Breaking; ಬೆಂಗಳೂರಲ್ಲಿ ಧಾರಾಕಾರ ಮಳೆ, ಜನರ ಪರದಾಟ
ಬೆಂಗಳೂರು, ಜೂನ್ 16; ಬೆಂಗಳೂರು ನಗರದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ವಿವಿಧ ಪ್ರದೇಶಗಳಲ್ಲಿ ಮಳೆ ನೀರು ರಸ್ತೆಯಲ್ಲಿ ನಿಂತಿದ್ದು, ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.
ಗುರುವಾರ ರಾತ್ರಿ 9.30ರ ಸುಮಾರಿಗೆ ನಗರದ ವಿವಿಧ ಬಡಾವಣೆಗಳಲ್ಲಿ ಮಳೆ ಆರಂಭವಾಗಿದೆ. ಮಳೆಯ ಜೊತೆ ಜೋರಾಗಿ ಗಾಳಿ ಬೀಸುತ್ತಿದ್ದು, ಕಚೇರಿಯಿಂದ ಮನೆಗೆ ಹೊರಟ ಜನರು ಮಳೆಯಲ್ಲಿ ಸಿಲುಕಿದ್ದಾರೆ.
ಜಯನಗರ, ಮೆಜೆಸ್ಟಿಕ್, ಬನಶಂಕರಿ, ಮಲ್ಲೇಶ್ವರ, ಹನುಮಂತನಗರ, ವಿದ್ಯಾಪೀಠ, ವಿಜಯನಗರ, ಕೆ. ಆರ್. ಮಾರ್ಕೆಟ್, ಶಾಂತಿನಗರ, ಸಂಪಗಿರಾಮನಗರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಮಳೆಯಿಂದ ಆಶ್ರಯ ಪಡೆಯಲು ಜನರು ಫ್ಲೈ ಓವರ್, ಮೆಟ್ರೋ ಸ್ಟೇಷನ್ಗಳಲ್ಲೇ ನಿಂತಿದ್ದಾರೆ.

ನೈಋತ್ಯ ಮುಂಗಾರು ಆರಂಭಗೊಂಡರೂ ಜೂನ್ 15ರ ತನಕ ಕರ್ನಾಟಕದಲ್ಲಿ ಮಳೆ ಅಬ್ಬರಿಸಿಲ್ಲ. ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಜೂನ್ 19ರ ತನಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿತ್ತು.
ಗುರುವಾರ ಮಧ್ಯಾಹ್ನ 2 ಗಂಟೆಯಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ರಾತ್ರಿ ಮಳೆ ಆರಂಭವಾಗಿದೆ. ಸುಮಾರು ಒಂದು ಗಂಟೆಗಳ ಕಾಲ ನಗರದಲ್ಲಿ ಮಳೆಯಾಗಿದ್ದು, ತಾಪಮಾನ 23 ಡಿಗ್ರಿ ಸೆಲ್ಸಿಯಸ್ಗೆ ಕುಸಿದಿದೆ.
ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣವಾಗಿ ಎರಡು ದಿನ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ಪ್ರಾಕೃತಿಕ ವಿಕೋಪ ಉಸ್ತುವಾರಿ ಕೇಂದ್ರವು (ಕೆಎಸ್ಎನ್ಎಂಡಿಸಿ) ಜೂನ್ 15ರಂದು ಹೇಳಿತ್ತು.
ಬುಧವಾರದಿಂದ ಎರಡು ದಿನಗಳ ತನಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿತ್ತು. ಮಲೆನಾಡು, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಹ ಮಳೆಯಾಗಲಿದೆ ಎಂದು ಕೆಎಸ್ಎನ್ಎಂಡಿಸಿ ವರದಿ ತಿಳಿಸಿತ್ತು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿಯೂ ಮಳೆ ಮುನ್ಸೂಚನೆ ನೀಡಲಾಗಿತ್ತು. ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿತ್ತು.












Click it and Unblock the Notifications