ಡಿಕೆಶಿ ವಿರುದ್ಧದ ಆಕ್ರಮ ಆದಾಯ ಕೇಸ್: ಭಾರೀ ಕುತೂಹಲ ಕೆರಳಿಸಿದ ಇಂದಿನ ವಿಚಾರಣೆ
ಬೆಂಗಳೂರು, ನವೆಂಬರ್ 29: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಹೈಕೋರ್ಟ್ನಲ್ಲಿ ವಿಚಾರಣೆ ನಡೆಯಲಿದೆ.
ಈ ಮಧ್ಯೆ ಡಿ.ಕೆ ಶಿವಕುಮಾರ್ ಅವರನ್ನು ರಕ್ಷಿಸಲು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನೀಡಿದ್ದ ತನಿಖಾ ಅನುಮೋದನೆಯನ್ನು ಹಿಂಪಡೆಯಲು ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಆಕ್ಷೇಪಿಸಿ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಸಿಬಿಐ ಎಫ್ಐಆರ್ ರದ್ದತಿ ಕೋರಿದ್ದ ಅರ್ಜಿ ವಜಾ ಮಾಡಿರುವ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ಇಂದು ನಡೆಸಲಿದೆ. ಇದರ ಭಾಗವಾಗಿ ಮಧ್ಯಪ್ರವೇಶಿಕೆ ಕೋರಿ ಯತ್ನಾಳ್ ಅರ್ಜಿ ಸಲ್ಲಿಸಿದ್ದಾರೆ. ಇಂದಿನ ವಿಚಾರಣೆ ಭಾರೀ ಕುತೂಹಲ ಕೆರಳಿಸಿದೆ.
ಸಾರ್ವಜನಿಕ ಹಿತಾಸಕ್ತಿಗೆ ಮಾರಕ
ಡಿ.ಕೆ ಶಿವಕುಮಾರ್ ಅರ್ಜಿ ವಜಾ ಮಾಡಿರುವ ಆದೇಶದಲ್ಲಿ ಏಕಸದಸ್ಯ ಪೀಠವು ಸಿಬಿಐ ಶೇ. 90ರಷ್ಟು ತನಿಖೆ ಪೂರ್ಣಗೊಳಿಸಿದೆ ಎಂದು ಉಲ್ಲೇಖಿಸಿದೆ. ಈ ಹಂತದಲ್ಲಿ ಸಿಬಿಐಗೆ ನೀಡಿರುವ ಅನುಮೋದನೆ ಹಿಂಪಡೆಯುವ ನಡೆಯ ಮೂಲಕ ಪ್ರಕ್ರಿಯೆಯಲ್ಲಿ ಹಾಲಿ ಸರ್ಕಾರ ಮಧ್ಯಪ್ರವೇಶ ಮಾಡಲು ಮುಂದಾಗಿದೆ.
ದುರುದ್ದೇಶದಿಂದ ರಾಜ್ಯ ಸರ್ಕಾರ ತೀರ್ಮಾನ ಮಾಡಿದ್ದು, ಡಿಕೆ ಶಿವಕುಮಾರ್ ಅವರನ್ನು ರಕ್ಷಿಸಲು ಮುಂದಾಗಿದೆ. ರಾಜ್ಯ ಸರ್ಕಾರದ ನಿರ್ಧಾರವು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದ್ದು, ಸಾರ್ವಜನಿಕ ಆತ್ಮಸಾಕ್ಷಿಗೆ ಆಘಾತ ಉಂಟು ಮಾಡಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
ಡಿಕೆಶಿ ಪ್ರಕರಣದ ಕಾನೂನು ಸಿಂಧುತ್ವವನ್ನು ಹಾಲಿ ಪ್ರಕರಣದಲ್ಲಿ ನ್ಯಾಯಾಲಯ ನಿರ್ಧರಿಸಲಿದೆ. ಈ ಮಧ್ಯೆ, ಅನುಮೋದನೆ ಹಿಂಪಡೆಯುವ ನಿರ್ಧಾರವು ನ್ಯಾಯಾಂಗ ಪ್ರಕ್ರಿಯೆಯಲ್ಲಿನ ಮಧ್ಯಪ್ರವೇಶವಾಗಿದೆ. ಅನುಮೋದನೆ ಹಿಂಪಡೆಯುವ ತೀರ್ಮಾನ ಮಾಡುವ ಮೂಲಕ ಅಕ್ರಮ ಮತ್ತು ಸಂವಿಧಾನಬಾಹಿರ ಕೃತ್ಯಕ್ಕೆ ಬಳಕೆ ಮಾಡಲಾಗಿದೆ.
ನೆಲದ ಕಾನೂನು ಮತ್ತು ಸಂವಿಧಾನದ 144ನೇ ವಿಧಿಗೆ ವಿರುದ್ಧವಾಗಿ ರಾಜ್ಯ ಸರ್ಕಾರವು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿದೆ. ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾದ ತೀರ್ಮಾನವನ್ನು ನ್ಯಾಯಾಲಯದ ಗಮನಕ್ಕೆ ತರುತ್ತಿರುವುದರಲ್ಲಿ ವೈಯಕ್ತಿಕವಾಗಿ ಯಾವುದೇ ಹಿತಾಸಕ್ತಿ ಇಲ್ಲ. ನ್ಯಾಯಾಂಗ ಪ್ರಕ್ರಿಯೆಯಲ್ಲಿ ಉದ್ದೇಶಪೂರ್ವಕವಾಗಿ ಮೂಗು ತೂರಿಸುವುದನ್ನು ತೋರಿಸುವ ಉದ್ದೇಶ ಮಾತ್ರ ಅರ್ಜಿ ಸಲ್ಲಿಕೆಯ ಹಿಂದೆ ಇದೆ. ಈ ನೆಲೆಯಲ್ಲಿ ತಮ್ಮ ವಾದವನ್ನು ಆಲಿಸಬೇಕು ಎಂದು ಯತ್ನಾಳ್ ಕೋರಿದ್ದಾರೆ.
ಸಿಜೆಐಗೆ ಪತ್ರ
ಹೈಕೋರ್ಟ್ ವಕೀಲರೊಬ್ಬರು ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವ ರಾಜ್ಯ ಸರ್ಕಾರ ಕ್ರಮವನ್ನು ಆಕ್ಷೇಪಿಸಿ ಹೈಕೋರ್ಟ್ ವಕೀಲ ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವಾಲಯ ಸಚಿವ ಅಮಿತ್ ಶಾ ಮತ್ತು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ಗೆ ಮನವಿ ಸಲ್ಲಿಸಿದ್ದಾರೆ.
ಸಿಬಿಐಗೆ ನೀಡಿದ್ದ ಅನುಮೋದನೆ ಹಿಂಪಡೆದಿರುವ ನಿರ್ಧಾರವನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಮತ್ತು ತನಿಖೆ ನಡೆಸಲು ಸಿಬಿಐಗೆ ಒಮ್ಮೆ ಅನುಮತಿ ನೀಡಿದರೆ ಅದನ್ನು ಪೂರ್ವಾನ್ವಯವಾಗುವಂತೆ ವಾಪಸ್ ಪಡೆಯಲು ಸಾಧ್ಯವಿಲ್ಲ ಎಂಬುದನ್ನು ರಾಜ್ಯ ಸರ್ಕಾರಕ್ಕೆ ಸ್ಪಷ್ಟಪಡಿಸಬೇಕು. ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ರಕ್ಷಣೆ ಮಾಡುವ ನೆಲೆಯಲ್ಲಿ ಪ್ರಕರಣದಲ್ಲಿ ಮಧ್ಯ ಪ್ರವೇಶ ಮಾಡಬೇಕು ಎಂದು ಮನವಿಯಲ್ಲಿ ಅಮೃತೇಶ್ ಮನವಿ ಮಾಡಿದ್ದಾರೆ.
ಸಿಬಿಐಗೆ ನೀಡಿದ್ದ ಅನುಮೋದನೆ ಹಿಂಪಡೆದಿರುವುದು ಸಂವಿಧಾನ ಮತ್ತು ಪ್ರಜಾಪ್ರಭುತ್ವ ತತ್ವಗಳಿಗೆ ವಿರುದ್ಧವಾಗಿದೆ. ಸಿಬಿಐ ತನಿಖೆ ಎದುರಿಸುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಅವರ ಸಂಬಂಧಿಕರನ್ನು ರಕ್ಷಣೆ ಮಾಡುವ ಉದ್ದೇಶದಿಂದ ರಾಜ್ಯ ಸಚಿವ ಸಂಪುಟ ಈ ಅಕ್ರಮ ನಿರ್ಧಾರ ಕೈಗೊಂಡಿದೆ. ಇದು ಸಾರ್ವಜನಿಕರನ್ನು ರಕ್ಷಣೆ ಮಾಡುವುದಿಲ್ಲ. ಬದಲಿಗೆ ಭ್ರಷ್ಟಾಚಾರವನ್ನು ಉತ್ತೇಜಿಸುತ್ತದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.












Click it and Unblock the Notifications