ಉರಿಯುತ್ತಿರುವ ನಿಮ್ಮ ಮನೆಯ ಬೆಂಕಿ ನಂದಿಸಿಕೊಳ್ಳಿ: ಎಚ್ಡಿಕೆ ಹೇಳಿದ್ದು ಯಾರಿಗೆ?
ಬೆಂಗಳೂರು, ನವೆಂಬರ್ 5: ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಆಕ್ರೋಶ ಹೊರಹಾಕಿದ್ದಾರೆ.
ಕೆಲವರು ತಾವು ಮುಖ್ಯಮಂತ್ರಿಯಾಗಬೇಕು ಎನ್ನುವ ಸ್ವಾರ್ಥದ ದುರಾಸೆಯಿಂದ ಜನರ ಹಣ ಪೋಲಾದರೂ ಪರವಾಗಿಲ್ಲ ಎಂದು ಸರ್ಕಾರ ಬೀಳಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಪಕ್ಷ ಬಿಟ್ಟು ಹೋದ ಶಾಸಕರಲ್ಲಿ ಬಹುತೇಕರು ನಿಮ್ಮ ಪಕ್ಷದವರೇ ಎಂಬುದನ್ನು ಮರೆಯಬಾರದು.ಪಕ್ಕದ ಮನೆಯ ಒಲೆ ಆರಿಸಲು ಬರುವ ಮುನ್ನ ಹೊತ್ತಿ ಉರಿಯುತ್ತಿರುವ ತಮ್ಮ ಮನೆಯ ಬೆಂಕಿ ನಂದಿಸಿಕೊಳ್ಳಿ ಎಂದು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.

ಟ್ವೀಟಿನಲ್ಲಿ ಸಿದ್ದರಾಮಯ್ಯ ಅವರ ಹೆಸರನ್ನು ಬರೆಯದಿದ್ದರೂ ಕೂಡ ಎಲ್ಲರಿಗೂ ಸುಲಭವಾಗಿ ಅರ್ಥವಾಗುವಂತೆ ಟ್ವೀಟನ್ನು ಅಚ್ಚುಕಟ್ಟಾಗಿ ಬರೆದಿದ್ದಾರೆ.
ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ ಎನ್ನುವುದು ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ಮನಸ್ಸಿನಲ್ಲಿ ಆಳವಾಗಿ ಬೇರೂರಿದೆ. ಹಾಗೆಯೇ ಕಾಂಗ್ರೆಸ್ ಶಾಸಕರು ಪಕ್ಷ ಬಿಡಲೂ ಕೂಡ ಸಿದ್ದರಾಮಯ್ಯ ಕಾರಣ ಎನ್ನುವ ಮಾತುಗಳೂ ರಾಜಕೀಯ ವಲಯದಲ್ಲಿ ಓಡಾಡುತ್ತಿದೆ.
ಉಪ ಚುನಾವಣೆ ಹತ್ತಿರ ಬಂದಿದೆ, ಜೆಡಿಎಸ್ ಮತ್ತು ಕಾಂಗ್ರೆಸ್ ಮತ್ತೆ ಮೈತ್ರಿ ಮಾಡಿಕೊಳ್ಳುವ ಯಾವ ಆಲೋಚನೆಯಲ್ಲೂ ಇದ್ದಂಗಿಲ್ಲ. ಆದರೆ ಎಚ್ಡಿ ಕುಮಾರಸ್ವಾಮಿ ಮಾತ್ರ ಬಿಜೆಪಿ ಬಗ್ಗೆ ಒಲವಿದ್ದಂತೆ ತೋರುತ್ತದೆ.
ಸಾಕಷ್ಟು ಭಾಷಣಗಳಲ್ಲಿ ಯಡಿಯೂರಪ್ಪ ಅವರ ಪರವಾಗಿ ಹೇಳಿಕೆಗಳನ್ನು ನೀಡುವ ಮೂಲಕ ಇನ್ನಷ್ಟು ಗಟ್ಟಿಗೊಳಿಸುತ್ತಿದ್ದಾರೆ. ಇದೀಗ ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಡಗಿದ್ದಾರೆ.












Click it and Unblock the Notifications