ಇಸ್ಕೊಂಡು ಈರಭದ್ರನಂತಾದ ಕೇಂದ್ರ ಸರ್ಕಾರ: ಎಚ್ಡಿಕೆ
ಬೆಂಗಳೂರು, ಆ. 29: ತಾನು ಕೊಡಬೇಕಾಗಿದ್ದ ಜಿಎಸ್ಟಿ ನಷ್ಟ ಭರ್ತಿ ಬದಲಿಗೆ ರಾಜ್ಯ ಸರ್ಕಾರಗಳು ಸಾಲ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ಆದೇಶ ಮಾಡಿರುವುದು ತೀವ್ರ ಖಂಡನೆಗೆ ಗುರಿಯಾಗಿದೆ. ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳಿಂದ ಈಗಾಗಲೇ ಜನರು ತತ್ತರಿಸಿದ್ದಾರೆ. ರಾಜ್ಯ ಸರ್ಕಾರಗಳೂ ಆರ್ಥಿಕ ಸಂಕಷ್ಟಕ್ಕೆ ಈಡಾಗಿವೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮತ್ತೊಂದು ಆರ್ಥಿಕ ಹೊಡೆತವನ್ನು ರಾಜ್ಯಕ್ಕೆ ಕೊಟ್ಟಿದೆ. ನಿರೀಕ್ಷಿತ ಗುರಿ ಸಾಧನೆ ಆಗಿಲ್ಲ ಎಂಬ ಕಾರಣದಿಂದ ರಾಜ್ಯ ಸರ್ಕಾರದ ಪಾಲಿನ ಜಿಎಸ್ಟಿ ಹಣವನ್ನು ಕೊಡಲು ಕೇಂದ್ರ ನಿರಾಕರಿಸಿದೆ.
Recommended Video
ತಾನು ಕೊಡಬೇಕಾಗಿದ್ದ ಜಿಎಸ್ಟಿ ಹಣದ ಬದಲಿಗೆ ರಿಸರ್ವ್ ಬ್ಯಾಂಕ್ನಿಂದ ಸುಲಭ ಬಡ್ಡಿ ದರದಲ್ಲಿ ಸಾಲ ಪಡೆಯುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಸರ್ಕಾರ ಮುಗುಮ್ಮಾಗಿದ್ದರೂ, ವಿರೋಧ ಪಕ್ಷಗಳು ಕೇಂದ್ರದ ತೀರ್ಮಾನವನ್ನು ತೀವ್ರವಾಗಿ ಖಂಡಿಸಿವೆ. ಈ ಬಗ್ಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದು, ಒಕ್ಕೂಟ ವ್ಯವಸ್ಥೆಯ ಮೇಲೆ ಪರಿಣಾಮ ಬೀರುವಂತಿದೆ ಎಂದು ಆರೋಪಿಸಿದ್ದಾರೆ.
ಕೇಂದ್ರದಿಂದ ಗದಾ ಪ್ರಹಾರ
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿಯುವ ಮೂಲಕ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಮೇಲೆ ಗದಾ ಪ್ರಹಾರ ಮಾಡಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರದ ಈ ನಿರ್ಧಾರ ಹೊಣೆಗೇಡಿತನದ ಪ್ರದರ್ಶನ ಎಂದಿದ್ದಾರೆ. ಇದೇ ವಿಚಾರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ಖಂಡಿಸಿದ್ದರು. ಇವತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರು ಕಿಡಿ ಕಾರಿದ್ದಾರೆ.
ದೇವರ ಅಸಮಾನ್ಯ ಆಟ
ಕೊರೊನಾ ಸಂಕಷ್ಟ 'ದೇವರ ಅಸಮಾನ್ಯ ಆಟ' ಎನ್ನುವ ಮೂಲಕ ಒಕ್ಕೂಟ ವ್ಯವಸ್ಥೆಯ ರಾಜ್ಯಗಳ ಬಹುದೊಡ್ಡ ನಂಬಿಕೆಗೆ ಕೊಡಲಿ ಪೆಟ್ಟು ಕೊಟ್ಟಿದೆ. ಸುಲಭದ ಬಡ್ಡಿದರದಲ್ಲಿ ಸಾಲ ತೆಗೆದುಕೊಳ್ಳಿ. ಪಡೆದ ಸಾಲವನ್ನು ರಾಜ್ಯಗಳೇ ತೀರಿಸಿ ಎನ್ನುವ ಆಯ್ಕೆ ಮುಂದಿಟ್ಟು ರಾಜ್ಯಗಳ ಆರ್ಥಿಕತೆಗೆ ಕೇಂದ್ರ ಸರ್ಕಾರ ಕೊಳ್ಳಿ ಇಟ್ಟಿದೆ ಎಂದು ಎಚ್ಡಿಕೆ ಕಿಡಿಕಾರಿದ್ದಾರೆ.
ಯಾವುದೇ ಪ್ರಲೋಭನೆ ಒಡ್ಡುವ ಮೂಲಕ ರಾಜ್ಯಗಳ ಆರ್ಥಿಕತೆಯ ವ್ಯವಸ್ಥೆ ಮೇಲೆ ನಿಯಂತ್ರಣ ಸಾಧಿಸುವ ಕಾನೂನು, ತಿದ್ದುಪಡಿ ಮಸೂದೆಗಳು ಭವಿಷ್ಯದಲ್ಲಿ ಒಕ್ಕೂಟ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಅಪಾಯ ಇಲ್ಲದಿಲ್ಲ ಎಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಪಾದಿಸಿದ್ದರು. ಇಂತಹದೊಂದು ಅಪಾಯ ಈಗ ಎದುರಾಗಿದೆ.
ಇಸ್ಕೊಂಡವ ಈರಭದ್ರ
ಈಗ ಸಂಗ್ರಹವಾಗಿರುವ ತೆರಿಗೆಯಲ್ಲಿ ರಾಜ್ಯ ಸರ್ಕಾರಗಳಿಗೆ ಪರಿಹಾರ ನೀಡಲು 97 ಸಾವಿರ ಕೋಟಿ ರೂ ಹಾಗೂ ಆದಾಯ ಕೊರತೆ ಎದುರಾಗಲಿರುವ 2.35 ಲಕ್ಷ ಕೋಟಿ ರೂಪಾಯಿಗಳನ್ನು ರಾಜ್ಯಗಳು ಸಾಲ ಪಡೆಯುವ ಆಯ್ಕೆಗಳನ್ನು ಮುಂದಿಟ್ಟಿದೆ.
'ಕೊಟ್ಟವ ಕೋಡಂಗಿ; ಇಸ್ಕೊಂಡವ ಈರಭದ್ರ' ಎಂಬಂತೆ ರಾಜ್ಯ ಸರ್ಕಾರಗಳು ಕಣ್ಣು ಬಾಯಿ ಬಿಡುತ್ತಿವೆ. ಈಗ ಕೊರೊನಾ ನೆಪ ಮುಂದಿಟ್ಟು ಅನ್ಯಾಯ ಮಾಡಿಬಿಟ್ಟರೆ ರಾಜ್ಯ ಸರ್ಕಾರಗಳು ಏನು ಮಾಡಬೇಕು? ಕೋವಿಡ್ 19 ಮತ್ತು ನೆರೆಯಿಂದ ಬಳಲಿರುವ ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿವೆ.
ಕೇಂದ್ರ ಸರ್ಕಾರವೇ ಸಾಲ ಮಾಡಲಿ
ತಾಳ ತಪ್ಪಿದ ಕೇಂದ್ರ ಸರ್ಕಾರದ ದಿಕ್ಕೆಟ್ಟ ಅರ್ಥ ವ್ಯವಸ್ಥೆ ಮತ್ತು ಮುನ್ನೋಟದ ಅಂದಾಜು ಗ್ರಹಿಸದ ವೈಫಲ್ಯದ ಫಲವಾಗಿ ರಾಜ್ಯ ಸರ್ಕಾರಗಳು ಹಗ್ಗ ಕೊಟ್ಟು ಕೈ ಕಟ್ಟಿಸಿಕೊಂಡ ಪರಿಸ್ಥಿತಿಗೆ ಸಿಲುಕಿ ನಲುಗುತ್ತಿವೆ. ರಾಜ್ಯಗಳಿಗೆ ಸಾಲ ಕೊಡಿಸುವ ಬದಲು ಕೇಂದ್ರವೇ RBIನಿಂದ ಸಾಲ ಪಡೆದು ರಾಜ್ಯಗಳಿಗೆ ನಷ್ಟ ಪರಿಹಾರ ತುಂಬಿ ಕೊಡಲಿ ಎಂದು ಎಚ್ಡಿಕೆ ಆಗ್ರಹಿಸಿದ್ದಾರೆ. ಜೊತೆಗೆ ಬಸವಣ್ಣನ ವಚನವನ್ನು ಕೇಂದ್ರಕ್ಕೆ ಹೇಳಿದ್ದಾರೆ.
ಅಷ್ಟಮಿ
ನವಮಿ
ಎಂಬ
ಕಲ್ಪಿತವೇಕೋ
ಶರಣಂಗೆ
ತಪ್ಪಿತ್ತು ಗಣಪದವಿ, ಲಿಂಗಕ್ಕೆ ದೂರ
ಒಬ್ಬರಿಗಾಳಾಗಿ, ಒಬ್ಬರನೋಲೈಸುವ ನಿರ್ಬುದ್ಧಿ ಮನುಜರನೇನೆಂಬೆ, ಕೂಡಲಸಂಗಮದೇವಾ!
ಬಸವಣ್ಣ