ಭಾಷೆ ಮೇಲೆ ಹಿಡಿತವಿರಲಿ: ಈಶ್ವರಪ್ಪ, ಅನಂತ್ ಕುಮಾರ್ ಹೆಗಡೆಗೆ ಹೈಕೋರ್ಟ್ ಎಚ್ಚರಿಕೆ
ಬೆಂಗಳೂರು, ಫೆಬ್ರವರಿ 17: ಅವಹೇಳನಕಾರಿ ಹೇಳಿಕೆ ಸಂಬಂಧ ಹೈಕೋರ್ಟ್ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಸಂಸದ ಅನಂತ್ ಕುಮಾರ್ ಹೆಗಡೆಗೆ ತಾತ್ಕಾಲಿಕ ರಿಲೀಫ್ ನೀಡಿದೆ. ಸದ್ಯ ಇಬ್ಬರೂ ಬಂಧನ ಭೀತಿಯಿಂದ ಪಾರಾಗಿದ್ದಾರೆ. ಅಲ್ಲದೇ, ನ್ಯಾಯಾಲಯ ಇಬ್ಬರಿಗೂ ಸಹ ಭಾಷೆಯ ಮೇಲೆ ಹಿಡಿತವಿರಬೇಕು ಎಂಬ ಎಚ್ಚರಿಕೆಯನ್ನು ನೀಡಿದೆ.
ಕುಮಟಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಸಂಸದ ಅನಂತ್ ಕುಮಾರ್ ಹೆಗಡೆ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ನ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರು ಶುಕ್ರವಾರ ವಿಚಾರಣೆ ನಡೆಸಿದರು. ನಂತರ ನ್ಯಾಯಾಲಯ "ಭಾಷಾ ಪ್ರಯೋಗ ಹಿಡಿತದಲ್ಲಿರಬೇಕು ಎಂದು ನ್ಯಾಯಮೂರ್ತಿಗಳು ಎಚ್ಚರಿಸಿದ್ದಾರೆ ಎಂದು ನಿಮ್ಮ ಅರ್ಜಿದಾರ ಸಂಸದ ಅನಂತ್ ಕುಮಾರ್ ಹೆಗಡೆಯವರಿಗೆ ತಿಳಿಸಿ'' ಎಂದು ಎಚ್ಚರಿಕೆ ನೀಡಿದೆ.

'ಅರ್ಜಿದಾರರು ಉತ್ತಮ ವಾಗ್ಮಿ ಇರಬಹುದು. ಹಾಗೆಂದ ಮಾತ್ರಕ್ಕೆ ಅಸಂಬದ್ಧ ಪದಗಳ ಪ್ರಯೋಗ ಸಲ್ಲದು. ಭಾಷಾ ಬಳಕೆಯಲ್ಲಿ ಎಲ್ಲರೂ ನಿಗಾ ವಹಿಸಬೇಕು. ಒಳ್ಳೆಯ ಭಾಷೆ ಪ್ರಯೋಗ ಮಾಡುವ ಮೂಲಕ ಗೌರವಯುತವಾಗಿ ನಡೆದುಕೊಳ್ಳುವಂತೆ ನಿಮ್ಮ ಅರ್ಜಿದಾರರಿಗೆ ತಿಳಿವಳಿಕೆ ಹೇಳಿ' ಎಂದು ತಾಕೀತು ಮಾಡಿದರು. ಅಂತಿಮವಾಗಿ, 'ಅನಂತ್ ಕುಮಾರ್ ಹೆಗಡೆ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು' ಎಂದು ಸರ್ಕಾರಕ್ಕೆ ಆದೇಶಿಸಿ ವಿಚಾರಣೆ ಮುಂದೂಡಿತು.
'ಹಿಂದೂ ಮುಸ್ಲಿಂ ಸಮುದಾಯಗಳ ಮಧ್ಯೆ ಕೋಮು ಸೌಹಾರ್ದತೆ ಕದಡುವ ಮತ್ತು ಮುಖ್ಯಮಂತ್ರಿಗಳ ಬಗ್ಗೆ ಕೇವಲವಾದ ಪದಗಳನ್ನು ಬಳಸಿ ಭಾಷಣ ಮಾಡಿದ್ದಾರೆ' ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಮಾಜಿ ಸಚಿವ ಈಶ್ವರಪ್ಪಗೂ ಹೈಕೋರ್ಟ್ ಎಚ್ಚರಿಕೆ
ಅದೇ ರೀತಿ ನ್ಯಾಯಾಲಯ ಕೆ.ಎಸ್. ಈಶ್ವರಪ್ಪ ಅವರಿಗೂ 'ರಾಜಕಾರಣಿಗಳು ತಾವು ಬಳಸುವ ಭಾಷೆಯ ಬಗ್ಗೆ ಎಚ್ಚರ ವಹಿಸಬೇಕು' ಎಂದು ಹೇಳಿದೆ.
'ದೇಶ ವಿಭಜನೆಯ ಮಾತನಾಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು' ಎಂದು ಹೇಳಿರುವುದಾಗಿ ಆರೋಪಿಸಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ಧ ದಾಖಲಾಗಿರುವ ಎಫ್ಐಆರ್ಗೆ ಮಧ್ಯಂತರ ತಡೆ ನೀಡಿದೆ. 'ನನ್ನ ವಿರುದ್ಧ ದಾಖಲಾಗಿರುವ ಎಫ್ಐಆರ್ ಮತ್ತು ಮುಂದಿನ ಕಾನೂನು ಪ್ರಕ್ರಿಯೆಗೆ ತಡೆ ನೀಡಬೇಕು' ಎಂದು ಕೋರಿ ಕೆ.ಎಸ್.ಈಶ್ವರಪ್ಪ ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರು ಶುಕ್ರವಾರ ವಿಚಾರಣೆ ನಡೆಸಿದರು.
ನ್ಯಾಯಮೂರ್ತಿಗಳು, 'ನಮ್ಮ ರಾಜಕೀಯ ನಾಯಕರು ಯಾಕೆ ಒಳ್ಳೆಯ ಭಾಷೆ ಏಕೆ ಬಳಸುತ್ತಿಲ್ಲ?, ಮಾತನಾಡುವಾಗ ಉತ್ತಮ ಸಂಸ್ಕೃತಿಯನ್ನೇಕೆ ಪ್ರತಿಬಿಂಬಿಸುವುದಿಲ್ಲ? ಈ ರೀತಿ ಮಾತನಾಡಿ ಅದ್ಯಾಕೆ ಭಾಷೆಯ ಮೇಲೆ ದೌರ್ಜನ್ಯ ಎಸಗುತ್ತಾರೆ' ಎಂದು ಖಾರವಾಗಿ ಪ್ರಶ್ನಿಸಿದರು.
'ಕರ್ನಾಟಕ ವಿವಿಧ ಸಿದ್ಧಾಂತಗಳ ಜನರನ್ನು ಮಡಿಲಲ್ಲಿ ಇಟ್ಟುಕೊಂಡಿರುವ ರಾಜ್ಯ. ರಾಜಕಾರಣಿಗಳು ಮಾತನಾಡುವಾಗ ಮೈಮೇಲೆ ಪ್ರಜ್ಞೆ ಇಟ್ಟುಕೊಂಡಿರಬೇಕು. ತಮ್ಮ ಮಾತುಗಳನ್ನು ಶಾಲಾ ಮಕ್ಕಳು ಗಮನಿಸುತ್ತಿರುತ್ತಾರೆ ಎಂಬ ಅರಿವಿರಬೇಕು' ಎಂದು ಎಚ್ಚರಿಸಿದರು.
ಪ್ರಕರಣದ ಹಿನ್ನಲೆ ಏನು?
'ದಕ್ಷಿಣ ಭಾರತವನ್ನು ಪ್ರತ್ಯೇಕ ರಾಷ್ಟ್ರವನ್ನಾಗಿ ಮಾಡುವಂತೆ ಕೇಳಬೇಕಾದೀತು' ಎಂಬ ಸಂಸದ ಡಿ.ಕೆ.ಸುರೇಶ್ ಮಾತಿಗೆ ಪ್ರತಿಕ್ರಿಯಿಸಿದ್ದ ಈಶ್ವರಪ್ಪ, 'ಸಂಸದ ಡಿ.ಕೆ.ಸುರೇಶ್ ಮತ್ತು ಶಾಸಕ ವಿನಯ ಕುಲಕರ್ಣಿ ದೇಶ ವಿಭಜನೆಯ ಮಾತುಗಳನ್ನಾಡಿದ್ದಾರೆ. ಈ ರೀತಿ ಮಾತನಾಡುವ ರಾಷ್ಟ್ರದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು' ಎಂದು ಹೇಳಿದ್ದಾಗಿ ಆರೋಪಿಸಿ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಪೊಲೀಸರು 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಮತ್ತು ಜೆಎಂಎಫ್ಸಿ ಕೋರ್ಟ್ಗೆ ವರದಿ ಸಲ್ಲಿಸಿದ್ದರು.












Click it and Unblock the Notifications