ಬಿಬಿಎಂಪಿ ಚುನಾವಣೆ: ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿಸಿದ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಮೇ 20; ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಜೆಡಿಎಸ್ ಸ್ವಾಗತಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದರು.
ಶುಕ್ರವಾರ ನಗರದ ದಾಸರಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ಸಂತ್ರಸ್ತರಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮಗಳ ಜತೆ ಅವರು ಮಾತನಾಡಿದರು.
"ಅವಧಿ ಮುಗಿದರೂ ಕಳೆದ ಎರಡು ವರ್ಷಗಳಿಂದ ಬಿಜೆಪಿ ಸರಕಾರವು ಪಾಲಿಕೆ ಚುನಾವಣೆ ಮಾಡಿರಲಿಲ್ಲ. ಹೇಗಾದರೂ ಮಾಡಿ ಚುನಾವಣೆಯನ್ನು ಮುಂದಕ್ಕೆ ಹಾಕಿಕೊಂಡೇ ಬರುತ್ತಿತ್ತು. ಈಗ ಸುಪ್ರೀಂಕೋರ್ಟ್ ಆದೇಶ ಮಾಡಿದೆ. ಸರಕಾರ ಯಾವುದೇ ಸಬೂಬು ಹೇಳದೇ ಚುನಾವಣೆ ನಡೆಸಲೇಬೇಕು. 8 ವಾರದಲ್ಲಿ ಮೀಸಲಾತಿ ಪ್ರಕ್ರಿಯೆ ಮುಗಿಸಿ ಚುನಾವಣೆ ನಡೆಸಬೇಕು. ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ಚುನಾವಣೆ ಮಾಡಬೇಕು" ಎಂದರು.

"ಚುನಾವಣೆಗೆ ಜೆಡಿಎಸ್ ಚುನಾವಣೆಗೆ ಸಿದ್ದವಾಗಿದೆ. ಕಾಂಗ್ರೆಸ್, ಬಿಜೆಪಿ ಸರಕಾರದ ಆಡಳಿತವನ್ನು ಜನ ನೋಡಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳ ಬಗ್ಗೆ ಜನರಿಗೆ ತೀವ್ರ ಆಕ್ರೋಶ ಇದೆ. ಜನವಿರೋಧಿ ಆಡಳಿತದ ಬಗ್ಗೆ ಅರಿವು ಮೂಡಿಸಲು ಕೆಲಸ ಮಾಡುತ್ತೇವೆ. ತಕ್ಷಣವೇ ಚುನಾವಣೆ ನಡೆದರೂ ನಮ್ಮ ಪಕ್ಷ ತಯಾರಿದೆ. ಈ ಬಾರಿ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯಷ್ಟೇ ಸಮಾನವಾಗಿ ಜೆಡಿಎಸ್ ಸ್ಥಾನ ಪಡೆಯಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎರಡು ದಿನದಲ್ಲಿ ಅಭ್ಯರ್ಥಿಗಳ ಆಯ್ಕೆ; "ಎರಡು-ಮೂರು ದಿನಗಳಲ್ಲಿ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಮಾಡುತ್ತೇವೆ. ನಮ್ಮ ಹೈಕಮಾಂಡ್ ದೆಹಲಿಯಲ್ಲಿ ಇಲ್ಲ. ನಾವು ದೆಹಲಿಗೆ ಹೋಗುವ ಅವಶ್ಯಕತೆ ಇಲ್ಲ. ನಮ್ಮ ಹೈಕಮಾಂಡ್ ಇಲ್ಲೇ ಇದೆ, ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ಮಾಡಿದ್ದೇವೆ. ವರಿಷ್ಠರ ಜತೆ ಚರ್ಚೆ ಮಾಡಿ ಅಂತಿಮವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ" ಎಂದು ಕುಮಾರಸ್ವಾಮಿ ಹೇಳಿದರು.
ಎಲ್ಲ ಭಾಷೆಗಳನ್ನು ಮೋದಿ ಗೌರವಿಸಲಿ; "ಎಲ್ಲಾ ಸ್ಥಳೀಯ ಭಾಷೆಗಳಿಗೆ ಗೌರವ ನೀಡಬೇಕು" ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, "ಭಾಷೆಗಳ ವಿಚಾರದಲ್ಲಿ ಕೇಂದ್ರ ಸರಕಾರ ದ್ವಿಮುಖ ನೀತಿಯ ನಿಲುವು ತೋರಿಸುತ್ತದೆ. ಪ್ರಧಾನಿ ಮೋದಿ ಸ್ಥಳೀಯ ಭಾಷೆಗಳನ್ನು ಗೌರವಿಸಬೇಕು ಅಂತಾರೆ. ಆದರೆ, ಗೃಹ ಸಚಿವ ಅಮಿತ್ ಶಾ ಹಿಂದಿ ರಾಷ್ಟ್ರಭಾಷೆ ಆಗಬೇಕು ಅಂತಾರೆ. ಯಾರನ್ನು ನಂಬುವುದು?" ಎಂದು ಪ್ರಶ್ನಿಸಿದರು.

"ನೀನು ಹೊಡೆದ ಹಾಗೆ ಮಾಡು, ನಾನು ಅತ್ತ ಹಾಗೆ ಮಾಡುತ್ತೀನಿ ಎಂಬಂತೆ ಮೋದಿ-ಅಮಿತ್ ಶಾ ವರ್ತನೆ ಇದೆ. ಸ್ಥಳೀಯ ಭಾಷೆಗಳನ್ನು ಸರ್ವನಾಶ ಮಾಡುವ ಹುನ್ನಾರ ನಡೆಯುತ್ತಿದೆ. ಪ್ರಾದೇಶಿಕ ಭಾಷೆಗಳನ್ನು ಮೊದಲು ಮೋದಿ ಗೌರವಿಸಲಿ" ಎಂದು ಕುಮಾರಸ್ವಾಮಿ ಸಲಹೆ ನೀಡಿದರು.












Click it and Unblock the Notifications