ಅಧಿಕಾರಕ್ಕೆ ಬಿಜೆಪಿಗೆ ಬಂದಿಲ್ಲ, ವಂಶಪಾರಂಪರ್ಯ ಆಡಳಿತ ಬೇಡವಾಗಿತ್ತು: ಎಸ್ಎಂ ಕೃಷ್ಣ
ಬೆಂಗಳೂರು, ಏ.3: ಇದು ಲೋಕಸಭಾ ಚುನಾವಣೆ ಒಕ್ಕಲಿಗರ ಸಂಘದ ಚುನಾವಣೆಯಲ್ಲ ಬಿಜೆಪಿ ಹಿರಿಯ ನಾಯಕ ಎಸ್.ಎಂ ಕೃಷ್ಣ ಹೇಳಿದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಬೆಂಗಳೂರು ವರದಿಗಾರರ ಕೂಟ ಮತ್ತು ಬೆಂಗಳೂರು ಪ್ರೆಸ್ ಕ್ಲಬ್ ಜಂಟಿಯಾಗಿ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾನು ಬಿಜೆಪಿಗೆ ಅಧಿಕಾರಕ್ಕಾಗಿ ಬಂದಿಲ್ಲ, ವಂಶಪಾರಪರ್ಯ ಆಡಳಿತ ಬೇಡವಾಗಿತ್ತು ಹಾಗಾಗಿ ಬಂದಿದ್ದೇನೆ ಎಂದರು.
ಲೋಕಸಭೆಗೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಾನು ದೇವೇಗೌಡರ ಹಿಂದೆ ನಿಲ್ಲದೇ ಇರುವುದು ವಿಪರ್ಯಾಸ ಅಲ್ಲ ಎಂದು ಸ್ಪಷ್ಟಪಡಿಸಿದರು.

ನಾನು ಎಂದೂ ಹಿಂಬಾಗಿಲ ರಾಜಕಾರಣ ಮಾಡಿಲ್ಲ. 132 ಕಾಂಗ್ರೆಸ್ ಶಾಸಕರನ್ನು ಹೆಗಲ ಮೇಲೆ ಇಟ್ಟುಕೊಂಡು ಮುಖ್ಯಮಂತ್ರಿ ಆಗಿದ್ದೆ. ಆದರೆ ಅಧಿಕಾರಕ್ಕಾಗಿ ಇದ್ದಕ್ಕಿದ್ದಂತೆ ಕಾಂಗ್ರೆಸ್ ಜತೆ ಕೈ ಜೋಡಿಸಿ ರಾತ್ರೋ ರಾತ್ರಿ ಮುಖ್ಯಮಂತ್ರಿ ಆದರಲ್ಲ, ಅವರದ್ದು ಹಿಂಬಾಗಿಲ ರಾಜಕಾರಣ ಎಂದು ಪರೋಕ್ಷವಾಗಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಟಾಂಗ್ ನೀಡಿದರು.
ರಾಜೀವ್ ಗಾಂಧಿ ಇದ್ದಾಗ ಪೂರ್ಣ ಪ್ರಮಾಣದ ಸಹಕಾರ ಸಿಗುತ್ತಿತ್ತು. ಆದರೆ, ಕಾಂಗ್ರೆಸ್ ಪಕ್ಷದಲ್ಲಿ ಈಗ ಅಂತಹ ಬೆಳವಣಿಗೆ, ವಾತಾವರಣ ಇಲ್ಲ. ಹೀಗಾಗಿ ಪಕ್ಷ ತೊರೆದು ಬಂದೆ ಎಂದು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡರು. ಯಾವ ಆಸೆ ಮತ್ತು ಅಧಿಕಾರದ ಗುರಿ ಇಟ್ಟುಕೊಂಡು ಬಿಜೆಪಿಗೆ ಬಂದಿಲ್ಲ.
ರಾಜ್ಯದಲ್ಲೂ ವಂಶಪಾರಂಪರ್ಯ ರಾಜಕಾರಣ ನಡೆಯುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ತಾತ ಹಾಗೂ ಇಬ್ಬರು ಮೊಮ್ಮಕ್ಕಳು ಸ್ಪರ್ಧಿಸಿದ್ದಾರೆ. ಇದು ಸರಿಯಲ್ಲ. ನಾಳೆ ಮಂಡ್ಯದಲ್ಲಿ ಇದನ್ನು ಮತ್ತೆ ಹೇಳುತ್ತೇನೆ ಎಂದರು.
ನನ್ನನ್ನು ರಾಜ್ಯ ರಾಜಕಾರಣದಿಂದ ಹೊರಗೆ ಹಾಕಬೇಕೆಂಬ ಹುನ್ನಾರ ನಡೆದಿತ್ತು. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾದಾಗ ಎಸ್.ಎಂ.ಕೃಷ್ಣ ಒಬ್ಬರನ್ನು ಹೊರತುಪಡಿಸಿ ಬೇರೆ ಯಾರಾದರೂ ಮುಖ್ಯಮಂತ್ರಿ ಆಗಲಿ ಎಂದು ಜೆಡಿಎಸ್ ಷರತ್ತು ವಿಧಿಸಿತ್ತು. ಅದಕ್ಕೆ ನನ್ನನ್ನು ಮಹಾರಾಷ್ಟ್ರದ ರಾಜ್ಯಪಾಲರನ್ನಾಗಿ ಮಾಡಲಾಯಿತು ಎಂದು ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.
ಬೆಂಗಳೂರು ಅಭಿವೃದ್ಧಿಯ ಬಗ್ಗೆ ಹಲವಾರು ಯೋಜನೆಗಳನ್ನು ರೂಪಿಸಿದ್ದೆ. ನನ್ನ ಅವಧಿಯಲ್ಲಿ ಪ್ರಾರಂಭವಾದ ಯೋಜನೆಗಳು ಅದೇ ವೇಗದಲ್ಲಿ ಮುಂದುವರಿದಿದ್ದರೆ ಬೆಂಗಳೂರು ಮತ್ತಷ್ಟು ಅಭಿವೃದ್ಧಿಯಾಗುತ್ತಿತ್ತು ಎಂದು ಹೇಳಿದರು.












Click it and Unblock the Notifications