ಕಾಂಗ್ರೆಸ್ ಜತೆ ಮೈತ್ರಿ ಮುಂದುವರಿಕೆ: ಎಚ್ಡಿಕೆ ಹೇಳಿದ್ದೇನು?
ಬೆಂಗಳೂರು, ಜುಲೈ 24: ಸಮ್ಮಿಶ್ರ ಸರ್ಕಾರ ಪತನಗೊಂಡ ಬೆನ್ನಲ್ಲೇ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಮೈತ್ರಿ ಮುಂದುವರಿಕೆಯ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ.
ಸರ್ಕಾರ ರಚನೆಯ ಸಲುವಾಗಿ ಈ ಮೈತ್ರಿ ನಡೆದಿತ್ತು. ವಿಧಾನಸಭೆ ಚುನಾವಣೆಗೆ ಮುನ್ನ ಮೈತ್ರಿ ಒಪ್ಪಂದ ನಡೆದಿರಲಿಲ್ಲ. ಸರ್ಕಾರ ಇದೆ ಎಂಬ ಕಾರಣಕ್ಕೆ ಲೋಕಸಭೆ ಚುನಾವಣೆಯಲ್ಲಿಯೂ ಮೈತ್ರಿಯನ್ನು ಮುಂದುವರಿಸಲಾಗಿತ್ತು. ಆದರೆ, ಈಗ ಸರ್ಕಾರವೇ ಉರುಳಿರುವುದರಿಂದ ಮೈತ್ರಿ ಕೂಡ ಮುಮದುವರಿಯುವುದರ ಅಗತ್ಯವೇನಿದೆ ಎಂದು ಉಭಯ ಪಕ್ಷಗಳ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗಿದೆ.
ಅಲ್ಲದೆ, ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದೇ ತಮ್ಮ ಪಕ್ಷಕ್ಕೆ ಮುಳುವಾಯಿತು ಎಂದು ಎರಡೂ ಪಕ್ಷಗಳ ನಾಯಕರು ಬಹಿರಂಗವಾಗಿಯೇ ಹೇಳಿಕೆಗಳನ್ನು ನೀಡಿದ್ದರು. ಸ್ಥಳೀಯ ಮಟ್ಟದ ಸಂಸ್ಥೆಗಳಲ್ಲಿ ಎರಡೂ ಪಕ್ಷಗಳ ನಡುವೆ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ. ಅವುಗಳನ್ನು ಮುಂದುವರಿಸುವುದಕ್ಕೆ ಅಡ್ಡಿ ಇಲ್ಲದಿದ್ದರೂ, ರಾಜ್ಯಮಟ್ಟದಲ್ಲಿ ಮೈತ್ರಿ ಮುಂದುವರಿಸುವ ನಿರ್ಧಾರವನ್ನು ಪುನರ್ ಪರಿಶೀಲಿಸುವುದು ಅಗತ್ಯ ಎಂದು ನಾಯಕರು ಹೇಳುತ್ತಿದ್ದಾರೆ.

ಆದರೆ, ಕಾಂಗ್ರೆಸ್ ಜತೆಗಿನ ಮೈತ್ರಿ ಮುಂದುವರಿಸುವ ವಿಚಾರದಲ್ಲಿ ಹಂಗಾಮಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಾದು ನೋಡಲು ಮುಂದಾಗಿದ್ದಾರೆ.
ಮೈತ್ರಿ ಕುರಿತು ಕಾಂಗ್ರೆಸ್ ನಾಯಕರು ಏನು ತೀರ್ಮಾನ ಮಾಡುತ್ತಾರೋ ತಿಳಿದಿಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚಿಸಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು ಮೈತ್ರಿ ಮುಂದುವರಿಸುವ ವಿಚಾರದಲ್ಲಿ ಕಾದು ನೋಡೋಣ ಎಂದು ಹೇಳಿದರು.
ಸರ್ಕಾರ ಉರುಳಿಸಲು ಬಿಜೆಪಿ ನಾಯಕರು ನಡೆಸಿರುವ ಶಾಸಕರ ಕುದುರೆ ವ್ಯಾಪಾರದ ಬಗ್ಗೆ ಪ್ರತಿಕ್ರಿಯೆ ಕೊಡುವುದಿಲ್ಲ. ಅದು ಮುಗಿದುಹೋದ ಅಧ್ಯಾಯ ಎಂದು ತಿಳಿಸಿದರು.
ಬುಧವಾರ ನಡೆದ ಕಾಂಗ್ರೆಸ್ ಪಕ್ಷದ ಸಭೆಯ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಜೆಡಿಎಸ್ ಜತೆಗಿನ ಮೈತ್ರಿಯ ಬಗ್ಗೆ ಸಭೆಯಲ್ಲಿ ಯಾವುದೇ ಚರ್ಚೆ ಆಗಿಲ್ಲ. ಅದು ರಾಷ್ಟ್ರಮಟ್ಟದಲ್ಲಿ ಆಗಿರುವುದರಿಂದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.












Click it and Unblock the Notifications