ಬೆಂಗಳೂರು: ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಪಡೆಯಲು ಎರಡೇ ಅವಕಾಶ
ಬೆಂಗಳೂರು, ಜನವರಿ 20: ಕೊರೊನಾ ಲಸಿಕೆ ಹಾಕಿಸಿಕೊಳ್ಳುವುದಕ್ಕೆ ಮುಂದಾಗದ ಆರೋಗ್ಯ ಕಾರ್ಯಕರ್ತರಿಗೆ ಎರಡು ಬಾರಿ ಮಾತ್ರ ಅವಕಾಶ ನೀಡುವುದಾಗಿ ಬಿಬಿಎಂಪಿ ಆಯುಕ್ತ ಎನ್ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.
ಜನವರಿ 16 ರಿಂದ ಜನವರಿ 18ರವರೆಗೆ 25 ಸಾವಿರಕ್ಕೂ ಅಧಿಕ ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿತ್ತು. ಅವರಿಗೆ ಫೋನ್ ಮೂಲಕ ಹಾಗೂ ಮೆಸೇಜ್ ಮೂಲಕ ಮಾಹಿತಿ ನೀಡಲಾಗಿತ್ತು.
ಭಾರತದಿಂದ ಆರು ದೇಶಗಳಿಗೆ ಕೋವಿಡ್ ಲಸಿಕೆ ಪೂರೈಕೆ
ಆದರೆ, ಸಾಕಷ್ಟು ಆರೋಗ್ಯ ಕಾರ್ಯಕರ್ತರು ಲಸಿಕೆ ಹಾಕಿಸಿಕೊಳ್ಳದೆ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದಾರೆ.ಮೊದಲ ಬಾರಿ ಕೊರೊನಾ ಲಸಿಕೆ ಹಾಕಿಸಿಕೊಳ್ಳುವ ಅವಕಾಶ ಕಳೆದುಕೊಂಡವರಿಗೆ ಎರಡನೇ ಅವಕಾಶ ನೀಡಲಾಗುವುದು ಎಂದು ಅವರು ಹೇಳಿದರು.
ಕೊರೊನಾ ಲಸಿಕೆ ಹಾಕಿಸಿಕೊಳ್ಳಲೇಬೇಕು ಎಂಬ ಒತ್ತಡವನ್ನೂ ಯಾರಿಗೂ ಹಾಕುವುದಿಲ್ಲ, ಪದೇ ಪದೇ ಅವಕಾಶ ನೀಡುವುದಿಲ್ಲ, ಎರಡನೇ ಹಂತದಲ್ಲಿ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗೆ ಲಸಿಕೆ ಕೊಡಲು ಬೇಕಾದ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿ ಕೊರೊನಾ ಲಸಿಕೆ ಪಡೆದುಕೊಳ್ಳದಿದ್ದರೆ ಆ ಲಸಿಕೆಗಳು ಮುಂದಿನ ಹಂತದವರಿಗೆ ವರ್ಗಾವಣೆಯಾಗಲಿದೆ. ಒಂದು ವಾರ ಆರೋಗ್ಯ ಸಿಬ್ಬಂದಿಗೆ ಲಸಿಕೆ ಹಾಕಿಕೊಳ್ಳುವುದಕ್ಕೆ ಯೋಜನೆ ರೂಪಿಸಲಾಗಿತ್ತು. ಅದನ್ನು ಎರಡನೇ ವಾರಕ್ಕೆ ವಿಸ್ತರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮಂಗಳವಾರ 96 ಆರೋಗ್ಯ ಕೇಂದ್ರಗಳಲ್ಲಿ 3978 ಆರೋಗ್ಯ ಕೇಂದ್ರದ ಸಿಬ್ಬಂದಿಗೆ ಲಸಿಕೆ ನೀಡಲಾಗಿದೆ.
Recommended Video