Siddaramaiah: ಕೋರ್ಟ್ನಲ್ಲಿ ಸಿಎಂ ಸಿದ್ದರಾಮಯ್ಯಗೆ ಹಿನ್ನಡೆ; ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ
ಮುಡಾ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಹೊಸ ತಲೆ ನೋವು ಶುರುವಾಗಿದೆ. ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈಗ ಸಿದ್ದರಾಮಯ್ಯ ಅವರ ಸಿಎಂ ಸ್ಥಾನಕ್ಕೂ ಕುತ್ತು ಬಂದಿದೆ, ಆದರೆ ಸಚಿವರು, ಶಾಸಕರು ಬೆಂಬಲಕ್ಕೆ ನಿಂತಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೂಡ ಸಿದ್ದರಾಮಯ್ಯ ಅವರ ಅರ್ಜಿ ವಜಾಗೊಳಿಸಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ನಾನು ಮೊದಲು ನ್ಯಾಯಾಲಯದ ಆದೇಶವನ್ನು ನೋಡಬೇಕು, ಈಗಲೇ ಏನೇನೊ ಹೇಳಲು ಸಾಧ್ಯವಿಲ್ಲ, ಸಿದ್ದರಾಮಯ್ಯ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡಲಾಗಿದೆ ಎಂದು ಹೇಳಿದ್ದಾರೆ.

ನನ್ನ ಮೇಲೆ ಹೇಗೆ ದೊಡ್ಡ ಷಡ್ಯಂತ್ರ ಮಾಡಿದ್ದರು ಅದೇ ರೀತಿ ನಮ್ಮ ಮುಖ್ಯಮಂತ್ರಿಗಳ ಮೇಲೆ ಷಡ್ಯಂತ್ರ ಮಾಡಲಾಗಿದೆ. ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಜೈಲಿಗೆ ಕಳಿಸಿದ್ದರು. ಆದರೆ ದೇವರ ಕೃಪೆಯಿಂದ ನಾನು ಹೊರಗಡೆ ಬಂದಿದ್ದೇನೆ. ಜೈಲಿಗೆ ಹೋಗಿದ್ದ ಪ್ರಕರಣ ಕೂಡ ವಜಾ ಆಗಿದೆ. ಈಗ ಸಿಎಂ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ಮೇಲೆ ದೊಡ್ಡ ಷಡ್ಯಂತ್ರ ಮಾಡಲಾಗಿದೆ. ಏನೇ ತನಿಖೆಗೆ ಆದೇಶ ಮಾಡಿದರೂ, ಅವರು ಆರೋಪದಿಂದ ಮುಕ್ತರಾಗಿ ಹೊರ ಬರುತ್ತಾರೆ ಎಂದರು.
ನನ್ನ ಪ್ರಕಾರ ಸಿಎಂ ಸಿದ್ದರಾಮಯ್ಯ ಯಾವ ತಪ್ಪೂ ಮಾಡಿಲ್ಲ, ನಾವು ಅವರ ಜೊತೆ ಇದ್ದೇವೆ. ಅವರು ಮಾಡಿರುವ ಕಾರ್ಯಕ್ರಮ, ರಾಜ್ಯಕ್ಕೆ ಕೊಟ್ಟಿರುವ ಕೊಡುಗೆಯನ್ನು ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ, ಅದಕ್ಕೆ ಅವರ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ ಎಂದರು.
ರಾಜೀನಾಮೆಗೆ ಬಿಜೆಪಿ ಒತ್ತಾಯ
ಸಿಎಂ ಸಿದ್ದರಾಮಯ್ಯ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸುತ್ತಿದ್ದಂತೆ ಬಿಜೆಪಿ ನಾಯಕರ ಉತ್ಸಾಹ ಇಮ್ಮಡಿಯಾಗಿದೆ. ಇದು ತಾವು ಹೋರಾಟ ಮಾಡಿದ್ದರ ಫಲ ಎಂದು ಬಿಜೆಪಿ ನಾಯಕರು ಹೇಳಿದ್ದು, ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಆಗ್ರಹಿಸಿವೆ.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ. ವೈ ವಿಜಯೇಂದ್ರ ಈ ಬಗ್ಗೆ ಪ್ರತಿಕ್ರಿಯೆ ನೀಡಿ, ನಮ್ಮ ಹೋರಾಟಕ್ಕೆ ಮೊದಲ ಗೆಲುವು ಸಿಕ್ಕಿದೆ. ಮುಖ್ಯಮಂತ್ರಿಗಳ ವಿರುದ್ಧದ ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಗೌರವಾನ್ವಿತ ರಾಜ್ಯಪಾಲರ ನಿರ್ಧಾರವನ್ನು ಎತ್ತಿ ಹಿಡಿದಿರುವ ಘನ ಉಚ್ಚ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುತ್ತೇನೆ. ಸಿಎಂ ಸಿದ್ದರಾಮಯ್ಯ ಅವರು ಭಂಡತನವನ್ನು ಬಿಟ್ಟು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡ, ತನಿಖೆಗೆ ಸಹಕಾರ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.












Click it and Unblock the Notifications