ಶಾಸಕ ರಮೇಶ್ ಜಾರಕಿಹೊಳಿಗೆ ತಾತ್ಕಾಲಿಕ ರಿಲೀಫ್: ಬಂಧನ ಭೀತಿಯಿಂದ ಪಾರು
ಬೆಂಗಳೂರು, ಫೆಬ್ರವರಿ 10: ಸಾಲ ಮರು ಪಾವತಿ ಮಾಡದ ವಿಚಾರಕ್ಕೆ ಸಂಬಂಧಿಸಿದಂತೆ ಸಿಐಡಿಯಿಂದ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಹಾಗಾಗಿ ಸದ್ಯ ಬಂಧನ ಭೀತಿಯಿಂದ ಪಾರಾಗಿದ್ದಾರೆ.
ಮಗನ ಮದುವೆ ಹಿನ್ನೆಲೆಯಲ್ಲಿ ಮುಂದಿನ ವಿಚಾರಣೆವರೆಗೂ ಅವರ ವಿರುದ್ಧ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗದಂತೆ ಸೂಚನೆ ನೀಡಲಾಗಿದೆ.

ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗಾಗಿ ಪಡೆದ ಸಾಲ ಮರುಪಾವತಿ ಮಾಡದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಮುಂದಿನ ವಿಚಾರಣೆವರೆಗೂ ಯಾವುದೇ ಕ್ರಮಕ್ಕೆ ಮುಂದಾಗಬಾರದು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ನಗರದ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ಗೆ 439 ಕೋಟಿ ಸಾಲ ರೂಪಾಯಿಗಳು ಪಾವತಿಸದೇ ವಂಚಿಸಿರುವ ಆರೋಪಕ್ಕೆ ಗುರಿಯಾಗಿರುವ ಸೌಭಾಗ್ಯಲಕ್ಷ್ಮಿ ಶುಗರ್ಸ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮೇಶ್ ಜಾರಕಿಹೊಳಿ ಮತ್ತಿತರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಕೋರ್ಟ್ ಆದೇಶವೇನು?
ಜಾರಕಿಹೊಳಿ ಪರ ವಕೀಲರು, ಫೆಬ್ರವರಿ 26ರಂದು ಅರ್ಜಿದಾರರ ಮಗನ ಮದುವೆ ನಿಶ್ಚಯವಾಗಿದೆ. ಈ ಸಂದರ್ಭದಲ್ಲಿ ತನಿಖಾಧಿಕಾರಿಗಳು ಬಂಧಿಸುವ ಸಾಧ್ಯತೆಯಿದೆ. ಆದ ಹಿನ್ನೆಲೆಯಲ್ಲಿ ರಕ್ಷಣೆ ನೀಡಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.
ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ, ಹಿಂದೂ ಧರ್ಮದ ಸಾಂಪ್ರದಾಯಗಳ ಪ್ರಕಾರ ಮಗನ ಮದುವೆಯಲ್ಲಿ ತಂದೆ ಹಾಜರಿರುವುದು ಅತ್ಯಗತ್ಯವಿರಲಿದೆ. ಆದ ಕಾರಣ ಮುಂದಿನ ವಿಚಾರಣೆಯವರೆಗೂ ಪ್ರಕರಣದ ಮೊದಲ ಅರ್ಜಿದಾರರ(ರಮೇಶ್ ಜಾರಕಿಹೊಳಿ) ವಿರುದ್ಧ ಮುಂದಿನ ವಿಚಾರಣೆಯವರೆಗೂ ಯಾವುದೇ ಕ್ರಮಕ್ಕೆ ಮುಂದಾಗಬಾರದು ಎಂದು ತನಿಖಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.
ಅರ್ಜಿದಾರರು ಅಫೆಕ್ಸ್ ಬ್ಯಾಂಕ್ನಿಂದ ಪಡೆದಿರುವ ಸಾಲ ಮತ್ತು ಅದರ ಕುರಿತು ಮರು ಪಾವತಿ ಮಾಡಿರುವದಕ್ಕೆ ಸಂಬಂಧ ಸಂಪೂರ್ಣ ವಿವರಣೆ ಮುಂದಿನ ವಿಚಾರಣೆ ವೇಳೆ ಸಲ್ಲಿಸುವಂತೆ ಸೂಚನೆ ನೀಡಿದೆ.
ಪ್ರಕರಣದ ಹಿನ್ನೆಲೆ ಏನು?
ಬೆಳಗಾವಿಯ ಗೋಕಾಕದಲ್ಲಿರುವ ಸೌಭಾಗ್ಯ ಲಕ್ಷ್ಮಿ ಶುಗರ್ ಲಿಮಿಟೆಡ್ನಲ್ಲಿ ಯಂತ್ರೋಪಕರಣ ಅಳವಡಿಕೆ, ವಿಸ್ತರಣೆ ಮತ್ತು ನಿರ್ವಹಣೆಗಾಗಿ ಅರ್ಜಿದಾರ/ಆರೋಪಿಗಳು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ ಮತ್ತು ಅದರ ಸಮೂಹದ ಬ್ಯಾಂಕ್ಗಳಲ್ಲಿ ಅವಧಿ ಸಾಲ, ದುಡಿಯುವ ಬಂಡವಾಳದ ರೂಪದಲ್ಲಿ12.07.2013 ರಿಂದ 31.03.2017 ರ ಸಂದರ್ಭದಲ್ಲಿ 232.88ಕೋಟಿ ರೂ.ಗಳನ್ನು ಸಾಲ ಪಡೆದಿದ್ದರು. ಇದು 439.7 ರೂಪಾಯಿಗೆ ಕೋಟಿಗೆ ಏರಿಕೆಯಾಗಿದ್ದರೂ ಅದನ್ನು ಪಾವತಿಸಿರಲಿಲ್ಲ.
ಸಾಲ ಪಡೆಯುವ ಸಂದರ್ಭದಲ್ಲಿ ಶುಗರ್ ಕಂಪೆನಿಯಲ್ಲಿ ಜಾರಕಿಹೊಳಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದು, ವಸಂತ್ ಮತ್ತು ಶಂಕರ್ ಅವರು ನಿರ್ದೇಶಕರಾಗಿದ್ದರು. ಸಾಲ ಇರುವ ಸಂದರ್ಭದಲ್ಲಿ ನಿರ್ದೇಶಕರನ್ನು ಬದಲಿಸುವಂತಿಲ್ಲ ಎಂಬ ಷರತ್ತು ವಿಧಿಸಲಾಗಿತ್ತು. ಆದರೆ, ಆರೋಪಿಗಳು/ ಅರ್ಜಿದಾರರು ಕಂಪೆನಿಯಲ್ಲಿನ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದು, ಅಸಂಬಂಧಿತ ವ್ಯಕ್ತಿಗಳನ್ನು ಆ ಹುದ್ದೆಗಳಿಗೆ ನೇಮಿಸಲಾಗಿದೆ.
ಈ ವಿಚಾರವನ್ನು ತಮ್ಮ ಗಮನಕ್ಕೆ ತಂದಿಲ್ಲ ಎಂದು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರು ಜ. 5ರಂದು ನೀಡಿದ ದೂರಿನ ಅನ್ವಯ ವಿ ವಿ ಪುರಂ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ಗಳಾದ 406, 420 & 34 ಅಡಿ ಪ್ರಕರಣ ದಾಖಲಾಗಿದೆ. ಅರ್ಜಿದಾರರು ಇದನ್ನು ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.












Click it and Unblock the Notifications