ಶ್ರೀಲಂಕಾ ದಾಳಿ ಎಫೆಕ್ಟ್: ಬೆಂಗಳೂರಿನ ಜನನಿಬಿಡ ಪ್ರದೇಶಗಳಲ್ಲಿ ಕಟ್ಟೆಚ್ಚರ
ಬೆಂಗಳೂರು, ಮೇ 04: ಬೆಂಗಳೂರಿನ ಜನನಿಬಿಡ ಪ್ರದೇಶಗಳಲ್ಲಿ ಬಾಂಬ್ ದಾಳಿ ನಡೆಸುವ ಬೆದರಿಕೆ ಕರೆಗಳು ಬಂದಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುನಿಲ್ ಕುಮಾರ್ ಹೇಳಿದ್ದಾರೆ.
ಇತ್ತೀಚೆಗಷ್ಟೇ ಬೆಂಗಳೂರಿನ ಪೊಲೀಸ್ ಕಂಟ್ರೋಲ್ ರೂಮಿಗೆ ಬೆದರಿಕೆ ಕರೆಗಳು ಬಂದಿದ್ದವು. ಈ ಕರೆಯನ್ನು ಆಧರಿಸಿ ನೆರೆಯ ಎಂಟು ರಾಜ್ಯಗಳಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್ ರಾಜು ಅವರು ಪತ್ರ ಬರೆದಿದ್ದರು.
ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ತೆಲಂಗಾಣ, ಪುದುಚೇರಿ, ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕದ ಪ್ರಮುಖ, ಜನನಿಬಿಡ ಪ್ರದೇಶಗಳಲ್ಲಿ ದಾಳಿಯಾಗಬಹುದು ಎಂಬ ಮಾಹಿತಿಯ ಮೇರೆಗೆ ಕಟ್ಟೆಚ್ಚರ ವಹಿಸಲಾಗಿತ್ತು. ಇದೀಗ ಬೆಂಗಳೂರಿನ ಜನನಿಬಿಡ ಪ್ರದೇಶಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಟಿ ಸುನೀಲ್ ಕುಮಾರ್ ಹೇಳಿದ್ದಾರೆ.

ಏಪ್ರಿಲ್ 21 ರಂದು ಸಂಜೆ ಶ್ರೀಲಂಕಾ ರಾಜಧಾನಿ ಕೊಲಂಬೋ ಬಳಿ ಎಂಟು ಕಡೆ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಈ ದಾಳಿಯಲ್ಲಿ 250 ಕ್ಕೂ ಹೆಚ್ಚು ಜನ ಮೃತರಾಗಿದ್ದರೆ, 500 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಮೊದಲಿಗೆ ಮೃತರ ಸಂಖ್ಯೆ 350 ಎನ್ನಲಾಗಿತ್ತು. ಆದರೆ ನಂತರ ಶ್ರೀಲಂಕಾ ಸರ್ಕಾರ ನಿಖರ ಸಂಖ್ಯೆಯನ್ನು ನೀಡಿತ್ತು. ಅದಾಗಿ ಒಂದು ವಾರದ ನಂತರ ಉಗ್ರರ ನೆಲೆಗೇ ತೆರಳಿ ಶ್ರೀಲಂಕಾ 15 ಜನರನ್ನು ಕೊಂದು ಹಾಕಿತ್ತು.












Click it and Unblock the Notifications