ನಾನು ಸಚಿವ ಸ್ಥಾನ ಆಕಾಂಕ್ಷಿ ಅಲ್ಲ: ಮಾಜಿ ಸಚಿವ ರೇಣುಕಾಚಾರ್ಯ
ಬೆಂಗಳೂರು, ಜುಲೈ 27: ಬಿಜೆಪಿ ಸರ್ಕಾರದ ಸಚಿವ ಸಂಪುಟ ಶೀಘ್ರದಲ್ಲಿಯೇ ರಚನೆ ಆಗಲಿದೆ. ಆದರೆ ನಾನು ಸಚಿವ ಸ್ಥಾನ ಆಕಾಂಕ್ಷಿ ಅಲ್ಲ ಎಂದು ಮಾಜಿ ಸಚಿವ, ಶಾಸಕ ರೇಣುಕಾಚಾರ್ಯ ಹೇಳಿದರು.
ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಸೋಮವಾರ ನಡೆಯುವ ವಿಶ್ವಾಸಮತ ಯಾಚನೆಯಲ್ಲಿ ಬಿಜೆಪಿ ಗೆಲ್ಲುವುದು ನೂರು ಪ್ರತಿಶತ ಸತ್ಯ ಎಂದೂ ಅವರು ಹೇಳಿದರು.
ಜೆಡಿಎಸ್ ಪಕ್ಷವು ಬಿಜೆಪಿಗೆ ಬಾಹ್ಯ ಬೆಂಬಲ ನೀಡಲು ಚಿಂತಿಸಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆ ಬಗ್ಗೆ ಮಾಹಿತಿ ಇಲ್ಲವೆಂದು ಹೇಳಿದರು.
ರೇಣುಕಾಚಾರ್ಯ ಅವರು ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಕಾಣಿಸಿಕೊಂಡಿದ್ದು, ಬಿಜೆಪಿಯ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದಾರೆ. ಈ ಹಿಂದೆ ಸಚಿವರೂ ಆಗಿದ್ದ ಅವರಿಗೆ ಈ ಬಾರಿಯೂ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ಆದರೆ ಅವರೇ ಸ್ವತಃ ತಾವು ಸಚಿವ ಸ್ಥಾನ ಆಕಾಂಕ್ಷಿ ಅಲ್ಲ ಎಂದಿರುವುದು ಆಶ್ಚರ್ಯ ಹುಟ್ಟಿಸಿದೆ.
ಬಿಜೆಪಿ ಸರ್ಕಾರವು ನಿನ್ನೆಯಷ್ಟೆ ಅಧಿಕಾರಕ್ಕೆ ಬಂದಿದ್ದು, ಯಡಿಯೂರಪ್ಪ ಅವರು ಒಬ್ಬರೇ ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಸಚಿವ ಸಂಪುಟ ರಚನೆ ಇನ್ನಷ್ಟೆ ಆಗಬೇಕಿದೆ. ಸಚಿವ ಸಂಪುಟ ರಚನೆ ಬಿಜೆಪಿಗೆ ಬಹಳ ಕಷ್ಟವಿದ್ದು, ಪಕ್ಷದಲ್ಲಿರುವ 105 ಜನರ ಜೊತೆಗೆ ಅತೃಪ್ತರಿಗೂ ಅವರು ಮಣೆ ಹಾಕಬೇಕಿದೆ.