ದ್ವಿತೀಯ ಪಿಯುಸಿ ಪರೀಕ್ಷೆ: ಸರ್ಕಾರದ ಯಡ್ಡ ತೀರ್ಮಾನಕ್ಕೆ ಹೈಕೋರ್ಟ್ ನಲ್ಲಿ ಮುಖಭಂಗ
ಬೆಂಗಳೂರು, ಜೂ. 17: ಕೋವಿಡ್ 19 ಹಿನ್ನೆಲೆಯಲ್ಲಿ ರೆಗ್ಯುಲರ್ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೇ ಪಾಸು. ಪುನರಾವರ್ತಿತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಡ್ಡಾಯ ಪರೀಕ್ಷೆ ಬರೆಯಬೇಕು. ಇಂಥದ್ದೊಂದು ತಾರತಮ್ಯ ನಿರ್ಧಾರ ಪ್ರಕಟಿಸಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ನಲ್ಲಿ ಭಾರೀ ಮುಖಭಂಗವಾಗಿದೆ. ಪುನರಾವರ್ತಿತ ವಿದ್ಯಾರ್ಥಿಗಳ ವಿಚಾರವಾಗಿ ತಜ್ಞರ ಸಮಿತಿ ನ್ಯಾಯ ಸಮ್ಮತ ತೀರ್ಮಾನ ಪ್ರಕಟಿಸುವವರೆಗೂ ರೆಗ್ಯುಲರ್ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಬಾರದು ಎಂದು ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ.
ಪ್ರಥಮ ಪಿಯುಸಿ ಅಂಕ ಪರಿಗಣಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಉತ್ತೀರ್ಣ ಮಾಡುವುದಾಗಿ ಪ್ರಕಟಿಸಿದ್ದ ಪದವಿ ಪೂರ್ವ ಶಿಕ್ಷಣ ಇಲಾಖೆಯ ತೀರ್ಮಾನದ ವಿರುದ್ಧ ಜ್ಞಾನ ಮಂದಿರ ಎಜುಕೇಷನ್ ಟ್ರಸ್ಟ್ ನ ಸಿಂಗ್ರೇಗೌಡ ನ್ಯಾಯಾಲಯದ ಮೆಟ್ಟಿಲೇರಿದ್ದರು. ಒಂದು ಲಕ್ಷ ಪುನರಾವರ್ತಿತ ವಿದ್ಯಾರ್ಥಿಗಳ ಬಗ್ಗೆ ರಾಜ್ಯ ಸರ್ಕಾರ ಪ್ರಕಟಿಸಿದ್ದ ಪರೀಕ್ಷೆ ನಡೆಸುವ ನಿರ್ಧಾರವನ್ನು ಪ್ರಶ್ನಿಸಿದ್ದರು. ಕೊರೊನಾ ನೆಪದಲ್ಲಿ ರೆಗ್ಯುಲರ್ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸು ಮಾಡಲಾಗುತ್ತಿದೆ. ಆದರೆ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಇದು ಅವೈಜ್ಞಾನಿಕ, ಅನ್ಯಾಯಯುತದಿಂದ ಕೂಡಿದೆ. ಸರ್ಕಾರದ ಈ ತಾರತಮ್ಯ ನೀತಿಯಿಂದಾಗಿ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ ಎಂದು ವಾದ ಮಂಡಿಸಲಾಗಿತ್ತು. ಇದಕ್ಕೆ ಆಕ್ಷೇಪಣೆ ಸಲ್ಲಿಸಿದ್ದ ರಾಜ್ಯ ಸರ್ಕಾರ, ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ಬಗ್ಗೆ ತಜ್ಞರ ಸಮಿತಿ ರಚನೆ ಮಾಡಿರುವುದಾಗಿ ಹೇಳಿತ್ತು.
ಶಾಲಾ ಶುಲ್ಕ ವಿವಾದ: ಮಧ್ಯಂತರ ಅರ್ಜಿಯಲ್ಲಿ ಸರ್ಕಾರದ ನಡೆ ಬಯಲು
ಗುರುವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬಿ.ವಿ. ನಾಗರತ್ನ ಹಾಗೂ ಸಂಜೀವಕುಮಾರ್ ಒಳಗೊಂಡ ವಿಭಾಗೀಯ ಪೀಠ, ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿತು. ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ರೆಗ್ಯುಲರ್ ವಿದ್ಯಾರ್ಥಿಗಳನ್ನು ಒಂದೇ ತಕ್ಕಡಿಯಲ್ಲಿ ಹಾಕಿ ತೂಗಬೇಕು. ಪುನರಾವರ್ತಿತ ಹಾಗೂ ಕಡ್ಡಾಯ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿ ಅಂಕಗಳನ್ನು ಪರಿಗಣಿಸಬೇಕು ಎಂದು ನ್ಯಾಯಪೀಠ ಮೌಖಿಕವಾಗಿ ಹೇಳಿದೆ.
ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೊರೆ
ಪುನರಾವರ್ತಿತ ಪಿಯುಸಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸುತ್ತಿರುವ ಬಗ್ಗೆ ಸರ್ಕಾರದ ಪರ ಪ್ರತಿನಿಧಿಸಿದ್ದ ವಕೀಲರು, ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ 12 ಮಂದಿ ತಜ್ಞರುಳ್ಳ ಸಮಿತಿಯನ್ನು ಸರ್ಕಾರ ರಚಿಸಿದೆ. ಸಮಿತಿ ವರದಿ ನೀಡಲಿದ್ದು, ಅಲ್ಲಿಯ ವರೆಗೂ ಕಾಲಾವಕಾಶ ನೀಡುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದ್ದರು. ಪುನರಾವರ್ತಿತ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ಪರೀಕ್ಷೆ ಬರೆದಿದ್ದಾರೆ. ಆದರೆ ಖಾಸಗಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ಪರೀಕ್ಷೆ ಬರೆದಿರುವುದಿಲ್ಲ ಎಂದು ಅಂಕಿ ಅಂಶಗಳ್ನು ಸಹ ನೀಡಿದ್ದರು.
Recommended Video
ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ, ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ನ್ಯಾಯ ಸಮ್ಮತ ತೀರ್ಮಾನ ತೆಗೆದುಕೊಳ್ಳಬೇಕು.ಎಲ್ಲರ ಸಮಸ್ಯೆಯನ್ನು ಪರಿಗಣಿಸಬೇಕು. ಹೀಗಾಗಿ ಪುನರಾವರ್ತಿತ ಹಾಗೂ ಖಾಸಗಿ ವಿದ್ಯಾರ್ಥಿಗಳ ಪಿಯುಸಿ ಪರೀಕ್ಷೆ ಕುರಿತು ನಿರ್ಧಾರ ತೆಗೆದುಕೊಳ್ಳುವ ವರೆಗೂ ಸರ್ಕಾರ ರೆಗ್ಯುಲರ್ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಬಾರದು ಎಂದು ಸೂಚಿಸಿದೆ. ಅರ್ಜಿಯ ವಿಚಾರಣೆಯನ್ನು ಜುಲೈ 05 ಕ್ಕೆ ಮುಂದೂಡಲಾಗಿದೆ.