಿಗೊಂದು ಕಾಂಗ್ರೆಸ್. ಅಷ್ಟೇ ಅಲ್ಲ, ಜಿಲ್ಲೆಗಳಲ್ಲಿ ಎರಡೆರಡು ಕಾಂಗ್ರೆಸ್ಗಳು!! 'ಸಿದ್ದಸೂತ್ರಧಾರ'ನಿಗೆ ಇದೆಲ್ಲ ಗೊತ್ತಿಲ್ಲವೇ? ಎಂದು ಕಾಂಗ್ರೆಸ್ ಪಕ್ಷದ ಒಳಜಗಳದ ಬಗ್ಗೆ ಎಚ್ಡಿಕೆ ಕೆದಕಿದ್ದಾರೆ.
Recommended Video
ಬಾಯಲ್ಲಿ ಜಾತ್ಯತೀತೆಯ ಜಪ ಮಾಡುತ್ತಲೇ 'ಸಂದೇಶ ಸನ್ನಿಧಿ'ಯಲ್ಲಿ 'ಸಿದ್ಧಸೂತ್ರ' 'ಹೆಣೆದ ರಕ್ಕಸ ರಾಜಕಾರಣ'ಕ್ಕೆ ಕೊನೆಗಾಲ ಬಂದಿದೆ. ಆ ದಿನವೂ ಹತ್ತಿರದಲ್ಲೇ ಇದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.












Click it and Unblock the Notifications