ರೈತರ ಬದುಕಿಗೆ ಗ್ಯಾರಂಟಿ ಕೊಡಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೆಚ್ಡಿಕೆ ಕಿಡಿ
ಬೆಂಗಳೂರು, ಜುಲೈ 17: ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚುತ್ತಿರುವುದಕ್ಕೆ ಆತಂಕ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ರೈತನ ಬದುಕಿಗೆ ಗ್ಯಾರಂಟಿ ಕೊಡಿ ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಒಂದು ಕಡೆ ರೈತರ ಆತ್ಮಹತ್ಯೆ ಹೆಚ್ಚುತ್ತಿದ್ದರೆ ಕಾಂಗ್ರೆಸ್ ಸರ್ಕಾರ ಮಹಾಘಟಬಂಧನ್ ಕಟ್ಟುವುದರಲ್ಲಿ ನಿರತವಾಗಿದೆ. ಗ್ಯಾರೆಂಟಿ ಸರ್ಕಾರದಲ್ಲಿ ರೈತನ ಬದುಕಿಗೆ ಗ್ಯಾರಂಟಿ ಇಲ್ಲದಂತಾಗಿದೆ ಎಂದು ಹೇಳಿದ್ದಾರೆ.

ಸುಭಿಕ್ಷವಾಗಿರುವ ನಾಡಿನಲ್ಲಿ ರೈತರ ಸರಣಿ ಆತ್ಮಹತ್ಯೆ ಶುರುವಾಗಿದೆ. ಸುಭಿಕ್ಷೆಯ ನಾಡಿನಲ್ಲಿ ಅನ್ನದಾತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದರೆ ಸರ್ಕಾರ ನಾಚಿಕೆಯಿಂದ ತಲೆ ತಗ್ಗಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರ ಬದುಕಿಗೆ ಗ್ಯಾರಂಟಿ ಕೊಡಿ
ಟ್ವೀಟ್ ಮಾಡಿರುವ ಅವರು, "ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಚೆಲ್ಲಾಟ, ರೈತರಿಗೆ ಮರಣ ಸಂಕಟ; ಒಂದೆಡೆ ಅನ್ನದಾತರು ಆತ್ಮಹತ್ಯೆಗಳಿಗೆ ಶರಣಾಗುತ್ತಿದ್ದರೆ, ಈ ಕರ್ನಾಟಕ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರದ್ದೇ ಆಟ. ಘಟಬಂಧನ್ ಕಟ್ಟುವುದರಲ್ಲಿ ಇರುವ ಆತುರ, ಅನ್ನ ಕೊಡುವ ರೈತನ ಬದುಕು ಕಟ್ಟುವುದರಲ್ಲಿ ಇಲ್ಲ. ಹೀಗಿದೆ ಇವರ ಗ್ಯಾರಂಟಿ ವರಸೆ, ರೈತನ ಬದುಕಿಗೆ ಗ್ಯಾರಂಟಿ ಕೊಡಿ" ಎಂದು ಒತ್ತಾಯಿಸಿದ್ದಾರೆ.
"ಗ್ಯಾರಂಟಿ ಹಾಗೂ ಭಾಗ್ಯಗಳಿಂದ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಮಾಡುತ್ತೇವೆ ಎಂದು ಬೂಸಿಬಿಟ್ಟ ಕಾಂಗ್ರೆಸ್, ಅಧಿಕಾರಕ್ಕೆ ಬಂದು ಎರಡೇ ತಿಂಗಳು ಕಳೆಯುವ ಮುನ್ನವೇ ರಾಜ್ಯದಲ್ಲಿ ' ರೈತರ ಮರಣಮೃದಂಗ ' ಶುರುವಾಗಿದೆ. ಸುಭೀಕ್ಷೆಯ ನಾಡು ಕರ್ನಾಟಕದಲ್ಲಿ ಅನ್ನದಾತರು ಆತ್ಮಹತ್ಯೆಗೆ ಶರಣಾಗುತ್ತಾರೆ ಎಂದರೆ ಇವರು ನಾಚಿಕೆಯಿಂದ ತಲೆ ತಗ್ಗಿಸಬೇಕು." ಎಂದು ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಚಾಟಿ ಬೀಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಚೆಲ್ಲಾಟ, ರೈತರಿಗೆ ಮರಣ ಸಂಕಟ; ಒಂದೆಡೆ ಅನ್ನದಾತರು ಆತ್ಮಹತ್ಯೆಗಳಿಗೆ ಶರಣಾಗುತ್ತಿದ್ದರೆ, ಈ @INCKarnataka ಪಕ್ಷಕ್ಕೆ ಅಧಿಕಾರದ್ದೇ ಆಟ. ಘಟಬಂಧನ್ ಕಟ್ಟುವುದರಲ್ಲಿ ಇರುವ ಆತುರ, ಅನ್ನ ಕೊಡುವ ರೈತನ ಬದುಕು ಕಟ್ಟುವುದರಲ್ಲಿ ಇಲ್ಲ. ಹೀಗಿದೆ ಇವರ ಗ್ಯಾರಂಟಿ ವರಸೆ!! 1/6#ರೈತನ_ಬದುಕಿಗೆ_ಗ್ಯಾರಂಟಿ_ಕೊಡಿ pic.twitter.com/JG2rg8v8GN
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 17, 2023
ಹಾವೇರಿ ಜಿಲ್ಲೆಯಲ್ಲಿ 18 ರೈತರು ಸಾವು
ಹಾವೇರಿ ಜಿಲ್ಲೆ ಒಂದರಲ್ಲಿಯೇ 18 ಮಂದಿ ಅನ್ನದಾತರು ಸಾವಿಗೆ ಶರಣಾಗಿರುವುದು, ಇನ್ನಿತರೆ ಜಿಲ್ಲೆಗಳಲ್ಲಿ ಅದೇ ಸರಣಿ ಶುರುವಾಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ. ಈ ಸಾವುಗಳು ಕಳವಳಕಾರಿ. ರೈತರ ಬದುಕಿಗೇ ಗ್ಯಾರಂಟಿ ಕೊಡದ ಈ ಸರಕಾರ ಘೋರ ಪಾಪ ಎಸಗಿ, ಘಟಬಂಧನ್ ಎಂದು ಚೆಲ್ಲಾಟ ಆಡುತ್ತಿದೆ ಎಂದರು.
ಗ್ಯಾರಂಟಿ ಎಂದು ಬೀಗಿದ ಕಾಂಗ್ರೆಸ್ ಸರ್ಕಾರ ಆ ಗ್ಯಾರಂಟಿಗಳಲ್ಲಿ ರೈತನ ಪಾಲೇನು? ರಾಜ್ಯಪಾಲರ ಭಾಷಣ, ಬಜೆಟ್ಟಿನಲ್ಲಿ ಈ ಬಗ್ಗೆ ಒಂದು ಪದವನ್ನಾದರೂ ಉಲ್ಲೇಖಿಸಬೇಕಿತ್ತು. ಬಡವರ ಬದುಕಿಗೆ ಗ್ಯಾರಂಟಿ ಕೊಡುತ್ತೇವೆ ಎಂದವರು ಮಾಡಿದ್ದೇನು? ಬಜೆಟ್ಟಿನಲ್ಲಿ ಕೃಷಿ ಅನುದಾನಕ್ಕೆ ಖೋತಾ ಹಾಕಿದ್ದು! ಇವರಾ ರೈತೋದ್ಧಾರಕರು? ನಾಚಿಕೆಗೇಡು. ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರೈತರಿಗೆ ಮನವಿ ಮಾಡಿದ ಹೆಚ್ಡಿಕೆ
ನಾನು ಮುಖ್ಯಮಂತ್ರಿ ಆಗಿದ್ದಾಗ, ಆ ಹಿಂದಿನ ಕರ್ನಾಟಕ ಸರಕಾರದ ಅವಧಿಯಲ್ಲಿ ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆಗಳು ಆಗಿದ್ದವು. ನನ್ನ ಸರಕಾರ ಬಂದ ಕೂಡಲೇ ರೈತರ ಸಾಲ ಮನ್ನಾ ಮಾಡಿ ಅವರ ಜೀವ ಉಳಿಸುವ ಕೆಲಸ ಮಾಡಿದೆ. ಅದನ್ನೇ ಕಾಂಗ್ರೆಸ್ ಸರಕಾರ ಈಗ ಮಾಡಲಿ. ಕೃಷಿ ಅನುದಾನಕ್ಕೆ ಕತ್ತರಿ ಹಾಕುವ ಬದಲು ರೈತರಿಗೆ ಆರ್ಥಿಕ ನಿರಾಳತೆ ನೀಡಲಿ ಎಂದು ಒತ್ತಾಯಿಸಿದ್ದಾರೆ
ಅನ್ನದಾತ ಬಂಧುಗಳಲ್ಲಿ ಹೃದಯಪೂರ್ವಕ ಮನವಿ ಮಾಡಿರುವ ಹೆಚ್.ಡಿ. ಕುಮಾರಸ್ವಾಮಿ, "ದಯಮಾಡಿ ಯಾರೂ ಆತುರದ ನಿರ್ಧಾರ ಕೈಗೊಳ್ಳುವುದು ಬೇಡ. ಒಂದು ಜೀವಹಾನಿ ಆ ಕುಟುಂಬವನ್ನು ಬೀದಿಗೆ ತಂದು ನಿಲ್ಲಿಸುತ್ತದೆ. ಹೋರಾಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳೋಣ. ನಿಮ್ಮ ಜತೆ ನಾನಿದ್ದೇನೆ. ದಯವಿಟ್ಟು ಯಾರೂ ಜೀವಕ್ಕೆ ಕುತ್ತು ತಂದುಕೊಳ್ಳುವುದು ಬೇಡ. ಸರಕಾರ ತಕ್ಷಣ ಇತ್ತ ಗಮನ ಹರಿಸಬೇಕು." ಎಂದು ಹೇಳಿದ್ದಾರೆ.












Click it and Unblock the Notifications