ಲೋಕಸಭೆ ಚುನಾವಣೆ: ದೇವೇಗೌಡರ ವಿರುದ್ಧ ಸೆಣೆಸಲು ಸಿದ್ಧ: ಡಿವಿಎಸ್
ಬೆಂಗಳೂರು, ಜನವರಿ 28: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ಹಾಸನ ಲೋಕಸಭಾ ಕ್ಷೇತ್ರವನ್ನು ತೊರೆದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ದಟ್ಟವಾಗಿದೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಎಚ್.ಡಿ.ದೇವೇಗೌಡರು ಸ್ಪರ್ಧಿಸಲಿ ಹಾಗೂ ಅವರ ವಿರುದ್ಧ ಸೆಣಸಬೇಕು ಎಂಬುದು ನನ್ನ ಇಚ್ಛೆ ಕೂಡ ಎಂದು ಹಾಲಿ ಸಂಸದ ಡಿವಿ ಸದಾನಂದ ಗೌಡ ಅವರು ಪ್ರತಿಕ್ರಿಯಿಸಿದ್ದಾರೆ.
ನಾನು ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ: ಎಚ್.ಎಂ.ರೇವಣ್ಣ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಾಸನದಿಂದ ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು ಕಣಕ್ಕಿಳಿಸುವುದಾಗಿ ದೇವೇಗೌಡರು ಬಹುಕಾಲದಿಂದ ಹೇಳುತ್ತಾ ಬಂದಿದ್ದಾರೆ. ಪ್ರಜ್ವಲ್ ರನ್ನು ತಮ್ಮ ರಾಜಕೀಯ ಉತ್ತರಾಧಿಕಾರಿ ಎಂದು ಘೋಷಿಸಿದ್ದಾರೆ.
ದೇವೇಗೌಡರು ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿತ್ತು. ಮಂಡ್ಯದಿಂದ ದೇವೇಗೌಡರು ಕಣಕ್ಕಿಳಿಯಲಿದ್ದಾರೆ. ಅಥವಾ ಮೈಸೂರಿಗೆ ವಲಸೆ ಬರಬಹುದು ಎಂಬ ಗಾಳಿಸುದ್ದಿ ಹಬ್ಬಿದೆ. ಮಂಡ್ಯದಿಂದ ದೇವೇಗೌಡರ ಮತ್ತೊಬ್ಬ ಮೊಮ್ಮಗ ನಿಖಿಲ್ ಕುಮಾರ್ ಕಣಕ್ಕಿಳಿಸುವ ಸಾಧ್ಯತೆಯನ್ನು ಅಲ್ಲಗೆಳೆಯುವಂತಿಲ್ಲ.
ದೇವೇಗೌಡರು ಸುಳಿವು ನೀಡಿದ್ದಾರೆ
ಆದರೆ, ಈಗ ಲಭ್ಯ ಮಾಹಿತಿ ಪ್ರಕಾರ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಮಾಜಿ ಪ್ರಧಾನಿ ದೇವೇಗೌಡ ಅವರು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಅಭ್ಯರ್ಥಿಯಾಗಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆಯಿದೆ. ಜೆಡಿಎಸ್ಸಿನ ಬೆಂಗಳೂರು ನಗರ ಘಟಕದ ವತಿಯಿಂದ ಲೋಕಸಭಾ ಚುನಾವಣೆ ಪೂರ್ವ ಸಿದ್ಧತಾ ಸಭೆಯಲ್ಲಿ ಪಾಲ್ಗೊಂಡಿದ್ದ ದೇವೇಗೌಡರು, 'ನೀವು ಸಿದ್ಧತೆಯನ್ನು ಮಾಡಿಕೊಳ್ಳಿ ಎಂದು ಸ್ಥಳೀಯ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.
ಶೋಭಾ ಕರಂದ್ಲಾಜೆ ಅವರಿಗೂ ಆಫರ್ ಇದೆ
ಕರ್ನಾಟಕ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ಉತ್ತರ ಬಹಳ ಪ್ರಮುಖವಾದ ಕ್ಷೇತ್ರ. ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರು ಪ್ರತಿನಿಧಿಸುವ ಕ್ಷೇತ್ರವಾಗಿರುವುದರಿಂದ ಕೊಂಚ ಮಹತ್ವ ಹೆಚ್ಚು. ಆರ್ ಟಿ ನಗರ, ಇಂದಿರಾನಗರ, ಜಾಲಹಳ್ಳಿ, ಮಲ್ಲೇಶ್ವರ, ಯಶವಂತಪುರ ಸೇರಿದಂತೆ ಪ್ರಮುಖ ಬಡಾವಣೆಗಳನ್ನು ಹೊಂದಿರುವ ಈ ಕ್ಷೇತ್ರದಲ್ಲಿ ಈ ಬಾರಿಯೂ ಸದಾನಂದ ಗೌಡರು ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.
2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಈ ಕ್ಷೇತ್ರದಿಂದ ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಸದಾನಂದ ಗೌಡರನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಬೆಂಗಳೂರಿನ ಮಹತ್ವ ಲೋಕಸಭಾ ಕ್ಷೇತ್ರ
ಕರ್ನಾಟಕ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ಉತ್ತರ ಬಹಳ ಪ್ರಮುಖವಾದ ಕ್ಷೇತ್ರ. ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರು ಪ್ರತಿನಿಧಿಸುವ ಕ್ಷೇತ್ರವಾಗಿರುವುದರಿಂದ ಕೊಂಚ ಮಹತ್ವ ಹೆಚ್ಚು. ಆರ್ ಟಿ ನಗರ, ಇಂದಿರಾನಗರ, ಜಾಲಹಳ್ಳಿ, ಮಲ್ಲೇಶ್ವರ, ಯಶವಂತಪುರ ಸೇರಿದಂತೆ ಪ್ರಮುಖ ಬಡಾವಣೆಗಳನ್ನು ಹೊಂದಿರುವ ಈ ಕ್ಷೇತ್ರದಲ್ಲಿ ಈ ಬಾರಿಯೂ ಸದಾನಂದ ಗೌಡರು ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.
ದೇವೇಗೌಡರ ಲೆಕ್ಕಾಚಾರ ಏನು?
2019ರ ಲೋಕಸಭಾ ಚುನಾವಣೆಯಲ್ಲಿ 5 ಕ್ಷೇತ್ರಗಳಲ್ಲಿ ಗೆಲ್ಲಬೇಕು ಎಂಬುದು ಜೆಡಿಎಸ್ ಗುರಿ. ಮಂಡ್ಯ ಮತ್ತು ಹಾಸನ ಜೆಡಿಎಸ್ ಭದ್ರಕೋಟೆಯಾಗಿದ್ದು, ಜೆಡಿಎಸ್ ಅಭ್ಯರ್ಥಿಗಳು ಜಯಗಳಿಸುವುದು ಖಚಿತವಾಗಿದೆ. ಬೆಂಗಳೂರಿನಿಂದ ಸ್ಪರ್ಧೆ ಮಾಡಿದರೆ ಮತ್ತೊಂದು ಕ್ಷೇತ್ರವನ್ನು ವಶಕ್ಕೆ ಪಡೆದುಕೊಳ್ಳಬಹುದು ಎಂಬುದು ಗೌಡರ ಲೆಕ್ಕಾಚಾರವಾಗಿದೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಸುಮಾರು 20 ಲಕ್ಷ ಮತದಾರರು ಇದ್ದಾರೆ. ಇವರಲ್ಲಿ ಸುಮಾರು 7 ಲಕ್ಷ ಒಕ್ಕಲಿಗರಿದ್ದಾರೆ, 7 ಲಕ್ಷ ಒಬಿಸಿ ಮತಗಳಿವೆ. ಆದ್ದರಿಂದ, ದೇವೇಗೌಡರು ಬೆಂಗಳೂರು ನಗರದ ಮೇಲೆ ಕಣ್ಣಿಟ್ಟಿದ್ದಾರೆ.
ಬಿಜೆಪಿ ಹಿಡಿತದಲ್ಲಿರುವ ಕ್ಷೇತ್ರ
2004 ರಲ್ಲಿ ಭಾರತೀಯ ಜನತಾ ಪಕ್ಷದಿಂದ ಹೆಚ್ ಟಿ ಸಾಂಗ್ಲಿಯಾನ ಅವರು ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ಈ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದರು. ಆದರೆ ಅವರು ಬಿಜೆಪಿಯನ್ನು ತೊರೆದ ನಂತರ ಈ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಿ ಬಿ ಚಂದ್ರೇಗೌಡ ಅವರು ಸ್ಪರ್ಧಿಸಿ ಗೆಲುವು ಸಾಧಿಸಿದರು. 2014 ರಲ್ಲಿ ಡಿವಿ ಸದಾನಂದಗೌಡ ಅವರು ಗೆಲುವು ಸಾಧಿಸುವ ಮೂಲಕ ಸತತ ಮೂರು ಬಾರಿಗೆ ಬಿಜೆಪಿಯೇ ಈ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಜಯ ಗಳಿಸುವಂತೆ ಮಾಡಿದರು.