ಯಡಿಯೂರಪ್ಪಗೆ ಹುಟ್ಟುಹಬ್ಬದ ಶುಭಕೋರಿದ ಎಚ್ಡಿಕೆ, ಸಿದ್ದರಾಮಯ್ಯ!
ಬೆಂಗಳೂರು, ಫೆ. 27: ನಮ್ಮ ನಾಡಿದ ರಾಜಕಾರಣಿಗಳಿಗೆ ಒಂದು ಪ್ರಬುದ್ಧತೆಯಿದೆ. ರಾಜಕೀಯವನ್ನು ಹೊರತು ಪಡಿಸಿ ಪಕ್ಷಾತೀತವಾಗಿ ಒಂದೊಳ್ಳೆ ಬಾಂಧವ್ಯವನ್ನು ಹೊಂದಿರುರುತ್ತಾರೆ. ಪ್ರತಿ ದಿನ ಒಂದಿಲ್ಲೊಂದು ರಾಜಕೀಯ ಹೇಳಿಕೆಯನ್ನು ಕೊಡುವ, ಆರೋಪ ಪ್ರತ್ಯಾರೋಪಗಳನ್ನು ಮಾಡುವ ನಮ್ಮ ನಾಡಿದ ನಾಯಕರು ಕಷ್ಟ ಹಾಗೂ ಸಂತಸದ ಸಂದರ್ಭದಲ್ಲಿ ಒಬ್ಬರಿಗೊಬ್ಬರು ಸಾತ್ ಕೊಡುತ್ತಾರೆ.
ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯನವರ ಪುತ್ರ ಅಕಾಲಿಕವಾಗಿ ನಿಧನರಾದಾಗ ರಾಜ್ಯದ ಎಲ್ಲ ರಾಜಕೀಯ ನಾಯಕರು ಅವರ ಕಷ್ಟದಲ್ಲಿ ಭಾಗಿಯಾಗಿದ್ದರು. ಕಳೆದ ವರ್ಷ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದರು. ಸಿದ್ದರಾಮಯ್ಯ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾಗ ಯಡಿಯೂರಪ್ಪ, ಈಶ್ವರಪ್ಪ ಸೇರಿದಂತೆ ಪಕ್ಷಬೇಧ ಬಿಟ್ಟು ಎಲ್ಲ ನಾಯಕರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದರು.
ಇಂತಹ ಪ್ರಸಂಗಗಳನ್ನು ಬೇರೆಲ್ಲೂ ಕಾಣುವುದು ಸಾಧ್ಯವಿಲ್ಲ ಎಂಬಷ್ಟರ ಮಟ್ಟಿಗೆ ನಮ್ಮ ನಾಡಿದ ನಾಯಕರು ಆದರ್ಶಪ್ರಾಯರು. ಹೀಗಾಗಿ ಬೇರೆ ರಾಜ್ಯಗಳಂತೆ ಇಲ್ಲಿ ರಾಜಕೀಯ ಜಿದ್ದಾಜಿದ್ದು ರಾಜಕಾರಣಕ್ಕೆ ಮಾತ್ರ ಸೀಮಿತವಾಗಿರುತ್ತದೆ ಎಂದರೂ ತಪ್ಪಿಲ್ಲ. ಇದೀಗ ಯಡಿಯೂರಪ್ಪ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಮತ್ತೊಮ್ಮೆ ಅಂತಹ ಪ್ರಸಂಗ ಕಾಣಲು ಸಿಕ್ಕಿದೆ.
ಬಿಎಸ್ವೈ ಜನ್ಮದಿನ
79ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ನಾಡಿನ ಜನರು ಅವರಿಗೆ ಶುಭಾಶಯ ಕೋರಿದ್ದಾರೆ. ಸಿಎಂ ಯಡಿಯೂರಪ್ಪ ಅವರು ಕುಟುಂಬಸ್ಥರೊಂದಿಗೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಜೊತೆಗೆ ಬಿಜೆಪಿಯ ಬ ಹುತೇಕ ನಾಯಕರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಹುಟ್ಟುಹಬ್ಬ ಶುಭಾಶಯ ತಿಳಿಸಿದ್ದಾರೆ. ಅದರಲ್ಲೇನೂ ವಿಶೇಷವಿಲ್ಲ. ಆದರೆ ವಿಪಕ್ಷಗಳ ನಾಯಕರೂ ಕೂಡ ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಆಮೂಲಕ ಮತ್ತೊಮ್ಮೆ ಇಡೀ ದೇಶದ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ.
ಬಿಎಸ್ವೈಗೆ ಶುಭ ಕೋರಿದ ಎಚ್ಡಿಕೆ
ಸಮಯ ಸಿಕ್ಕಾಗೆಲ್ಲ ಸಿಎಂ ಯಡಿಯೂರಪ್ಪ ಅವರ ಮೇಲೆ ವಾಗ್ದಾಳಿ ನಡೆಸುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಇಂದು ಆತ್ಮೀಯವಾಗಿ ಹುಟ್ಟುಹಬ್ಬದ ಶುಭಾಶಯಗಳನ್ನು ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ, ರಾಜಕೀಯ ಮುತ್ಸದ್ಧಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ರಾಜ್ಯದ ಜನರ, ರೈತ ಬಂಧುಗಳ, ದುರ್ಬಲರ ಆಶೋತ್ತರಗಳಿಗಾಗಿ ದುಡಿಯಲು ಭಗವಂತ ತಮಗೆ ಎಲ್ಲ ರೀತಿಯ ಶಕ್ತಿ ನೀಡಲಿ, ಆಯುರಾರೋಗ್ಯ ಕರುಣಿಸಲಿ ಎಂದು ನಾನು ಈ ಸಂದರ್ಭದಲ್ಲಿ ಆಶಿಸುತ್ತೇನೆ ಎಂದಿದ್ದಾರೆ.
ಸಿದ್ದರಾಮಯ್ಯ ಶುಭಹಾರೈಕೆ
ಕಳೆದ ವರ್ಷ ಯಡಿಯೂರಪ್ಪ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಅಭಿನಂದನಾ ಕಾಯರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಪಕ್ ನಾಯಕ ಸಿದ್ದರಾಮಯ್ಯ ಅವರು ಯಡಿಯೂರಪ್ಪ ಅವರನ್ನು ಆತ್ಮೀಯವಾಗಿ ಅಭಿನಂದಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಜನ್ಮದಿನದ ಶುಭಾಶಯಗಳು. ದೀರ್ಘ ಆಯಸ್ಸು-ಆರೋಗ್ಯದ ಭಾಗ್ಯ ತಮ್ಮದಾಗಲಿ ಎಂದು ಹಾರೈಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.
ರಾಧಾಕೃಷ್ಣ ದೇವಸ್ಥಾನಕ್ಕೆ ಭೇಟಿ
ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರಿನ ಸಂಜಯನಗರದ ರಾಧಾಕೃಷ್ಣ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಜೊತೆಗೆ ಬಿ.ಬಿ.ಎಂ.ಪಿ ವತಿಯಿಂದ ವಿಂಡ್ಸರ್ ಮ್ಯಾನರ್ ವೃತ್ತದಲ್ಲಿ ಅಭಿವೃದ್ಧಿಪಡಿಸಿರುವ ಮೇಕ್ ಇನ್ ಇಂಡಿಯಾ ಲಾಂಛನವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಲೋಕಾರ್ಪಣೆ ಮಾಡಿದರು.