Highg Court: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು, ಷರತ್ತುಗಳೇನು?
ಬೆಂಗಳೂರು, ಜೂನ್ 18: ಅಶ್ಲೀಲ ವಿಡಿಯೋಗಳು ಇರುವ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿದಂತೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯೊಬ್ಬರನ್ನು ಕಿಡ್ನಾಪ್ ಮಾಡಿದ್ದ ಆರೋಪಕ್ಕೆ ಗುರಿಯಾಗಿದ್ದ ಭವಾನಿ ರೇವಣ್ಣ ಅವರಿಗೆ ರಾಜ್ಯ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.
ಕೆ.ಆರ್.ನಗರದ ಸಂತ್ರಸ್ತೆಯೊಬ್ಬರನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೆಟ್ಟಿಲೇರಿದ್ದ ಭವಾನಿ ರೇವಣ್ಣಗೆ ಮಂಗಳವಾರ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ. ಇದರೊಂದಿಗೆ ಕೆಲವು ಷರತ್ತುಗಳನ್ನು ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಈ ಹಿಂದೆ ಎಸ್ಐಟಿ ವಿಚಾರಣೆಗೆ ಹಾಜರಾಗಬೇಕು. ವಿಚಾರಣೆ ತಪ್ಪಿಸುವಂತಿಲ್ಲ ಎಂದು ಭವಾನಿಯವರಿಗೆ ಸೂಚಿಸಿದ್ದ ಹೈಕೋರ್ಟ್, ಅವರನ್ನು ಬಂಧಿಸುವಂತಿಲ್ಲ ಎಂದು ಎಸ್ಐಟಿಗೆ ತಿಳಿಸಿತ್ತು. ಅದರ ಬೆನ್ನೆಲ್ಲೆ ಭವಾನಿ ರೇವಣ್ಣ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು.
85 ಪ್ರಶ್ನೆಗಳಿಗೆ ಉತ್ತರಿಸಿದ ಭವಾನಿ ರೇವಣ್ಣ
ಇದೀಗ ಹೈಕೋರ್ಟ್ ತನ್ನ ಆದೇಶದಲ್ಲಿ ಭವಾನಿ ರೇವಣ್ಣ ಅವರು ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸಬಾರದು ಎಂದು ಷರತ್ತು ವಿಧಿಸಿದೆ. ಇನ್ನೂ ವಾದ ವಿವಾದ ನಡೆದ ಸಂದರ್ಭದಲ್ಲಿ ಪೊಲೀಸರ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಅವರು ಉತ್ತರಿಸಿದ್ದಾರೆ. ಈ ಕಾರಣದಿಂದ ಅವರು ತನಿಖೆಗೆ ಸಹಕರಿಸಿಲ್ಲ ಎಂಬ ವಾದವನ್ನು ಒಪ್ಪಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿತು.
ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ. ಸಂತ್ರಸ್ತೆಗೆ ಊಟ ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನು ಒಪ್ಪಲು ಸಾಧ್ಯವಿಲ್ಲ. ಏಕೆಂದರೆ ಭವಾನಿ ರೇವಣ್ಣ ಅವರು ಸಂತ್ರಸ್ತೆಗೆ ಬಟ್ಟೆ ಊಟ ನೀಡಿದ್ದರು ಎಂಬುದು ಸಂತ್ರಸ್ತೆಯ ಹೇಳಿಕೆಯು ಉಲ್ಲೇಖವಾಗಿದೆ. ಇದೆಲ್ಲ ಆಲಿಸಿದ ಬಳಿಕ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.












Click it and Unblock the Notifications