ಬೆಂಗಳೂರು ಸೆಂಟ್ರಲ್ ಟಿಕೆಟ್ಗೆ ನಾಲ್ಕು ಕಾಂಗ್ರೆಸ್ ನಾಯಕರ ಪೈಪೋಟಿ!
ಬೆಂಗಳೂರು, ಜನವರಿ 23 : 2019ರ ಲೋಕಸಭಾ ಚುನಾವಣೆ ಟಿಕೆಟ್ಗಾಗಿ ಕಾಂಗ್ರೆಸ್ನಲ್ಲಿ ಲಾಬಿ ಆರಂಭವಾಗಿದೆ. ಅದರಲ್ಲೂ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಟಿಕೆಟ್ಗಾಗಿ ನಾಲ್ವರು ನಾಯಕರು ಪ್ರಯತ್ನ ನಡೆಸುತ್ತಿದ್ದಾರೆ.
8 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರ. ಐವರು ಕಾಂಗ್ರೆಸ್ ಶಾಸರು, ಮೂರು ಬಿಜೆಪಿ ಶಾಸಕರು ಕ್ಷೇತ್ರದ ವ್ಯಾಪ್ತಿಯಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳು ಕ್ಷೇತ್ರದಲ್ಲಿ ಸುಲಭವಾಗಿ ಗೆಲುವು ಸಾಧಿಸಬಹುದು ಎಂಬುದು ಲೆಕ್ಕಾಚಾರವಾಗಿದೆ.
ಪ್ರಕಾಶ್ ರಾಜ್ ಸ್ಪರ್ಧೆ : ಬೆಂಗಳೂರು ಸೆಂಟ್ರಲ್ನ ರಾಜಕೀಯ ಚಿತ್ರಣ
ಆದ್ದರಿಂದ, ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಟಿಕೆಟ್ ಮೇಲೆ ಕಾಂಗ್ರೆಸ್ ನಾಯಕರು ಕಣ್ಣಿಟ್ಟಿದ್ದಾರೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರೆ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಸುಲಭ ಎಂಬುದು ಕಾಂಗ್ರೆಸ್ನ ತಂತ್ರ. ಯಾರಿಗೆ ಟಿಕೆಟ್ ಸಿಗಲಿದೆ? ಎಂದು ಕಾದು ನೋಡಬೇಕಿದೆ.
ಪ್ರಕಾಶ್ ರಾಜ್ ಜತೆಗೆ ಒನ್ ಇಂಡಿಯಾ ಕನ್ನಡ ಎಕ್ಸ್ ಕ್ಲೂಸಿವ್ ಸಂದರ್ಶನ
ಬೆಂಗಳೂರು ಸೆಂಟ್ರಲ್ ಕ್ಷೇತ್ರ ಪ್ರಸ್ತುತ ಬಿಜೆಪಿಯ ವಶದಲ್ಲಿದೆ. ಪಿ.ಸಿ.ಮೋಹನ್ ಅವರು ಎರಡು ಬಾರಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಬಾರಿಯೂ ಅವರಿಗೆ ಟಿಕೆಟ್ ಖಚಿತವಾಗಿದೆ. ಮತ್ತೊಂದು ಕಡೆ ನಟ, ನಿರ್ದೇಶಕ ಪ್ರಕಾಶ್ ರಾಜ್ ಅವರು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ.
ಮೋದಿ ಏನು ನನ್ನ ದೊಡ್ಡಪ್ಪನ ಮಗನಾ? : ಪ್ರಕಾಶ್ ರಾಜ್ ಸಂದರ್ಶನ
ಬಿ.ಕೆ.ಹರಿಪ್ರಸಾದ್
ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಟಿಕೆಟ್ಗಾಗಿ ಪ್ರಯತ್ನ ನಡೆಸಿದ್ದಾರೆ. ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹಮದ್ ಪಟೇಲ್ ಅವರ ಮೂಲಕ ಟಿಕೆಟ್ಗಾಗಿ ಲಾಬಿ ನಡೆಸಿದ್ದಾರೆ. ಹರಿಪ್ರಸಾದ್ ಅವರು ಗುಜರಾತ್ ವಿಧಾನಸಭೆ ಚುನಾವಣೆ ಸಮಯದಲ್ಲಿ ರಾಜ್ಯ ಉಸ್ತುವಾರಿಯಾಗಿದ್ದರು. ಹೈಕಮಾಂಡ್ ಮಟ್ಟದಲ್ಲಿಯೂ ಉತ್ತಮ ಪ್ರಭಾವವನ್ನು ಹೊಂದಿರುವ ಅವರಿಗೆ ಟಿಕೆಟ್ ಸಿಗುವ ನಿರೀಕ್ಷೆ ಇದೆ.
ರಿಜ್ವಾನ್ ಅರ್ಷದ್ ಪ್ರಯತ್ನ
ವಿಧಾನ ಪರಿಷತ್ ಸದಸ್ಯ ರಿಜ್ವಾನ್ ಅರ್ಷದ್ ಅವರು ಟಿಕೆಟ್ಗಾಗಿ ಪೈಪೋಟಿ ನಡೆಸುತ್ತಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿಯೂ ಅವರು ಅಭ್ಯರ್ಥಿಯಾಗಿದ್ದರು. 419630 ಮತಗಳನ್ನು ಪಡೆದು ಅವರು ಸೋಲು ಅನುಭವಿಸಿದ್ದರು. ಸಚಿವ ಕೃಷ್ಣಬೈರೇಗೌಡ ಅವರ ಮೂಲಕ ಟಿಕೆಟ್ ಪಡೆಯಲು ಅವರು ಪ್ರಯತ್ನ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ರಿಜ್ವಾನ್ ಅವರಿಗೆ ಟಿಕೆಟ್ ನೀಡಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ ಎಂಬುದು ಪಕ್ಷದೊಳಗಿನ ಸುದ್ದಿ.
ಶಾಸಕ ರೋಷನ್ ಬೇಗ್ ಲಾಬಿ
ಶಿವಾಜಿನಗರ ಕ್ಷೇತ್ರದ ಶಾಸಕ ರೋಷನ್ ಬೇಗ್ ಅವರು ಸಹ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ರಾಜ್ಯಸಭಾ ಸದಸ್ಯ ಗುಲಾಂನಬಿ ಆಜಾದ್ ಅವರ ಮೂಲಕ ಟಿಕೆಟ್ ಪಡೆಯಲು ಪ್ರಯತ್ನ ನಡೆಸಿದ್ದಾರೆ. ಆದರೆ, ಸಚಿವ ಜಮೀರ್ ಅಮಹದ್ ಖಾನ್ ಅವರು ರೋಷನ್ ಬೇಗ್ ಅವರಿಗೆ ಟಕೆಟ್ ನೀಡಲು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಎಚ್.ಟಿ.ಸಾಂಗ್ಲಿಯಾನ ಪೈಪೋಟಿ
ಮತ್ತೊಂದು ಕಡೆ ನಿವೃತ್ತ ಪೊಲೀಸ್ ಅಧಿಕಾರಿ ಎಚ್.ಟಿ.ಸಾಂಗ್ಲಿಯಾನ ಅವರು ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಟಿಕೆಟ್ಗಾಗಿ ಪೈಪೋಟಿ ನಡೆಸಿದ್ದಾರೆ. 2009ರ ಚುನಾವಣೆಯಲ್ಲಿ ಅವರು ಕ್ಷೇತ್ರದಿಂದ ಸ್ಪರ್ಧಿಸಿದ್ದರು. 304944 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು.
ಪ್ರಕಾಶ್ ರಾಜ್ ಸ್ಪರ್ಧೆ
ಬೆಂಗಳೂರು ಸೆಂಟ್ರಲ್ ಕ್ಷೇತ್ರಕ್ಕೆ ಇದು 3ನೇಯ ಚುನಾವಣೆ. ರಾಜಾಜಿನಗರ, ಶಿವಾಜಿನಗರ, ಚಾಮರಾಜಪೇಟೆ, ಶಾಂತಿ ನಗರ, ಮಹದೇವಪುರ, ಗಾಂಧಿ ನಗರ, ಸರ್ವಜ್ಞ ನಗರ, ಸಿ.ವಿ.ರಾಮನ್ ನಗರ ವಿಧಾನಸಭಾ ಕ್ಷೇತ್ರಗಳನ್ನು ಸೇರಿಸಿ 2009ರಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರವನ್ನು ರಚಿಸಲಾಯಿತು.
ಈ ಬಾರಿಯ ಚುನಾವಣೆಯಲ್ಲಿ ನಟ, ನಿರ್ದೇಶಕ, ನಿರ್ಮಾಪಕ ಪ್ರಕಾಶ್ ರಾಜ್ ಅವರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ. ಕಳೆದ ಎರಡು ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಗೆಲುವು ಸಾಧಿಸಿದ್ದಾರೆ.