ಹಿಂದಿ ಬ್ಯಾನರ್, ಕನ್ನಡಿಗರ ಬಂಧನ; ಏನಿದು ವಿವಾದ?
ಬೆಂಗಳೂರು, ಆಗಸ್ಟ್ 19 : ಬೆಂಗಳೂರಿನಲ್ಲಿ ಹಿಂದಿ ಭಾಷೆಯಲ್ಲಿ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ಕನ್ನಡಪರ ಹೋರಾಟಗಾರರ ಬಂಧನವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಬ್ಯಾನರ್ ವಿವಾದದ ಬಗ್ಗೆ ಚರ್ಚೆ ಜೋರಾಗಿದೆ.
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ. ವಿ. ಸದಾನಂದ ಗೌಡ ಮುಂತಾದವರು ಪ್ರಕರಣದ ಬಗ್ಗೆ ಟ್ವೀಟ್, ಫೇಸ್ ಬುಕ್ ಪೋಸ್ಟ್ಗಳನ್ನು ಹಾಕಿದ್ದಾರೆ. ಕನ್ನಡಪರ ಹೋರಾಟಗಾರರ ಬಂಧನಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ನಗರದ ಇನ್ಫೆಂಟ್ರಿ ರಸ್ತೆಯ ಬಳಿ ಇರುವ ಮಾರವಾಡಿಗಳ ಗಣೇಶ್ ಬಾಗ್ ಪ್ರಾರ್ಥನಾ ಮಂದಿರದ ಬಳಿ ನಡೆದ ಘಟನೆ ಕನ್ನಡಿಗರನ್ನು ಕೆರಳಿಸಿದೆ. ಕರ್ಮರ್ಷಿಯಲ್ ಸ್ಟ್ರೀಟ್ ಪೊಲೀಸರು ಕನ್ನಡ ಪರ ಹೋರಾಟಗಾರರನ್ನು ಬಂಧಿಸಿದ್ದನ್ನು ಖಂಡಿಸಿ ಸೋಮವಾರ ಸಂಜೆ ಟೌನ್ ಹಾಲ್ ಬಳಿ ಪ್ರತಿಭಟನೆಗೆ ಕರೆ ಕೊಡಲಾಗಿದೆ.

ಬಂಧಿತರಾದವರು : ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಬಿ. ಹರೀಶ್ ಕುಮಾರ್, ಪದಾಧಿಕಾರಿಗಳಾದ ಮಂಜು, ಚಂದ್ರಶೇಖರ್, ಕರ್ನಾಟಕ ರಕ್ಷಣಾ ವೇದಿಕೆಯ ಅಂಜನಪ್ಪ, ರಕ್ಷಣಾ ಸೇನೆಯ ರಮೇಶ್ ಗೌಡ ಹಾಗೂ ಕರುನಾಡ ಸೇವಕರು ವೇದಿಕೆಯ ಮಾದೇಶ್ ಗೌಡ.
ಘಟನೆ ವಿವರ : ಗಣೇಶ್ ಬಾಗ್ ಪ್ರಾರ್ಥನಾ ಮಂದಿರದಲ್ಲಿ ಚಾರ್ತುಮಾಸದ ಆಚರಣೆ ನಡೆಯುತ್ತಿತ್ತು. ಇದರ ಕುರಿತು ಹಿಂದಿ ಭಾಷೆಯಲ್ಲಿ ಬ್ಯಾನರ್ ಕಟ್ಟಲಾಗಿತ್ತು. ಸಾರ್ವಜನಿಕ ಪ್ರದೇಶದಲ್ಲಿ ಹಿಂದಿ ಬ್ಯಾನರ್ ಕಟ್ಟಿದ್ದಕ್ಕೆ ಆಕ್ರೋಶಗೊಂಡ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬ್ಯಾನರ್ ಹರಿದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಾರ್ಥನಾ ಮಂದಿರದ ಭದ್ರತಾ ಸಿಬ್ಬಂದಿಗೆ ಕನ್ನಡ ಭಾಷೆಯ ಮಹತ್ವ ಹೇಳಲಾಗಿತ್ತು. ಇದನ್ನು ವಿಡಿಯೋ ಮಾಡಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಯಿತು. ವಿಷಯ ತಿಳಿದ ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯ ಲೆಹರ್ ಸಿಂಗ್ ಬ್ಯಾನರ್ ಹರಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜೈನ ಸಮುದಾಯದ ಯುವಕರು ಸಹ ಬ್ಯಾನರ್ ಹರಿದಿರುವುದನ್ನು ಖಂಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕರ್ನಾಟಕ ಬಂದ್ ನಡೆಸಬೇಕು ಎಂದು ಒತ್ತಾಯಿಸಿದ್ದರು. ವಿಷಯ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಕೋಮು ಸೌಹರ್ದತೆಗೆ ಧಕ್ಕೆ ತಂದ ಪ್ರಕರಣ ದಾಖಲು ಮಾಡಿ 6 ಜನರನ್ನು ಬಂಧಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಜೈಲಿಗೆ ಕಳಿಸಿದ್ದಾರೆ.
ಸ್ಪಷ್ಟನೆ ಕೊಟ್ಟರು : ಹಿಂದೆಯೂ ನಾವು ಹಿಂದಿಯಲ್ಲಿ ಬ್ಯಾನರ್ ಹಾಕಿದ್ದೇವೆ. ಎಂದೂ ಇಂತಹ ಘಟನೆ ನಡೆದಿಲ್ಲ. ಚಾರ್ತುಮಾಸದ ಆಚರಣೆಗೆ ಕನ್ನಡಿಗರು ಬರುವುದಿಲ್ಲ. ಆದ್ದರಿಂದ, ಹಿಂದಿ ಬ್ಯಾನರ್ ಇದೆ ಎಂದೂ ಘಟನೆ ಬಗ್ಗೆ ಸ್ಪಷ್ಟನೆ ನೀಡಲಾಗಿದೆ.
ಸಂಸದರ ವಿರುದ್ಧ ಆಕ್ರೋಶ : ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಘಟನೆ ಬಗ್ಗೆ ಮಾಡಿರುವ ಟ್ವೀಟ್ ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಸಂಸದರ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸದಾನಂದ ಗೌಡ ಫೇಸ್ ಬುಕ್ ಫೋಸ್ಟ್ : ಕೇಂದ್ರ ಸಚಿವ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ. ವಿ. ಸದಾನಂದ ಗೌಡ ಈ ಕುರಿತು ಫೇಸ್ ಬುಕ್ ಫೋಸ್ಟ್ ಹಾಕಿದ್ದಾರೆ.
"ಶಾಂತಿಪ್ರಿಯ ಜೈನ ಸಮುದಾಯದ ಮೇಲೆ ನಡಿಸಿದ ನೈತಿಕ ದಾಳಿ ಎಷ್ಟು ಸರಿ ?ಅವರ ಧಾರ್ಮಿಕ ಭಾವನೆಗೆ ಘಾಸಿ ಉಂಟು ಮಾಡಿದ್ದು ಎಷ್ಟು ಸರಿ ? ಹಿಂದಿ ಭಾಷೆಯ ನಾಮ ಫಲಕ ಹಾಕಿದ ಕಾರ್ಯಕ್ರಮ ಸಂಘಟಕರನ್ನು ಸಂಪರ್ಕಿಸಿ ಗಮನ ಸೆಳೆಯಬೇಕಿತ್ತು ಮತ್ತು ತತ್ ಕ್ಷಣ ಸರಿ ಪಡಿಸಿಕ್ಕೊಳ್ಳುವಂತೆ ಸೂಚಿಸಬೇಕಿತ್ತು. ಕನ್ನಡದ ವಿಷಯದಲ್ಲಿ ಕನ್ನಡಿಗರ ಮಾತನ್ನು ಧಿಕ್ಕರಿಸುವ ಮನಸ್ಥಿತಿ , ಧೈರ್ಯ ಯಾರಿಗಾದರೂ ಕರ್ನಾಟಕದಲ್ಲಿ ಇದೆಯಾ? ಕಾನೂನು ತನ್ನ ಕೆಲಸ ಮಾಡೇ ಮಾಡುತ್ತೆ . ಚಳುವಳಿ ಮಾಡಿ ತಪ್ಪೆಸಗಿದವರನ್ನು ಸರಿದಾರಿಗೆ ತರುವುದು ಕನ್ನಡಿಗ ಮನಸ್ಥಿತಿ" ಎಂದು ಹೇಳಿದ್ದಾರೆ.
ಪ್ರತಿಭಟನೆಗೆ ಕರೆ : ಕನ್ನಡಪರ ಸಂಘಟನೆಗಳ ಕಾರ್ಯಕರ್ತರನ್ನು ಬಂಧಿಸಿರುವುದನ್ನು ಖಂಡಿಸಿ ಇಂದು ಸಂಜೆ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ. ಟೌನ್ ಹಾಲ್ ಮುಂಭಾಗದಲ್ಲಿ ಸಂಜೆ 5.30ಕ್ಕೆ ಹೋರಾಟ ನಡೆಯಲಿದೆ.












Click it and Unblock the Notifications