ಸಂಪುಟ ವಿಸ್ತರಣೆ: ಹೈಕಮಾಂಡ್ ಆದೇಶಕ್ಕೆ ಕಾದು ಕುಳಿತ ಯಡಿಯೂರಪ್ಪ!
ಬೆಂಗಳೂರು, ಸೆ. 19: ಹೈಕಮಾಂಡ್ ಭೇಟಿಗೆ ತೆರಳಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬರಿಗೈಲಿ ವಾಪಸಾಗಿದ್ದಾರೆ. ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಅನುಮತಿ ಕೊಟ್ಟಿಲ್ಲ. ಹೀಗಾಗಿ ಅಧಿವೇಶನಕ್ಕೂ ಮೊದಲು ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಲ್ಲ ಎಂಬಂತಾಗಿದೆ. ದೆಹಲಿ ಪ್ರವಾಸದ ಬಳಿಕ ಹಿಂದಿರುಗಿದ ಬಳಿಕ ಬೆಂಗಳೂರಿನಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಸಂಪುಟ ವಿಸ್ತರಣೆಗೆ ವರಿಷ್ಠರ ಸಂದೇಶಕ್ಕಾಗಿ ನಾನು ಕಾಯುತ್ತಿದ್ದೇನೆ ಎಂದಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಜೊತೆ ನಿನ್ನೆ ಮಾತಾಡಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಭೇಟಿಯಾಗಿದ್ದೇನೆ. ಜೊತೆಗೆ ನಡ್ಡಾ ಅವರೂ ಪ್ರಧಾನಿ ಮೋದಿ ಅವರ ಜೊತೆ ಚರ್ಚಿಸಿ ತಿಳಿಸುವುದಾಗಿ ಹೇಳಿದ್ದಾರೆ. ಜೆ.ಪಿ. ನಡ್ಡಾ ಅವರಿಂದ ಸಂದೇಶ ಬಂದ ಕೂಡಲೇ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದರು.
Recommended Video
ಈ ಬಾರಿಯ ದೆಹಲಿಯ ನನ್ನ ಪ್ರವಾಸ ಯಶಸ್ವಿಯಾಗಿದೆ. ರಾಜ್ಯದ ಅಭಿವೃಧ್ಧಿಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಹಾಗೂ ಕೇಂದ್ರದ ಸಚಿವರನ್ನು ಭೇಟಿಯಾಗಿ ಬಂದಿರುವೆ. ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಿದ್ದೇನೆ, ಅವರು ಕೂಡ ಉತ್ತಮ ಸ್ಪಂದನೆ ನೀಡಿದ್ದಾರೆ ಎಂದಿದ್ದಾರೆ.