ಬಿಬಿಎಂಪಿ ಚುನಾವಣೆ ಘೋಷಣೆಗೆ ಹೈಕೋರ್ಟ್ ತಡೆಯಾಜ್ಞೆ
ಬೆಂಗಳೂರು, ಏ. 20 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಘೋಷಣೆ ಮಾಡದಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಹೈಕೋರ್ಟ್ ಆದೇಶ ಸರ್ಕಾರಕ್ಕೆ ಸ್ವಲ್ಪ ಸಮಾಧಾನ ತಂದಿದೆ.
ಮೇ 30ರೊಳಗೆ ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಏಕ ಸದಸ್ಯ ಪೀಠ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೋಮವಾರ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ ಅವರ ವಿಭಾಗೀಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ. [ಬಿಬಿಎಂಪಿ ವಿಭಜನೆ : ವಿಶೇಷ ಅಧಿವೇಶನದ ಮುಖ್ಯಾಂಶಗಳು]

ಅರ್ಜಿಯ ವಿಚಾರಣೆ ಸಮಯದಲ್ಲಿ ಚುನಾವಣಾ ಆಯೋಗದ ಪರವಾಗಿ ವಾದ ಮಂಡನೆ ಮಾಡಿದ ವಕೀಲ ಕೆ.ಎನ್.ಫಣೀಂದ್ರ ಅವರು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಲು ಸಕಲ ರೀತಿಯಲ್ಲಿ ಸಜ್ಜಾಗಿದೆ. ಇಂದು ಸಂಜೆ 4 ಗಂಟೆಗೆ ವೇಳಾಪಟ್ಟಿ ಪ್ರಕಟಿಸುತ್ತೇವೆ. ಆದ್ದರಿಂದ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಬಾರದು ಎಂದು ವಾದ ಮಂಡಿಸಿದರು. [ಬಿಬಿಎಂಪಿ ವಿಸರ್ಜನೆ ಮಾಡಿ ಸರ್ಕಾರದ ಅಧಿಸೂಚನೆ]
ಸರ್ಕಾರದ ವಾದ : ಸರ್ಕಾರದ ಪರವಾಗಿ ವಾದ ಮಂಡನೆ ಮಾಡಿದ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್, ಏಕ ಸದಸ್ಯ ಪೀಠ ನೀಡಿದ ತೀರ್ಪಿನ ಸಂದರ್ಭಕ್ಕೂ ಈಗಿನ ಸಂದರ್ಭಕ್ಕೂ ವ್ಯತ್ಯಾಸಗಳಿವೆ. ಸದ್ಯ, ಬಿಬಿಎಂಪಿ ವಿಸರ್ಜನೆಯಾಗಿದ್ದು, ಆಡಳಿತಾಧಿಕಾರಿ ನೇಮಕವಾಗಿದ್ದಾರೆ. ಆದ್ದರಿಂದ ಚುನಾವಣೆ ಘೋಷಣೆಗೆ ತಡೆಯಾಜ್ಞೆ ನೀಡಬೇಕೆಂದು ಮನವಿ ಮಾಡಿದರು.
ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಪೀಠ ಏ.22ರ ಬುಧವಾರದ ತನಕ ಬಿಬಿಎಂಪಿ ಚುನಾವಣೆ ಘೋಷಣೆ ಮಾಡದಂತೆ ಚುನಾವಣಾ ಆಯೋಗಕ್ಕೆ ಆದೇಶ ನೀಡಿತು. ಬುಧವಾರ ಪುನಃ ಅರ್ಜಿಯ ವಿಚಾರಣೆ ನಡೆಯಲಿದ್ದು, ಅಂದು ಚುನಾವಣೆ ಬಗ್ಗೆ ಅಂತಿಮ ಆದೇಶ ಹೊರಬೀಳುವ ಸಾಧ್ಯತೆ ಇದೆ.












Click it and Unblock the Notifications