ಅಂತರರಾಷ್ಟ್ರೀಯ ಖ್ಯಾತಿಯ ಇತಿಹಾಸಕಾರ ಷ. ಶೆಟ್ಟರ್ ನಿಧನ
ಬೆಂಗಳೂರು, ಫೆಬ್ರವರಿ 28: ಹಲವು ದಿನಗಳ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಇತಿಹಾಸಕಾರ, ಲೇಖಕ ಷ, ಶೆಟ್ಟರ್ (85) ಶುಕ್ರವಾರ ನಸುಕಿನ 3 ಗಂಟೆ ಸುಮಾರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದ ಷ. ಶೆಟ್ಟರ್ ಕಳೆದ ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಶ್ವಾಸಕೋಶದಲ್ಲಿ ನೀರು ತುಂಬಿಕೊಂಡಿದ್ದರಿಂದ ಅವರು ಉಸಿರಾಟದ ಸಮಸ್ಯೆ ಅನುಭವಿಸುತ್ತಿದ್ದರು. ಅವರಿಗೆ ಬನ್ನೇರುಘಟ್ಟದ ಸಾಗರ್ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರ ಪಂಡಿತ್ ಸುಧಾಕರ ಚತುರ್ವೇದಿ ಇನ್ನಿಲ್ಲ
ಅವರಿಗೆ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳು ಇದ್ದಾರೆ. ಭೂಪಸಂದ್ರದಲ್ಲಿನ ಹೊಯ್ಸಳ ಶ್ರೀಕೃಷ್ಣ ಅಪಾರ್ಟ್ಮೆಂಟ್ನಲ್ಲಿರುವ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ಬಳ್ಳಾರಿ ಜಿಲ್ಲೆಯ ಹಂಪಸಾಗರದಲ್ಲಿ 1935ರ ಡಿಸೆಂಬರ್ 11ರಂದು ಜನಿಸಿದ ಅವರು, ಮೈಸೂರು, ಧಾರವಾಡ ಮತ್ತು ಕೇಂಬ್ರಿಡ್ಜ್ನಲ್ಲಿ ಉನ್ನತ ಅಧ್ಯಯನ ನಡೆಸಿದ್ದಾರೆ. ಇತಿಹಾಸ, ಪ್ರಾಕ್ತನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ದರ್ಶನಶಾಸ್ತ್ರ ಮತ್ತು ಹಳಗನ್ನಡದ ಕುರಿತು 27ಕ್ಕೂ ಅಧಿಕ ಸಂಶೋಧನಾ ಕೃತಿಗಳನ್ನು ಬರೆದಿದ್ದಾರೆ.
ವಿವಿಧ ವಿಶ್ವವಿದ್ಯಾಲಯಗಳಲ್ಲಿ ಬೋಧನೆ ಮಾಡಿರುವ ಅವರು, ಭಾರತೀಯ ಕಲಾ ಇತಿಹಾಸ ಸಂಸ್ಥೆಯ ನಿರ್ದೇಶಕರಾಗಿ, ನವದೆಹಲಿಯ ಇಂಡಿಯನ್ ಕೌನ್ಸಿಲ್ ಆಫ್ ಹಿಸ್ಟಾರಿಕಲ್ ರೀಸರ್ಚ್ನ ಅಧ್ಯಕ್ಷರಾಗಿ, ಬೆಂಗಳೂರು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸಡ್ ಸ್ಟಡೀಸ್ನ ಡಾ. ಎಸ್. ರಾಧಾಕೃಷ್ಣನ್ ಪ್ರಾಧ್ಯಾಪಕತ್ವ ಮತ್ತು ಸಂದರ್ಶಕ ಪ್ರಾಧ್ಯಾಪಕರಾಗಿ ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ ದಕ್ಷಿಣ ಭಾರತ ಶಾಖೆಯ ನಿರ್ದೇಶಕರಾಗಿ ಅವರು ಸೇವೆ ಸಲ್ಲಿಸಿದ್ದಾರೆ.
ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಭಾಷಾ ಸಮ್ಮಾನ್, ಕುಂದಕುಂದ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ರನ್ನ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಒಲಿದಿವೆ.