ಮಳೆ ಎದುರಿಸಲು ಸಜ್ಜಾಗುವಂತೆ ಬಿಬಿಎಂಪಿಗೆ ಸಿಎಂ ನಿರ್ದೇಶನ
ಬೆಂಗಳೂರು, ಜೂನ್ 4: ಬೆಂಗಳೂರಿನಲ್ಲಿ ಜೂನ್ 6 ಮತ್ತು 7 ರಂದು ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿರುವ ಪರಿಣಾಮ ಎಚ್ಡಿ ಕುಮಾರಸ್ವಾಮಿ ಸೋಮವಾರ ಬಿಬಿಎಂಪಿ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು.
ಸಭೆಯಲ್ಲಿ ನಗರದಲ್ಲಿ ಸಂಭವಿಸಬಹುದಾದ ಭಾರಿ ಮಳೆ ಅನಾಹುತಗಳನ್ನು ಎದುರಿಸುವ ಕುರಿತಂತೆ ಕೈಗೊಳ್ಳಬೇಕಾಗುವ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ನಗರದಲ್ಲಿ ಪ್ರವಾಹಕ್ಕೆ ಒಳಗಾಗಬಹುದಾದ 369 ಪ್ರವಾಹ ಪೀಡಿತ ಪ್ರದೇಶಗಳನ್ನು ಗುರುತಿಸಲಾಗಿದ್ದು, ಈಗಾಗಲೇ 339 ಸ್ಥಳಗಳಲ್ಲಿ ಪರಿಹಾರ ಕ್ರಮ ಕೈಗೊಳ್ಳಲಾಗಿದೆ, ಇನ್ನು 30 ಪ್ರದೇಶಗಳು ಬಾಕಿ ಇದೆ. ತಗ್ಗು ಪ್ರದೇಶಗಳಲ್ಲಿ ರಾಜಕಾಲುವೆಯಲ್ಲಿ ನೀರು ಸರಾಗವಾಗಿ ಹರಿಯಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಇದೇ ವೇಳೆ ಎಚ್ಡಿ ಕುಮಾರಸ್ವಾಮಿ ಮಾತನಾಡಿ, ಬೆಂಗಳೂರು ನಗರದಲ್ಲಿ ಪ್ರವಾಹದ ಸಂದರ್ಭದಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತಂತೆ ಅಂದಾಜು ಪಟ್ಟಿ ಸರ್ಕಾರಕ್ಕೆ ಸಲ್ಲಿಸುವಂತೆ ನಿರ್ದೇಶನ ನೀಡಿದರು. ಯಾವುದೇ ಅನುದಾನ ಕೊರತೆ ಇಲ್ಲ, ಸರ್ಕಾರ ಅನುದಾನ ನೀಡಲು ತಯಾರಿದೆ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮವನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

63 ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದ್ದು ಎಚ್ಚರದಿಂದ ಇರಲು ಸೂಚಿಸಲಾಗಿದೆ. ಎನ್ಡಿಆರ್ಎಫ್, ಎಸ್ಡಿಆರ್ಎಫ್ ತಂಡಗಳು ಕೂಡ ಸಿದ್ಧವಾಗಿದೆ. ನಗರದಲ್ಲಿ 5 ಸಾವಿರಕ್ಕೂ ಹೆಚ್ಚು ಗುಂಡಿಗಳನ್ನು ಗುರುತಿಸಲಾಗಿದ್ದು, ಆದಷ್ಟು ಬೇಗ ಮುಚ್ಚಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಬಿಎಂಪಿ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ.












Click it and Unblock the Notifications