ಯಡಿಯೂರಪ್ಪಗೆ ವೆಲ್ ಕಂ ಅಂದ್ರು ಅನಂತ್ ಕುಮಾರ್!
ಬೆಂಗಳೂರು, ಡಿ. 7 : ಕರ್ನಾಟಕ ಬಿಜೆಪಿಯ ಎಲ್ಲಾ ನಾಯಕರು ಮಾಜಿ ಮುಖ್ಯಮಂತ್ರಿ, ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಮರಳಿ ಕರೆತರಲು ತುದಿಗಾಲಲ್ಲಿ ನಿಂತಿದ್ದಾರೆ. ಸದ್ಯ ಯಡಿಯೂರಪ್ಪ ರಾಜಕೀಯ ವೈರಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಯಡಿಯೂರಪ್ಪ ಅವರಿಗೆ ಸ್ವಾಗತ ಕೋರುತ್ತೇನೆ ಎಂದು ಹೇಳುವ ಮೂಲಕ ಅವರಿಗೆ ಅಧಿಕೃತ ಆಹ್ವಾನ ನೀಡಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅನಂತ್ ಕುಮಾರ್, ಭ್ರಷ್ಟ ಕಾಂಗ್ರೆಸ್ ತೊಲಗಿಸಲು ಎಲ್ಲರೂ ಒಂದಾಗಿ ಹೋಗುವ ಅನಿವಾರ್ಯತೆ ಇದೆ. ಆದ್ದರಿಂದ ಕರ್ನಾಟಕದಲ್ಲಿ ಬಿಜೆಪಿಗೆ ಯಡಿಯೂರಪ್ಪ ಅವರ ಅಗತ್ಯವಿದೆ. ಅವರು ಬಿಜೆಪಿಗೆ ಬರಲು ಪಕ್ಷದ ಬಾಗಿಲು ತೆರದಿದೆ. ನಾನು ಸಹ ಅವರನ್ನು ಸ್ವಾಗತಿಸುತ್ತೇನೆ ಎಂದು ಹೇಳಿದರು. (ಯಡಿಯೂರಪ್ಪಗೆ ಮೊದಲ ಆಹ್ವಾನ)

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ಕಾಂಗ್ರೆಸ್ ಪಕ್ಷವನ್ನು ಎದುರಿಸಬೇಕಾಗಿದೆ. ಆದ್ದರಿಂದ ಯಡಿಯೂರಪ್ಪ ಅವರನ್ನು ಮತ್ತೆ ಪಕ್ಷಕ್ಕೆ ಕರೆತರುವ ಅನಿವಾರ್ಯತೆ ಇದೆ. ಈ ಕುರಿತು ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ಜೊತೆ ನಾನು ಮಾತುಕತೆ ನಡೆಸಿದ್ದೇನೆ. ಸದ್ಯದಲ್ಲೇ ವರಿಷ್ಠರು ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ ಎಂದರು. (ಯಡಿಯೂರಪ್ಪ ಬದಲಾದ್ರಪ್ಪ!)
ಕೆಜೆಪಿಯಲ್ಲೇ ವಿರೋಧ : ಬಿ.ಎಸ್.ಯಡಿಯೂರಪ್ಪ ಬಿಜೆಪಿಗೆ ಸೇರುವುದಕ್ಕೆ ಕೆಜೆಪಿಯ ಮೂವರು ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕೆಜೆಪಿ ವಿಧಾನಸಭೆಯಲ್ಲಿ ಆರು ಶಾಸಕರನ್ನು ಹೊಂದಿದ್ದು, ಆ ಪೈಕಿ ಬಿ.ಆರ್.ಪಾಟೀಲ್, ಗುರು ಪಾಟೀಲ್ ಮತ್ತು ಗುರುಪಾದಪ್ಪ ನಾಗಮಾರಪಳ್ಳಿ ಬಿಜೆಪಿ ಸೇರುವುದನ್ನು ವಿರೋಧಿಸುತ್ತಿದ್ದಾರೆ.
ಬೆಂಬಲಿಗರಿಗೆ ಅರ್ಧಚಂದ್ರ : ಯಡಿಯೂರಪ್ಪ ಅವರನ್ನು ಮರಳಿ ಬಿಜೆಪಿಗೆ ಸೇರಿಸಿಕೊಳ್ಳಲು ಎಲ್ಲಾ ನಾಯಕರು ತಯಾರಾಗಿದ್ದಾರೆ. ಆದರೆ, ಅವರ ಬೆಂಬಲಿಗರ ಕುರಿತು ರಾಜ್ಯ ಬಿಜೆಪಿ ನಾಯಕರು ಮೌನವಹಿಸಿದ್ದಾರೆ. ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಯಡಿಯೂರಪ್ಪ ಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿಕೊಳ್ಳುವ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. (ಬಿಜೆಪಿಯಿಂದ ಯಡಿಯೂರಪ್ಪ ದೂರವಾಗಲು 7 ಕಾರಣಗಳು)
ಯಡಿಯೂರಪ್ಪ ಅವರೇ ಈ ಕುರಿತು ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಿ ತೀರ್ಮಾನಿಸಲಿ ಎಂಬ ಇಂಗಿತವನ್ನು ಕೆಲವು ಕೆಜೆಪಿ ನಾಯಕರು ಹೊಂದಿದ್ದಾರೆ. ಆದ್ದರಿಂದ ಪಕ್ಷ ಸೇರ್ಪಡೆ ಕುರಿತು ಚರ್ಚಿಸಲು ಯಡಿಯೂರಪ್ಪ ಅವರು ದೆಹಲಿಗೆ ಹೋಗುವಾಗ ಬೆಂಬಲಿಗರ ಕುರಿತು ಚರ್ಚಿಸಿ ನಿರ್ಧಾರಕ್ಕೆ ಬರಲಿದ್ದಾರೆ. ಸದ್ಯ ಯಡಿಯೂರಪ್ಪ ಬೆಂಬಲಿಗರ ಪರಿಸ್ಥಿತಿ ಅತಂತ್ರವಾಗಿದೆ. ಆದ್ದರಿಂದ ಅವರು ಬಿಜೆಪಿಗೆ ಯಡಿಯೂರಪ್ಪ ಮರಳಲು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.












Click it and Unblock the Notifications