ಹುಬ್ಬಳ್ಳಿ ಗಲಭೆ: 106 ಮಂದಿಗೆ ಜಾಮೀನು, ಹೈಕೋರ್ಟ್ ವಿಧಿಸಿರುವ ಷರತ್ತುಗಳೇನು..?
ಬೆಂಗಳೂರು, ಫೆಬ್ರವರಿ 17: ಮುಸ್ಲಿಂ ಪ್ರಾರ್ಥನಾ ಮಂದಿರದ ಮೇಲೆ ಭಗವಾಧ್ವಜ ಇರುವ ಫೋಟೋ ಸಾಮಾಜಿಕ ಜಾಲಾತಾಣಗಳಲ್ಲಿ ಹರಿದಾಡಿದ್ದನ್ನು ಖಂಡಿಸಿ ಹುಬ್ಬಳ್ಳಿ ಪೊಲೀಸ್ ಠಾಣೆ ಮುಂದೆ ಗಲಭೆ ನಡೆಸಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ 106 ಮಂದಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಇದರಿಂದಾಗಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಈ ಮೊದಲು 39 ಮಂದಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿತ್ತ, ಇದೀಗ 106 ಮಂದಿಗೆ ಜಾಮೀನು ದೊರೆತಿರುವುದರಿಂದ ಬಹುತೇಕ ಎಲ್ಲಾ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆ ಆದಂತಾಗಿದೆ.

ಮಹಮ್ಮದ್ ಆರೀಫ್ ರಿಜ್ವಿ ಸೇರಿದಂತೆ 106 ಮಂದಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಮತ್ತು ಟಿ ವೆಂಕಟೇಶ್ ನಾಯ್ಕ್ ಅವರಿದ್ದ ವಿಭಾಗೀಯ ಪೀಠ ಶುಕ್ರವಾರ ಈ ಆದೇಶ ಮಾಡಿದೆ.
ಜಾಮೀನಿನ ಷರತ್ತುಗಳೇನು?
ಎಲ್ಲ ಅರ್ಜಿದಾರರು ವಿಚಾರಣೆಗೆ ತಪ್ಪದೇ ಹಾಜರಾಗಬೇಕು, ಭಾನುವಾರ ಠಾಣೆಗೆ ಬಂದು ಸಹಿ ಹಾಕಬೇಕು. ಸಾಕ್ಷಿಗಳ ನಾಶಕ್ಕೆ ಮುಂದಾಗಬಾರದು, ಒಬ್ಬರು ಶ್ಯೂರಿಟಿ ಮತ್ತು 2 ಲಕ್ಷ ರೂ.ಗಳ ಬಾಂಡ್ ನೀಡಬೇಕು ಎಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಲಾಗಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಈ ಪ್ರಕರಣದದಲ್ಲಿ ಆರೋಪಗಳಾಗಿದ್ದ 39 ಮಂದಿಗೆ ಸುಪ್ರೀಂಕೋರ್ಟ್ ಈಗಾಗಲೇ ಜಾಮೀನು ನೀಡಿದೆ. ಆದ್ದರಿಂದ ಅರ್ಜಿದಾರರಿಗೂ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.
ಪ್ರಕರಣದ ಹಿನ್ನೆಲೆ ಏನು?
2022ರ ಏಪ್ರಿಲ್ 16ರಂದು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ಮಸೀದಿ ಮೇಲೆ ಭಗವಾಧ್ವಜ ಇರುವ ಫೋಟೋಗಳು ಸಾಮಾಜಿಕ ಜಾಲಾತಾಣಗಳಲ್ಲಿ ಹರಿದಾಡಿತ್ತು. ಇದನ್ನು ಖಂಡಿಸಿ ನೂರಾರು ಮುಸ್ಲಿಂ ಸಮುದಾಯದವರು ಗಲಭೆ ಮಾಡಿದ್ದರು.
ಈ ವೇಳೆ ಪೊಲೀಸ್ ಠಾಣೆ, ಆಸ್ಪತ್ರೆ, ದೇವಸ್ಥಾನ, ಮನೆಗಳ ಮೇಲೆ ಕಲ್ಲು ತೂರಾಟ ಕೂಡ ನಡೆದಿತ್ತು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರು.
ಅಲ್ಲದೆ, ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಎಫ್ಐಆರ್ ದಾಖಲಾಗಿದ್ದು, 158 ಮಂದಿಯನ್ನು ಬಂಧಿಸಲಾಗಿತ್ತು. ಎನ್ಐಎ ಮತ್ತು ಯುಎಪಿಎ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದ ಪೊಲೀಸರು ಬರೋಬ್ಬರಿ 4 ಸಾವಿರ ಪುಟಗಳ ಆರೋಪಪಟ್ಟಿ ಸಲ್ಲಿಕೆಯಾಗಿತ್ತು. ಪ್ರಕರಣದಲ್ಲಿ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಎಐಎಂಐಎಂ ಕಾರ್ಪೋರೇಟರ್ ನಜೀರ್ ಹೊನ್ಯಾಳ ಸೇರಿ 7 ಬಾಲಾಪರಾಧಿಗಳಿಗೆ ಜಾಮೀನು ಸಿಕ್ಕಿತ್ತು.
ಇನ್ನುಳಿದ 151 ಆರೋಪಿಗಳಲ್ಲಿ 39 ಮಂದಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಉಳಿದ 106 ಮಂದಿ ಜಾಮೀನು ಕೋರಿ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಎನ್ಐಎ ವಿಶೇಷ ನ್ಯಾಯಾಲಯ ರದ್ದುಪಡಿಸಿತ್ತು.












Click it and Unblock the Notifications