ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಪ್ರಕರಣ: ಅನಂತ್ ಕುಮಾರ್ ಹೆಗಡೆಗೆ ರಿಲೀಫ್
ಬೆಂಗಳೂರು ಮಾರ್ಚ್ 16: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣ ಸಂಬಂಧ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮುಂಡಗೋಡು ಠಾಣಾ ಪೊಲೀಸರು ದಾಖಲಿಸಿದ್ದ ಎಫ್ಐಆರ್ಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧದ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಸಂಸದ ಅನಂತ್ ಕುಮಾರ್ ಹೆಗಡೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ, ಅರ್ಜಿ ಕುರಿತ ಮುಂದಿನ ವಿಚಾರಣೆವರೆಗೆ ಎಫ್ಐಆರ್ಗೆ ತಡೆಯಾಜ್ಞೆ ನೀಡಿತು.

ಜೊತಗೆ, ಪ್ರತಿವಾದಿಗಳಾದ ಮುಂಡಗೋಡು ಠಾಣಾ ಪೊಲೀಸರು ಮತ್ತು ದೂರುದಾರರಾದ ಠಾಣೆಯ ಮುಖ್ಯಪೇದೆ ಗಣಪತಿ ಬಸವಂತಪ್ಪ ಹುನ್ನಳ್ಳಿಗೆ ನೋಟಿಸ್ ಜಾರಿಗೊಳಿಸಿತು.
ಪ್ರಕರಣದ ಹಿನ್ನೆಲೆ ಏನು..?
2024ರ ಫೆ.23ರಂದು ಮುಂಡಗೋಡು ತಾಲೂಕಿನ ಪಾಳಾ ಗ್ರಾಮ ಮತ್ತು ಇಂದೂರ ಗ್ರಾಮದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ ನಡೆದಿತ್ತು. ಅದರಲ್ಲಿ ಭಾಗವಹಿಸಿದ್ದ ಅನಂತ್ ಕುಮಾರ್ ಹೆಗಡೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಉದ್ದೇಶಿಸಿ 'ಸಿದ್ರಾಮುಲ್ಲಾ ಖಾನ್ ಸರ್ಕಾರವನ್ನು ನಾವೆಲ್ಲೂ ನೋಡಿಲ್ಲ. ಅತ್ಯಂತ ಹೇಸಿಗೆ ಬರುವ ರೀತಿ ಅಲ್ಪಸಂಖ್ಯಾತರ ತುಷ್ಠೀಕರಣ ಮಾಡುವಲ್ಲಿ ನಿರತರಾಗಿದ್ದಾರೆ. ಇವರ ಕೈಯಲ್ಲಿ ಅಧಿಕಾರ ಕೊಟ್ಟರೆ ನಮ್ಮನ್ನು ಮಾರಾಟ ಮಾಡುತ್ತಾರೆ. ಹಿಂದೂಗಳ ದೇವಸ್ಥಾನದ ಹುಂಡಿಗೆ ಹಾಕಿದ ಹಣವನ್ನು, ಚರ್ಚ್, ಮಸಿದಿಗೆ ಕೊಡುತ್ತಾರೆ. ಹಿಂದೂಗಳ ದೇವಸ್ಥಾನದಲ್ಲಿ ದೇವರಿಲ್ಲವೇ? ಎಂದು ಹೇಳಿಕೆ ನೀಡಿದ್ದರು.
ಈ ಕುರಿತು ಮುಂಡಗೋಡು ಠಾಣೆ ಮುಖ್ಯಪೇದೆ ದೂರು ದಾಖಲಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅನಂತ್ ಕುಮಾರ್ ಹೆಗಡೆ ಅವಹೇಳಕನಕಾರಿಯಾಗಿ ಮಾತನಾಡಿದ್ದಾರೆ. ಆ ಮೂಲಕ ಸಭೆಯಲ್ಲಿ ಹಾಜರಿದ್ದ ಯುವಕರಿಗೆ ದಾರಿ ತಪ್ಪಿಸಲು ಯತ್ನಿಸಿದ್ದಾರೆ. ಶಾಂತಿ-ಸೌಹಾರ್ದತೆ ಕದಡುವ, ಜಾತಿ- ಧರ್ಮಗಳ ನಡುವೆ ದ್ವೇಷ ಹುಟ್ಟುಹಾಕುವ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದ್ದರು.
ಈ ಸಂಬಂಧ ಮುಂಡಗೋಡು ಠಾಣಾ ಪೊಲೀಸರು ಅನಂತ್ ಕುಮಾರ್ ಹೆಗಡೆ ವಿರುದ್ಧ ಗಲಭೆ ಉಂಟು ಮಾಡಲು ಪ್ರಚೋದನಕಾರಿ ಹೇಳಿಕೆ ನೀಡಿದ, ಸುಳ್ಳು ಮಾಹಿತಿ ಹರಡಿದ, ಉದ್ದೇಶಪೂರ್ವಕವಾಗಿ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಸಂಬಂಧ ಎಫ್ಐಆರ್ ದಾಖಲಿಸಿದ್ದರು. ಪ್ರಕರಣ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಪ್ರಧಾನ ಜಿಲ್ಲಾ (ಕಿರಿಯ ಶ್ರೇಣಿ) ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಇದರಿಂದ ತಮ್ಮ ವಿರುದ್ಧದ ಎಫ್ಐಆರ್ ಹಾಗೂ ಅಧೀನ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಸಂಸದರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.












Click it and Unblock the Notifications