ರೇವಣ್ಣನೂ ಸಿಎಂ ಆಗಬೇಕಿತ್ತು: HDK ಗೆ ಸಿದ್ದು ಭರ್ಜರಿ ಟಾಂಗ್!
Recommended Video
ಬೆಂಗಳೂರು, ಮೇ 16: ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾಗಬೇಕಿತ್ತು ಎಂಬ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಟಾಂಗ್ ನೀಡಿದ್ದಾರೆ.
ಮೈತ್ರಿ ಸರ್ಕಾರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದಲ್ಲಿರುವ ಹಲವರಿಗೆ ಮುಖ್ಯಮಂತ್ರಿ ಸ್ಥಾನದ ಅರ್ಹತೆ ಇದೆ. ಅವರಲ್ಲಿ ರೇವಣ್ಣ ಕೂಡ ಒಬ್ಬರು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಸಖತ್ ಪ್ರತಿಕ್ರಿಯೆ ನೀಡಿದ್ದಾರೆ.
ಇತ್ತೀಚೆಗಷ್ಟೇ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಮೊದಲ ದಲಿತ ಮುಖ್ಯಮಂತ್ರಿ ಆಗುವ ಅರ್ಹತೆ ಹೊಂದಿದ್ದರೂ ಅವರಿಗೆ ಅವಕಾಶ ಸಿಕ್ಕಿಲ್ಲ. ಮುಂದೆ ಅವರು ಮುಖ್ಯಮಂತ್ರಿ ಆಗಬೇಕು ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆ ಕಾಂಗ್ರೆಸ್ ವಲಯದಲ್ಲಿ ಬಿರುಗಾಳಿ ಎಬ್ಬಿಸಿತ್ತು.
|
ಮುಖ್ಯಮಂತ್ರಿ ಪಟ್ಟದ ಅರ್ಹತೆ ರೇವಣ್ಣಗೂ ಇದೆ!
ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ.,ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ,,ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆಯಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಿಎಂ ಸ್ಥಾನದ ಅರ್ಹತೆಯ ಬಹಳ ಜನ ಇದ್ದಾರೆ. ಅವರಲ್ಲಿ ಹೆಚ್.ಡಿ.ರೇವಣ್ಣ ಕೂಡಾ ಒಬ್ಬರು.,ಎಲ್ಲಕ್ಕೂ ಕಾಲ ಕೂಡಿ ಬರಬೇಕು- ಸಿದ್ದರಾಮಯ್ಯ

ಖರ್ಗೆ ಮುಖ್ಯಮಂತ್ರಿಯಾಗಬೇಕಿತ್ತು!
'ಮಲ್ಲಿಕಾರ್ಜುನ ಖರ್ಗೆ ಅವರು ಎಂದೋ ರಾಜ್ಯದ ಮುಖ್ಯಮಂತ್ರಿ ಆಗಬೇಕಿತ್ತು. ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಅವರೇ ಆಗಬೇಕಿತ್ತು. ಆದರೆ, ಹೈಕಮಾಂಡ್ ಗೆ ಕೊಟ್ಟ ಮಾತಿಗೆ ಬದ್ಧರಾಗಿದ್ದಾರೆ' ಎಂದು ಕಲಬುರಗಿ ಜಿಲ್ಲೆಯ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಎಚ್ಡಿಕೆ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿಸಿತ್ತು. 'ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು' ಎಂದು ಕಾಂಗ್ರೆಸ್ ಪಕ್ಷದಲ್ಲಿ ಕೆಲವು ದನಿ ಏಳುತ್ತಿರುವ ಸಂದರ್ಭದಲ್ಲಿ ಎಚ್ ಡಿಕೆ ನೀಡಿದ ಈ ಹೇಳಿಕೆ ಸಿದ್ದರಾಮಯ್ಯ ಅವರನ್ನು ಪೇಚಿಗೆ ಸಿಲುಕಿಸಿತ್ತು.

ಈಗಲೂ ಅವರನ್ನೇ ಮುಖ್ಯಮಂತ್ರಿ ಮಾಡಲಿ!
ಕುಮಾರಸ್ವಾಮಿ ಹೇಳಿಕೆಗೆ ಚಿಂಚೋಳಿಯಲ್ಲಿ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ, "ಖರ್ಗೆ ಅವರ ಬಗ್ಗೆ ಕುಮಾರಸ್ವಾಮಿ ಅವರಿಗೆ ಅಷ್ಟೆಲ್ಲ ಕಳಕಳಿ ಇದ್ದರೆ, ಈಗಲೂ ರಾಜೀನಾಮೆ ನೀಡಿ ಅವರಿಗೇ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲಿ, ನಾವೇನೂ ಆಕ್ಷೇಪ ಮಾಡುವುದಿಲ್ಲ" ಎಂದಿದ್ದರು.

ಬೇಸರ ವ್ಯಕ್ತಪಡಿಸಿದ ಖರ್ಗೆ
ದಲಿತ ಮುಖ್ಯಮಂತ್ರಿ ಎಂಬ ಹೇಳಿಕೆಯನ್ನು ಪುನರುಚ್ಚರಿಸುವ ಮೂಲಕ ನನಗೆ ಅವಮಾನ ಮಾಡಬೇಡಿ ಎಂದು ಬಹಿರಂಗವಾಗಿಯೇ ಖರ್ಗೆ ಅವರು ಎಲ್ಲರಲ್ಲಿಯೂ ಮನವಿ ಮಾಡಿದ್ದರು. ಸ್ವಪಕ್ಷೀಯರು ಮತ್ತು ಮಿತ್ರಪಕ್ಷದವರ ಹೇಳಿಕೆಗಳಿಂದ ತಮಗೆ ಮುಜುಗರ ಉಂಟಾಗುತ್ತಿದೆ ಎಂಬುದನ್ನು ಪರೋಕ್ಷವಾಗಿ ಹೇಳಿದ್ದರು.












Click it and Unblock the Notifications