'ಇರೋದು ಎರಡು ಸೀಟ್, ನೂರಾರು ಜನರು ಕೇಳುತ್ತಿದ್ದಾರೆ'
ಬೆಂಗಳೂರು, ಜೂ. 16: ಲಾಕ್ಡೌನ್ ಸಂದರ್ಭದಲ್ಲಿ ವಿಧಾನ ಪರಿಷತ್ ಚುನಾವಣೆ ಎದುರಾಗಿರುವುದು ರಾಜಕೀಯ ಪಕ್ಷಗಳ ನಾಯಕರಿಗೆ ಹೊಸ ಸವಾಲು ತಂದಿದೆ. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಒಬ್ಬರಾದ ಮೇಲೊಬ್ಬರಂತೆ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡಿದ್ದಾರೆ. ಅದೇ ರೀತಿ ಟಿಕೆಟ್ ಆಕಾಂಕ್ಷಿಗಳು ಕೂಡ ಇಡೀ ದಿನ ಡಿಕೆಶಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಂಡಿದ್ದಾರೆ.
ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಫೈನಲ್ ಮಾಡುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಬಳಿಕ ಮಾತನಾಡಿರುವ ಡಿಕೆಶಿ ಅವರು, ಪಕ್ಷದ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತಿದೆ. ನಮಗೆ ಇರೋದೆ ಎರಡು ಸೀಟು, ಪಕ್ಷದಲ್ಲಿ ನೂರಾರು ಜನ ಕೇಳುತ್ತಿದ್ದಾರೆ ಎಂದಿದ್ದಾರೆ.
ನಮ್ಮ ರಾಷ್ಟ್ರೀಯ ನಾಯಕರು ಏನು ತೀರ್ಮಾನ ಮಾಡುತ್ತಾರೊ ಅದು ಅಂತಿಮ. ಆದರೆ ಎಲ್ಲ ಕಾರ್ಯಕರ್ತರ ಹಕ್ಕನ್ನ ನಾವು ತಿಳಿಸಬೇಕು, ನಾವು ಅದನ್ನು ಮಾಡುತ್ತೇವೆ. ಇಲ್ಲಿ ಯಾವುದೂ ನಿರ್ಧಾರ ಆಗುವುದಿಲ್ಲ. ಜೊತೆಗೆ ಕೆಪಿಸಿಸಿ ಅಧ್ಯಕ್ಷನಾಗಿ ಪದಗ್ರಹಣದ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ಕೊಟ್ಟಿದ್ದಾರೆ.

ಬೆಳಗ್ಗೆಯಷ್ಟೇ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ, ಮಾಜಿ ಕೇಂದ್ರ ಸಚಿವ ಎಚ್.ಸಿ. ಮುನಿಯಪ್ಪ, ಎಂ.ಡಿ. ಲಕ್ಷ್ಮೀನಾರಾಯಣ, ಎಚ್.ಎಂ. ರೇವಣ್ಣ ಸೇರಿದಂತೆ ಹಲವು ಆಕಾಂಕ್ಷಿಗಳು ಡಿಕೆಶಿ ಅವರನ್ನು ಭೇಟಿ ಮಾಡಿದ್ದರು.












Click it and Unblock the Notifications