ರಾಜೀನಾಮೆ ನೀಡುವ ಬಗ್ಗೆ ಮೌನ ಮುರಿದ ಶಾಸಕಿ ಸೌಮ್ಯಾ ರೆಡ್ಡಿ
ಬೆಂಗಳೂರು, ಜುಲೈ 11 : 'ನಮ್ಮ ತಂದೆ ಏಕೆ ರಾಜೀನಾಮೆ ನೀಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತು. ನಾನು ರಾಜೀನಾಮೆ ನೀಡುವುದಿಲ್ಲ. ಸಿಎಲ್ಪಿ ಸಭೆಗೂ ಹೋಗಿದ್ದೆ. ನಾಳೆ ಅಧಿವೇಶನಕ್ಕೂ ಹೋಗುತ್ತೇನೆ' ಎಂದು ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಹೇಳಿದರು.
ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 'ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯಿಂದ ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿದೆ. ಪಕ್ಷವನ್ನು ಉಳಿಸಿಕೊಳ್ಳಿ ಎಂದು ಸೋನಿಯಾ ಗಾಂಧಿ ಅವರು ಹೇಳಿದರು' ಎಂದರು.
'ನಾನು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಘಟಕದ ಕಾರ್ಯದರ್ಶಿಯಾಗಿದ್ದೇನೆ. ಹೀಗಾಗಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದೆ. ಆಗ ಅವರು ರಾಜ್ಯದ ಪರಿಸ್ಥಿತಿ ಬಗ್ಗೆಯೂ ಮಾತನಾಡಿದರು. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಸಂಕಷ್ಟದಲ್ಲಿದೆ' ಎಂದು ಸೌಮ್ಯಾ ರೆಡ್ಡಿ ತಿಳಿಸಿದರು.

'ಶಾಸಕ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತೇನೆ ಎಂಬ ಸುದ್ದಿಗಳು ಸುಳ್ಳು. ಸಿಎಲ್ಪಿ ಸಭೆಗೆ ಹೋಗಿದ್ದೆ. ನಾಳೆ ಅಧಿವೇಶನಕ್ಕೂ ಹೋಗುತ್ತೇನೆ. ರಾಜೀನಾಮೆ ನೀಡುವುದಾದದರೆ ನಿಮಗೆ ಹೇಳಿಯೇ ಕೊಡುತ್ತೇನೆ' ಎಂದು ಸ್ಪಷ್ಟಪಡಿಸಿದರು.
'ನನ್ನ ತಂದೆ ರಾಮಲಿಂಗಾ ರೆಡ್ಡಿ ಅವರಿಗೆ ಬಹಳ ನೋವು ಮತ್ತು ಬೇಸರವಾಗಿದೆ. ಹಾಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟರು. ಯಾವ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ' ಎಂದು ಸೌಮ್ಯಾ ರೆಡ್ಡಿ ಹೇಳಿದರು.
ಸೌಮ್ಯಾ ರೆಡ್ಡಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಬುಧವಾರ ಹಬ್ಬಿತ್ತು. ರಾಮಲಿಂಗಾ ರೆಡ್ಡಿ ಅವರು ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.












Click it and Unblock the Notifications