ಗುರು ರಾಘವೇಂದ್ರ ಬ್ಯಾಂಕ್ ಹಗರಣ: ಆಡಳಿತಾಧಿಕಾರಿ ನೇಮಕಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು, ಅಕ್ಟೋಬರ್ 19: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಪರಿಣತಿ ಹೊಂದಿರುವವರನ್ನೇ ಗುರು ರಾಘವೇಂದ್ರ ಬ್ಯಾಂಕ್ ಆಡಳಿತಾಧಿಕಾರಿಯನ್ನಾಗಿ ನೇಮಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.
ಬಹುಕೋಟಿ ಹಗರಣ ಆರೋಪದಲ್ಲಿ ಸಿಲುಕಿರುವ ಗುರು ರಾಘವೇಂದ್ರ ಬ್ಯಾಂಕ್ನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸುವಂತೆ ಕೋರಿ ಬಸವನಗುಡಿ ನಿವಾಸಿ ಕೆ.ಆರ್. ನರಸಿಂಹಮೂರ್ತಿ ಮತ್ತು ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಪರಿಣತಿ ಹೊಂದಿರುವವರನ್ನೇ ಬ್ಯಾಂಕ್ನ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡುವಂತೆ ನಿರ್ದೇಶಿಸಿತು.
ಗುರು ರಾಘವೇಂದ್ರ ಬ್ಯಾಂಕ್ ವಂಚನೆ: 43.32 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲು
ಸಾಲಗಾರರಿಂದ ಬ್ಯಾಂಕ್ ವಸೂಲಿ ಮಾಡಿರುವ ಹಣವನ್ನು ಠೇವಣಿದಾರರಿಗೆ ಹಿಂದಿರುಗಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಆರ್ಬಿಐ ಇದುವರೆಗೂ ಪರಿಗಣಿಸಿಲ್ಲ. ತುರ್ತು ಪರಿಸ್ಥಿತಿಯನ್ನು ಪರಿಗಣಿಸಿ ಠೇಣಿದಾರರಿಗೆ ಹಣ ಮರಳಿಸಿದರೆ ಕೋವಿಡ್ ಸಂದರ್ಭದಲ್ಲಿ ಅನುಕೂಲವಾಗಲಿದೆ ಎಂದು ಅರ್ಜಿದಾರರ ಪರ ವಕೀಲ ವೆಂಕಟೇಶ್ ದಳವಾಯಿ ಹೇಳಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಆರ್ಬಿಐ ಪರ ವಕೀಲರು, ಠೇವಣಿದಾರರ ಹಣವನ್ನು ಮರಳಿಸುವ ಬಗ್ಗೆ ಕೂಡಲೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಆಡಿಟಿಂಗ್ ಇನ್ನೂ ಮುಕ್ತಾಯಗೊಂಡಿಲ್ಲ. ಹೀಗಾಗಿ ಠೇವಣಿದಾರರ ಹಣ ಹಿಂದಿರುಗಿಸುವ ಕುರಿತು ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ಗುರು ರಾಘವೇಂದ್ರ ಬ್ಯಾಂಕ್ ಅವ್ಯವಹಾರ ಪ್ರಕರಣ: ತನಿಖೆ CIDಗೆ ಹಸ್ತಾಂತರ
Recommended Video
ಹಾಗೆಯೇ, ಬ್ಯಾಂಕ್ ನೀಡಿರುವ 1,400 ಕೋಟಿ ರೂ. ಹಣ ಇದುವರೆಗೂ ವಸೂಲಾಗಿಲ್ಲ. ಹೀಗಾಗಿ ಬ್ಯಾಂಕಿಂಗ್ ಕ್ಷೇತ್ರದ ವ್ಯವಹಾರಗಳ ಬಗ್ಗೆ ಸೂಕ್ತ ತಿಳಿವಳಿಕೆ ಉಳ್ಳ ಸಮರ್ಥರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಬೇಕಾದ ಅಗತ್ಯವಿದೆ ಎಂದು ಹೇಳಿದರು. ಇದನ್ನು ಪರಿಗಣಿಸಿದ ಪೀಠ, ಆರ್ಬಿಐ ಸಲಹೆಯಂತೆ ಸೂಕ್ತ ವ್ಯಕ್ತಿಯನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ ವಿಚಾರಣೆ ಮುಂದೂಡಿತು.