ಶೇ.488ರಷ್ಟು ಅಕ್ರಮ ಆಸ್ತಿ ಗಳಿಸಿದ್ದ ಪಿಡಿಓ ಪ್ರಕರಣ ರದ್ದುಗೊಳಿಸದ ಹೈಕೋರ್ಟ್
ಬೆಂಗಳೂರು, ಮೇ 31: ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಶೇ.488ರಷ್ಟು ಅಕ್ರಮ ಆಸ್ತಿ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಹಾಗಾಗಿ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮ ಪಂಚಾಯಿತಿ ಪಿಡಿಓ ಡಿ.ಎಂ. ಪದ್ಮನಾಭ ಕ್ರಿಮಿನಲ್ ಕೇಸ್ ಎದುರಿಸಲೇಬೇಕಾಗಿದೆ.
ಮೇಲ್ನೋಟಕ್ಕೆ ಭ್ರಷ್ಟಾಚಾರ ಸಾಬೀತಾಗಿರುವುದರಿಂದ ಪ್ರಕರಣ ರದ್ದುಗೊಳಿಸಲಾಗದು ಎಂದು ನ್ಯಾಯಾಲಯ ಆದೇಶ ಹೊರಡಿಸಿದೆ. ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಡಿ.ಎಂ. ಪದ್ಮನಾಭ ಮತ್ತಿತರರು ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಹೈಕೋರ್ಟ್ ಆದೇಶವೇನು..?
ಕೆಲ ಕಾಲ ವಾದ ಪ್ರತಿವಾದ ಆಲಿಸಿದ ಹಾಗೂ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಾಲಯ ಅರ್ಜಿದಾರರು ಶೇ.488 ರಷ್ಟು ಅಕ್ರಮ ಆಸ್ತಿ ಗಳಿಸಿರುವುದು ಮೇಲ್ನೋಟಕ್ಕೆ ತಿಳಿದುಬರುತ್ತದೆ ಬರುತ್ತದೆ. ಹಾಗಾಗಿ ಈ ಹಂತದಲ್ಲಿ ಪ್ರಕರಣ ರದ್ದುಪಡಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ ಅರ್ಜಿದಾರರ ಮನವಿ ತಿರಸ್ಕರಿಸಿ ಆದೇಶಿಸಿದೆ.
ಅರ್ಜಿದಾರರ ಪರ ವಕೀಲರು, ಅರ್ಜಿದಾರರ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ. ಎಫ್ಐಆರ್ ದಾಖಲಿಸುವ ಮೊದಲು ಅವರನ್ನು ಪ್ರಾಥಮಿಕ ವಿಚಾರಣೆಗೊಳಪಡಿಸಬೇಕಿತ್ತು. ಹಾಗೆ ಮಾಡದೇ ಕಾನೂನು ಬಾಹಿರವಾಗಿ ಎಫ್ಐಆರ್ ದಾಖಲಿಸಲಾಗಿದೆ.
ಅಲ್ಲದೇ ಯಾವುದೇ ಸರ್ಕಾರಿ ನೌಕರಿ ಹೊಂದಿಲ್ಲದಿದ್ದರು ಪ್ರಕರಣ ಸಂಬಂಧ ಅರ್ಜಿದಾರರ ಪತ್ನಿ ಹಾಗೂ ಅತ್ತೆಯ ವಿರುದ್ಧವೂ ದೂರು ದಾಖಲಿಸಲಾಗಿದೆ. ಸುಖಾಸುಮ್ಮನೆ ಉದ್ದೇಶ ಪೂರ್ವಕವಾಗಿ ಆಸ್ತಿಗಳ ಮೌಲ್ಯವನ್ನು ಹೆಚ್ಚಿಸಲಾಗಿದೆ. ಇದೆಲ್ಲ ಪೂರ್ವ ನಿಯೋಜಿತವಾಗಿದ್ದು ಪ್ರಕರಣವನ್ನು ರದ್ದುಗೊಳಿಸುವಂತೆ ನ್ಯಾಯಪೀಠವನ್ನು ಮನವಿ ಮಾಡಿದರು.
ಈ ವೇಳೆ ಪ್ರತಿವಾದಿ ಪರ ವಕೀಲರು, ಅರ್ಜಿದಾರರ ವಿರುದ್ಧ ಆರೋಪಗಳು ಗಂಭೀರ ಸ್ವರೂಪದಿಂದ ಕೂಡಿದೆ. ಮಾತ್ರವಲ್ಲದೆ ಪ್ರಕರಣ ಪೊಲೀಸರು ಸಲ್ಲಿಸಿದ ಮೂಲ ವರದಿ ಅನೇಕ ವಿಷಯಗಳನ್ನು ಬಹಿರಂಗಪಡಿಸುತ್ತದೆ. ದಾಖಲೆಗಳ ಅನುಸಾರ ಅರ್ಜಿದಾರರು ಆದಾಯಕ್ಕೂ ಮೀರಿ ಅಕ್ರಮವಾಗಿ ಆಸ್ತಿಗಳಿಸಿರುವುದು ಸ್ಪಷ್ಟವಾಗಿ ತಿಳಿದು ಬರುತ್ತದೆ. ಪ್ರಕರಣ ವಿಚಾರಣಾ ಹಂತದಲ್ಲಿ ಇದೆ. ಈ ಹಂತದಲ್ಲಿ ಪ್ರಕರಣವನ್ನು ರದ್ದುಗೊಳಿಸದಂತೆ ನ್ಯಾಯಪೀಠವನ್ನು ಮನವಿ ಮಾಡಿದರು.
ಪ್ರಕರಣದ ಹಿನ್ನೆಲೆ ಏನು..?
ಅರ್ಜಿದಾರ ಡಿ.ಎಂ ಪದ್ಮನಾಬ್ ಬೆಂಗಳೂರು ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮದಲ್ಲಿ ಪಂಚಾಯತ್ ಅಭಿವೃದ್ಧಿ ಹುದ್ದೆಗೆ ಬಡ್ತಿ ಪಡೆದರು. ಬಳಿಕ 2023ರಲ್ಲಿ ಅರ್ಜಿದಾರರು ಅಕ್ರಮ ಆಸ್ತಿ ಗಳಿಸಿದ್ದಾರೆ ಎನ್ನುವ ಬಗ್ಗೆ ಶಂಕೆ ವ್ಯಕ್ತವಾಯಿತು. ಈ ವಿಚಾರವಾಗಿ ಅವರ ವಿರುದ್ಧ ಪ್ರಾಥಮಿಕ ತನಿಖೆ ನಡೆಸಲಾಯಿತು ತದನಂತರ ಬೆಂಗಳೂರು ನಗರ ವಲಯ ಲೋಕಾಯುಕ್ತ ಅಧೀಕ್ಷರು ನಿರ್ದೇಶನದ ಮೇರೆಗೆ ಲೋಕಾಯುಕ್ತ ಪೊಲೀಸರು ಅರ್ಜಿದಾರರ ವಿರುದ್ಧ ಎಫ್ಐಆರ್ ದಾಖಲಿಸಿದರು ಇದನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದಾರೆ.












Click it and Unblock the Notifications