ಕನ್ನಡಿಗರ ಸಹನೆ ಪರೀಕ್ಷಿಸಬೇಡಿ: ಎಂಇಎಸ್ಗೆ ಎಚ್ಚರಿಕೆ ನೀಡಿದ ಕುಮಾರಸ್ವಾಮಿ
ಬೆಂಗಳೂರು, ಆಗಸ್ಟ್ 28: ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಜಾಗದಲ್ಲಿ ಶಿವಾಜಿ ಪ್ರತಿಮೆ ಪ್ರತಿಷ್ಠಾಪನೆಗೆ ಪ್ರಯತ್ನಿಸಿ ದಾಂಧಲೆ ನಡೆಸಿದ ಎಂಇಎಸ್ ಕಾರ್ಯಕರ್ತರ ಕೃತ್ಯವನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ. ಕನ್ನಡಿಗರನ್ನು ಕೆಣಕಿದರೆ ಸುಮ್ಮನಿರುವುದಿಲ್ಲ ಎಂದು ಅವರು ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
Recommended Video
ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದು ಕುಮಾರಸ್ವಾಮಿ ಎಂಇಎಸ್ ವಿರುದ್ಧ ಕಿಡಿಕಾರಿದ್ದಾರೆ.
ಎಂಇಎಸ್, ಶಿವಸೇನೆ ಅಥವಾ ಮತ್ಯಾರೇ ಆಗಲಿ ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ ಪರೀಕ್ಷಿಸಿದಂತೆ. ಇಂತಹ ಉದ್ಧಟತನಗಳನ್ನು ಕನ್ನಡಿಗರು ಸಹಿಸುವುದಿಲ್ಲ ಎಂದು ಎಚ್ಚರಿಸುತ್ತೇನೆ ಎಂದಿದ್ದಾರೆ. ಮುಂದೆ ಓದಿ.

ತಕ್ಕಪಾಠ ಕಲಿಸಬೇಕಾಗುತ್ತದೆ
ಸಂಗೊಳ್ಳಿ ರಾಯಣ್ಣ ನಮ್ಮ ನಾಡಿನ ಹೆಮ್ಮೆ. ಅವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ಕನ್ನಡಿಗರ ಕೆಚ್ಚೆದೆಯ ಸ್ವಾಭಿಮಾನ ಕೆಣಕಿದಂತೆ. ನಾಡಿನ ವೀರಪುತ್ರ ಮತ್ತು ವನಿತೆಯರ ವಿರುದ್ಧ ನಮ್ಮ ನೆಲದಲ್ಲಿ ತಗಾದೆ ತೆಗೆದರೆ ತಕ್ಕಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕನ್ನಡಗರ ರಕ್ತದಲ್ಲಿಯೇ ಇದೆ
ನಮ್ಮ ನಾಡಿನ ನೆಲ-ಜಲ, ಭಾಷೆ ಮತ್ತು ಗಡಿ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಈ ನೆಲದ ಅಸ್ಮಿತೆಗೆ ಭಂಗ ತರುವವರನ್ನು ಹೆಡೆಮುರಿ ಕಟ್ಟುವುದು ಸ್ವಾಭಿಮಾನಿ ಕನ್ನಡಿಗರ ರಕ್ತದಲ್ಲೇ ಇದೆ. ಕನ್ನಡಿಗರೆಂದರೆ - ಸಾಧುಂಗೆ ಸಾಧು, ಮಾಧುರ್ಯಂಗೆ ಮಾಧುರ್ಯನ್, ಬಾದಿಪ್ಪ ಕಲಿಗೆ ಕಲಿಯುಗ ವಿಪರೀತನ್ ಎಂದು ಬಾದಾಮಿಯ ಕಪ್ಪೆ ಅರಭಟ್ಟನ ಶಾಸನದಲ್ಲಿನ ಸಾಲುಗಳನ್ನು ಉಲ್ಲೇಖಿಸಿ ಅವರು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಸರ್ಕಾರದ ನಿರ್ಲಕ್ಷ್ಯ
ಬೆಳಗಾವಿಯ ಪೀರನವಾಡಿಯಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗಾಗಿ ಹೋರಾಟ ನಡೆಸುತ್ತಿರುವವರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ. ನಾನು ಈಗಷ್ಟೆ ಅಲ್ಲಿನ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಕಮಿಷನರ್ ಜೊತೆ ಮಾತನಾಡಿ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿಭಾಯಿಸುವಂತೆ ತಿಳಿಸಿದ್ದೇನೆ.
ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಯನ್ನು ಬಿಜೆಪಿ ಸರ್ಕಾರ ನಿರ್ಲಕ್ಷದಿಂದ ವಿವಾದ ಮಾಡಿಕೊಂಡಿದೆ. ನೆಲ, ಜಲ, ಭಾಷೆ ಮತ್ತು ನಾಡಿನ ಹೆಮ್ಮೆಯ ವ್ಯಕ್ತಿತ್ವಗಳ ವಿಷಯದಲ್ಲಿ ರಾಜಿ ಸಲ್ಲದು. ಕನ್ನಡ ಸಂಘಟನೆಗಳು ಮತ್ತು ರಾಯಣ್ಣ ಅಭಿಮಾನಿಗಳು ಕೂಡಾ ಸಂಯಮದಿಂದ ವರ್ತಿಸಿ ವಿವಾದ ಇತ್ಯರ್ಥಕ್ಕೆ ಸಹಕರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸರ್ಕಾರಕ್ಕೆ ಹಿಂಜರಿಕೆ ಏಕೆ?
ಕರ್ನಾಟಕದ ಅಸ್ಮಿತೆಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕರುನಾಡಿನ ಅಸ್ಮಿತೆ ಮತ್ತು ಹೆಮ್ಮೆ. ರಾಜ್ಯ ಸರ್ಕಾರ ಬೆಳಗಾವಿಯ ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆಯನ್ನು ಮರು ಪ್ರತಿಷ್ಟಾಪಿಸಲಿ. ನಮ್ಮದೇ ನೆಲದಲ್ಲಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪಿಸಲು ರಾಜ್ಯ ಸರ್ಕಾರಕ್ಕೆ ಹಿಂಜರಿಕೆ ಯಾಕೆ..? ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.












Click it and Unblock the Notifications