ಉಪಸಮರ ಫಲಿತಾಂಶದ ಬಳಿಕ ಕಾಂಗ್ರೆಸ್ ನಲ್ಲಿ ಎಲ್ಲವೂ 'ಹಸ್ತ'ವ್ಯಸ್ತ
ದೆಹಲಿ, ಡಿಸೆಂಬರ್.10: ರಾಜ್ಯದಲ್ಲಿ ನಡೆದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಭಾರತೀಯ ಜನತಾ ಪಕ್ಷಕ್ಕೆ ವರವಾಗಿದೆ. ಆದರೆ, ಅದೇ ಫಲಿತಾಂಶ ಕಾಂಗ್ರೆಸ್ ಪಾಳಯಕ್ಕೆ ಶಾಪವಾಗಿ ಬಿಟ್ಟಿದೆ. ರಾಜ್ಯ ಕಾಂಗ್ರೆಸ್ ನಲ್ಲಿ ಘಟಾನುಘಟಿ ನಾಯಕರೇ ರಾಜೀನಾಮೆ ನೀಡುತ್ತಿದ್ದಾರೆ.
ಉಪ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ರಾಜೀನಾಮೆ ಪರ್ವ ಶುರುವಾಗಿದೆ. ಸಮನ್ವಯ ಸಮಿತಿ ಮುಖ್ಯಸ್ಥ ಹಾಗೂ ವಿರೋಧ ಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಕೂಡಾ ರಾಜೀನಾಮೆ ಸಲ್ಲಿಸಿ ಆಗಿದೆ.
ಸಿದ್ದರಾಮಯ್ಯ ಮತ್ತು ಗುಂಡುರಾವ್ ರಾಜೀನಾಮೆ ನೀಡಲು ಇವರೇ ಕಾರಣ
ಈ ರಾಜಕೀಯ ಬೆಳವಣಿಗೆ ಮಧ್ಯೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಈಶ್ವರ ಖಂಡ್ರೆ ಕೂಡಾ ರಾಜೀನಾಮೆ ನೀಡುತ್ತಾರೆ ಎನ್ನಲಾಗಿತ್ತು. ಇದೆಲ್ಲ ಒಂದು ಕಥೆಯಾದರೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿಯನ್ನೇ ಬದಲಾಯಿಸುವ ವಿಚಾರ ಇದೀಗ ಸಾಕಷ್ಟು ಸದ್ದು ಮಾಡುತ್ತಿದೆ.
ರಾಜ್ಯ ಉಸ್ತುವಾರಿ ಬದಲಾವಣೆಗೆ ಹಿರಿಯರ ಶಿಫಾರಸು
ಉಪ ಚುನಾವಣೆ ಫಲಿತಾಂಶದ ಪ್ರಭಾವ ರಾಜ್ಯ ನಾಯಕರಷ್ಟೇ ಅಲ್ಲ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಮೇಲೆಯೂ ಬೀರುವ ಸಾಧ್ಯತೆಗಳು ಎದ್ದು ಕಾಣುತ್ತಿವೆ. ನಿರಂತರ ವೈಫಲ್ಯ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಶೀಘ್ರವೇ ರಾಜ್ಯ ಉಸ್ತುವಾರಿ ಬದಲಾವಣೆಗೆ ಕಾಂಗ್ರೆಸ್ ಹಿರಿಯ ನಾಯಕರು ಹೈಕಮಾಂಡ್ ಗೆ ಶಿಫಾರಸು ಮಾಡಿದ್ದಾರೆ. ಅಲ್ಲದೇ, ಹಿರಿಯ ನಾಯಕರ ಸಲಹೆಗೆ ಹೈಕಮಾಂಡ್ ಕೂಡಾ ಸಹಮತ ವ್ಯಕ್ತಪಡಿಸಿದೆ ಎಂದು ತಿಳಿದು ಬಂದಿದೆ.
ರಾಜ್ಯ ಉಸ್ತುವಾರಿ ಬದಲಾವಣೆಗೆ ಏನು ಕಾರಣ?
ರಾಜ್ಯದಲ್ಲಿ ನಡೆಸಿದ ಮೂರು ಪ್ರಯೋಗಗಳಲ್ಲೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ವಿಫಲವಾಗಿದ್ದಾರೆ. ಆಡಳಿತಾರೂಢ ಮೈತ್ರಿ ಸರ್ಕಾರವನ್ನು ಉಳಿಸುವಲ್ಲಿ ಸೋತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹೀನಾಯವಾಗಿ ಸೋತಿದೆ. ಅದರ ಜೊತೆಗೆ ಈಗ ಉಪ ಚುನಾವಣೆಯಲ್ಲೂ ನಿರೀಕ್ಷಿತ ಸ್ಥಾನ ತಂದು ಕೊಡುವಲ್ಲಿ ಕೆ.ಸಿ.ವೇಣುಗೋಪಾಲ್ ಫೇಲ್ ಆಗಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬದಾವಣೆ ಮಾಡುವಂತೆ ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ಎದುರು ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯ ರಾಜೀನಾಮೆ ಹಿಂದಿರುವ ರಾಜಕೀಯ ಲೆಕ್ಕಾಚಾರಗಳೇನು?
ಹೈಕಮಾಂಡ್ ನಾಯಕರ ನಿರ್ಧಾರದ ಮೇಲೆ ಕಣ್ಣು
ಇನ್ನು, ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ವಿರುದ್ಧ ಹೈಕಮಾಂಡ್ ಗೆ ದೂರು ನೀಡಿರುವ ಹಿರಿಯ ನಾಯಕರು ಸಾಲು ಸಾಲು ಆರೋಪಗಳನ್ನು ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್ ನ ಎಲ್ಲ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದಿಲ್ಲ. ಯಾವುದೇ ನಿರ್ಧಾರ ತೆಗೆದುಕೊಳ್ಳುವಾಗಲೂ ಎಲ್ಲ ಸದಸ್ಯರ ಜೊತೆ ಚರ್ಚೆ ನಡೆಸುವುದಿಲ್ಲ. ಬದಲಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತಿನಂತೆ ಕೆ.ಸಿ.ವೇಣುಗೋಪಾಲ್ ತೀರ್ಮಾನ ತೆಗದುಕೊಳ್ಳುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ರಾಜ್ಯ ರಾಜಕಾರಣಕ್ಕೆ ವೇಣುಗೋಪಾಲ್ ವಾಪಸ್?
ಕೆಪಿಸಿಸಿ ಹಿರಿಯ ನಾಯಕರು ನೀಡಿರುವ ದೂರಿನ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. ರಾಜ್ಯದಲ್ಲಿ ಪಕ್ಷ ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆ ದೃಷ್ಟಿಯಿಂದ ರಾಜ್ಯ ಉಸ್ತುವಾರಿ ಬದಲಾವಣೆಗೂ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ ಎಂದು ಹೇಳಲಾಗುತ್ತಿದೆ. ಕೆ.ಸಿ.ವೇಣುಗೋಪಾಲ್ ರನ್ನು ಮರಳಿ ಕೇರಳದ ರಾಜ್ಯ ರಾಜಕಾರಣಕ್ಕೆ ಕಳುಹಿಸುವ ಬಗ್ಗೆ ಹೈಕಮಾಂಡ್ ಚಿಂತನೆ ನಡೆಸಿದೆ. ಮುಂದಿನ ವರ್ಷ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ತಯಾರಿ ಮಾಡಿಕೊಳ್ಳುವಂತೆ ಕೆಸಿವಿಗೆ ಹೈಕಮಾಂಡ್ ಸೂಚನೆ ನೀಡುವ ಸಾಧ್ಯತೆಗಳಿವೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿಗೆ ಆಂಟನಿ ನೇಮಕ?
ಈ ರಾಜಕೀಯ ಬೆಳವಣಿಗೆಗಳ ಮಧ್ಯೆ ಕೇರಳದ ಮತ್ತೊಬ್ಬ ಕಾಂಗ್ರೆಸ್ ಹಿರಿಯ ಮುಖಂಡ ಎ.ಕೆ.ಆಂಟನಿ ಅವರನ್ನು ರಾಜ್ಯ ಉಸ್ತುವಾರಿಯಾಗಿ ನೇಮಿಸುವ ಸಾಧ್ಯತೆಗಳಿವೆ. ಕೆ.ಸಿ.ವೇಣುಗೋಪಾಲ್ ಸ್ಥಾನಕ್ಕೆ ಆಂಟನಿ ನೇಮಕ ಮಾಡಲು ಹೈಕಮಾಂಡ್ ನಲ್ಲಿ ಗಂಭೀರ ಚರ್ಚೆ ನಡೆಯುತ್ತಿದೆ. ಮುಂದಿನ ತಿಂಗಳು ಎಐಸಿಸಿ ಪದಾಧಿಕಾರಿಗಳ ಪುನಾರಚನೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಹತ್ವದ ನಿರ್ಧಾರ ಹೊರಬೀಳುತ್ತದೆ ಎಂಬ ನಿರೀಕ್ಷೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಇದ್ದಾರೆ.