ನಲಪಾಡ್ ಜಾಮೀನು ಅರ್ಜಿ ಇಂದು ಹೈಕೋರ್ಟ್ ನಲ್ಲಿ ವಿಚಾರಣೆ
ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮೊಹಮ್ಮದ್ ನಲಪಾಡ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿಂದು ನಡೆಯಲಿದೆ.
ಜೂನ್ 06 ರಂದು ಈ ಕುರಿತು ವಿಚಾರಣೆ ನಡೆಸಿದ್ದ ಹೈಕೋರ್ಟ್, ವಿಚಾರಣೆಯನ್ನು ಜೂನ್ 11 ಕ್ಕೆ ಮುಂದೂಡಿತ್ತು.
ಜಾಮೀನಿಗಾಗಿ ಹೈಕೋರ್ಟ್ ಮೆಟ್ಟಿಲೇರಿದ ಮೊಹಮ್ಮದ್ ನಲಪಾಡ್
ವಿದ್ವತ್ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಮೇಲೆ ಫೆಬ್ರವರಿಯಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಶಾಂತಿನಗರ ಶಾಸಕ ಹ್ಯಾರಿಸ್ ಅವರ ಪುತ್ರ ನಲಪಾಡ್ ಸಲ್ಲಿಸಿದ್ದ ಎಲ್ಲಾ ಜಾಮೀನು ಅರ್ಜಿಗಳನ್ನೂ ಸೆಷೆನ್ಸ್ ಕೋರ್ಟು ವಜಾಗೊಳಿಸಿತ್ತು.
ಇದೀಗ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಯುತ್ತಿದ್ದು, ಬರೋಬ್ಬರಿ ನಾಲ್ಕು ತಿಂಗಳ ಜೈಲುವಾದ ನಂತರ ನಲಪಾಡ್ ಹೊರಬರಲಿದ್ದಾರಾ ಎಂಬುದು ತಿಳಿಯಲಿದೆ.
ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ಫೆ.17ರಂದು ಯು.ಬಿ.ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದರು. ಈ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್ ಮತ್ತು ಇತರ 6 ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಲರೂ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ ವಜಾಗೊಳ್ಳಲು ಕಾರಣಗಳು!
ಈ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ನಡೆಸಿದ್ದಾರೆ. 600 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ಮೊಹಮ್ಮದ್ ನಲಪಾಡ್, ಅರುಣ್ ಬಾಬು, ಶ್ರೀ ಕೃಷ್ಣ, ಮಂಜುನಾಥ್, ಆಶ್ರಫ್, ಬಾಲಕೃಷ್ಣ, ಅಭಿಷೇಕ್, ನಾಸಿರ್ ಆರೋಪಿಗಳಾಗಿದ್ದಾರೆ.