ಕಾಂಗ್ರೆಸ್ನ ಅತೃಪ್ತ ಶಾಸಕರ ಮನವೊಲಿಸಲು ಮುಂದಾದ ಕುಮಾರಸ್ವಾಮಿ
Recommended Video

ಬೆಂಗಳೂರು, ಮಾರ್ಚ್ 6: ಕಾಂಗ್ರೆಸ್ನ ಅತೃಪ್ತ ಶಾಸಕ ಮನವೊಲಿಸಲು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿಯವರೇ ಖುದ್ದಾಗಿ ಅಖಾಡಕ್ಕಿಳಿದಿದ್ದಾರೆ.
ಈಗಾಗಲೇ ಕಾಂಗ್ರೆಸ್ ನ ಚಿಂಚೋಳಿ ಶಾಸಕ ಡಾ. ಉಮೇಶ್ ಜಾಧವ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿಯವರ ಉಪಸ್ಥಿತಿಯಲ್ಲಿ ಬಿಜೆಪಿಗೆ ಸೇರಲಿದ್ದಾರೆ.
ಇಷ್ಟು ದಿನ ಇದು ಕಾಂಗ್ರೆಸ್ನ ಒಳ ಮುನಿಸು ನಾವ್ಯಾಕೆ ತಲೆ ಕೆಡಿಸಿಕೊಳ್ಳಬೇಕು ಎಂದು ಸುಮ್ಮನಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಇದೀಗ ಸರ್ಕಾರವನ್ನು ಉಳಿಸಿಕೊಳ್ಳಲು ಅತೃಪ್ತ ಶಾಸಕರ ಮನವೊಲಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ.

ಉಮೇಶ್ ಜಾಧವ್ ರಾಜೀನಾಮೆ ಬಳಿಕ ಇನ್ನುಳಿದ ಕಾಂಗ್ರೆಸ್ನ ಅತೃಪ್ತ ಶಾಸಕರು ಸಭೆ ನಡೆಸಿದ್ದರು. ಇದರಿಂದ ಕಾಂಗ್ರೆಸ್ಗೆ ನಡುಕ ಶುರುವಾಗಿತ್ತು. ರಮೇಶ್ ಜಾರಕಿಹೊಳಿ, ನಾಗೇಂದ್ರ ಮಹೇಶ್ ಕುಮಟಳ್ಳಿ ಸಭೆ ನಡೆಸಿದ್ದರು. ಇವರೆಲ್ಲರೂ ಕಾಂಗ್ರೆಸ್ ಬಿಟ್ಟು ಹೋದರೆ ಸರ್ಕಾರವನ್ನು ಉಳಿಸಿಕೊಳ್ಳುವುದು ಹೇಗೆ ಎನ್ನುವ ಆತಂಕ ಆರಂಭವಾಗಿತ್ತು.
ಆದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನಿತರೆ ಕಾಂಗ್ರೆಸ್ ನಾಯಕರು ಎಷ್ಟೇ ಮನವೊಲಿಸಲು ಪ್ರಯತ್ನಿಸಿದರೂ ರಮೇಶ್ ಜಾರಕಿಹೊಳಿ ಮತ್ತಿತರರು ಅವರ ಮಾತುಗಳನ್ನು ಒಪ್ಪಲು ಸಿದ್ಧರಿರಲಿಲ್ಲ.
ಇದೀಗ ಕೊನೆಯ ಹಂತದ ಪ್ರಯತ್ನವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಖಾಡಕ್ಕಿಳಿದಿದ್ದು, ಇವರ ಮಾತನ್ನು ಶಾಸಕರು ಕೇಳಿ ಕಾಂಗ್ರೆಸ್ನಲ್ಲಿಯೇ ಮುಂದುವರೆಯಲು ಒಪ್ಪಿಕೊಳ್ಳುತ್ತಾರೆಯೇ ಎನ್ನುವುದನ್ನು ಕಾದು ನೋಡಬೇಕಿದೆ.












Click it and Unblock the Notifications