ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಪಾರ್ಥಿವ ಶರೀರ ಭೋಪಾಲ್ಗೆ ರವಾನೆ
ಬೆಂಗಳೂರು, ಡಿಸೆಂಬರ್ 16: ತಮಿಳುನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ಪತನ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಸೇನಾ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬುಧವಾರ ನಿಧನರಾಗಿದ್ದಾರೆ.
ಡಿ.8ರಂದು ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ 11 ಸೇನಾಧಿಕಾರಿಗಳು ಸೇರಿ 13 ಮಂದಿ ಮೃತಪಟ್ಟಿದ್ದರು. ಒಂದು ವಾರಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ಕ್ಯಾಪ್ಟನ್ ವರುಣ್ ಸಿಂಗ್ ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ಹುತಾತ್ಮರಾಗಿದ್ದಾರೆ.
ಶೇ.45ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಕ್ಯಾಪ್ಟನ್ ವರುಣ್ ಸಿಂಗ್ ಅವರಿಗೆ ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮೊದಲು ತಮಿಳುನಾಡಿನ ವೆಲ್ಲಿಂಗ್ಟನ್ನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತಾದರೂ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು.

ಗುರುವಾರ ಬೆಳಗ್ಗೆ 10 ಗಂಟೆಗೆ ಆಸ್ಪತ್ರೆಯಿಂದ ಯಲಹಂಕ ವಾಯುನೆಲೆಗೆ ಕ್ಯಾಪ್ಟನ್ ವರುಣ್ ಸಿಂಗ್ ಪಾರ್ಥಿವ ಶರೀರ ರವಾನೆಯಾಗಿದ್ದು, ಬಳಿಕ ಯಲಹಂಕದಿಂದ ಭೂಪಾಲ್ಗೆ ಪಾರ್ಥಿವ ಶರೀರ ರವಾನೆಯಾಗಿದೆ.
ಬೆಳಗ್ಗೆ 10 ಗಂಟೆಗೆ ಕಮಾಂಡೋ ಆಸ್ಪತ್ರೆಯಿಂದ ಯಲಹಂಕ ಏರ್ ಬೇಸ್ಗೆ ಪಾರ್ಥೀವ ಶರೀರ ತೆಗೆದುಕೊಂಡು ಬಂದರು. ಬಳಿಕ ಗೌರವ ನಮನ ಸಲ್ಲಿಸಲಾಯಿತು. ಇದಾದ ಬಳಿಕ ಯಲಹಂಕದಿಂದ ಭೂಪಾಲ್ಗೆ ಪಾರ್ಥಿವ ಶರೀರ ರವಾನೆ ಮಾಡಲಾಯಿತು. ಸರ್ವೀಸ್ ಏರ್ಕ್ರಾಫ್ಟ್ ಮೂಲಕ ಪಾರ್ಥಿವ ಶರೀರ ತೆಗೆದುಕೊಂಡು ಅಧಿಕಾರಿಗಳು ತೆರಳಿದರು.
ಕ್ಯಾಪ್ಟನ್ ವರುಣ್ ಸಿಂಗ್ ಅವರ ಪಾರ್ಥಿವ ಶರೀರ ಮಧ್ಯಾಹ್ನದ ವೇಳೆಗೆ ಭೋಪಾಲ್ಗೆ ತಲುಪಲಿದೆ. ಸೇನಾ ಅಧಿಕಾರಿಗಳು ಕುಟುಂಬಸ್ಥರಿಗೆ ಕ್ಯಾಪ್ಟನ್ ವರುಣ್ ಸಿಂಗ್ ಪಾರ್ಥಿವ ಶರೀರವನ್ನು ಹಸ್ತಾಂತರಿಸಲಿದ್ದಾರೆ. ಬಳಿಕ ಕುಟುಂಬಸ್ಥರು ಹಾಗೂ ಸ್ನೇಹಿತರೆಲ್ಲ ಅಂತಿಮ ದರ್ಶನ ಪಡೆಯಲಿದ್ದಾರೆ. ಇದಾದ ಬಳಿಕ ಅಂತ್ಯಕ್ರಿಯೆ ನಡೆಯಲಿದೆ.

ಕಳೆದ ವರ್ಷ ತೇಜಸ್ ಯುದ್ಧ ವಿಮಾನದಲ್ಲಿ ಕಾಣಿಸಿಕೊಂಡ ತಾಂತ್ರಿಕ ಸಮಸ್ಯೆ ನಡುವೆಯೂ ವರುಣ್ ಸಿಂಗ್ ಧೈರ್ಯವಾಗಿ, ಎಚ್ಚರಿಕೆಯಿಂದ ಸುರಕ್ಷಿತಾಗಿ ವಿಮಾನವನ್ನು ಕೆಳಗಿಳಿಸಿದ್ದರು.
ಕಳೆದ ಆಗಸ್ಟ್ 15ರಂದು ವಿಂಗ್ ಕಮಾಂಡರ್ ವರುಣ್ ಸಿಂಗ್ ಹಗುರ ಯುದ್ಧ ವಿಮಾನ ಸ್ಕ್ವಾರ್ಡನ್ನಲ್ಲಿ ಪೈಲಟ್ ಆಗಿದ್ದರು. ವರುಣ್ ಸಿಂಗ್ ಭಾರತದ ಸಶಸ್ತ್ರ ಪಡೆಗಳಿಗೆ ಶಾಂತಿಕಾಲದಲ್ಲಿ ನೀಡುವ ಮೂರನೇ ಅತ್ಯುನ್ನತ ಗೌರವವಾದ ಶೌರ್ಯಚಕ್ರ ನೀಡಿ ಪುರಸ್ಕರಿಸಲಾಗಿತ್ತು.
ಪ್ರಭಾರಿ ಸಿಡಿಎಸ್ ಆಗಿ ಅಧಿಕಾರ ಸ್ವೀಕರಿಸಿದ ಎಂ.ಎಂ. ನರವಾಣೆ
ಭಾರತದ ಮೊದಲ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ನಿಧನದ ನಂತರ ಹೊಸ ಸಿಡಿಎಸ್ ನೇಮಕವಾಗಬೇಕಿದೆ. ಈಗಿರುವ ಮೂರು ಸೇನಾ ಮುಖ್ಯಸ್ಥರಲ್ಲಿ ಭೂಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರಾವಣೆ ಚೀಫ್ ಆಫ್ ಸ್ಟಾಫ್ ಕಮಿಟಿಯ ಪ್ರಭಾರಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಭಾರತೀಯ ಭೂ ಸೇನೆಯ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಹಿರಿಯ ಅಧಿಕಾರಿಯಾಗಿದ್ದು, ಸಿಡಿಎಸ್ ಕಚೇರಿ ಅಸ್ತಿತ್ವಕ್ಕೆ ಬರುವ ಮೊದಲು ಇದ್ದ ಸ್ಥಿತಿಯಂತೆ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಹೊಸ ಸಿಡಿಎಸ್ ನೇಮಕಗೊಳ್ಳುವವರೆಗೆ ಅಥವಾ ಸಿಡಿಎಸ್ ಅನುಪಸ್ಥಿತಿಯಲ್ಲಿ ಅತ್ಯಂತ ಹಿರಿಯ ಮುಖ್ಯಸ್ಥರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವುದು ಕಾರ್ಯ ವಿಧಾನದ ಹಂತವಾಗಿದೆ.
ಡಿಸೆಂಬರ್ 8ರಂದು ತಮಿಳುನಾಡಿನ ಕೂನೂರಿನಲ್ಲಿ ನಡೆದ ಹೆಲಿಕಾಫ್ಟರ್ ಅಪಘಾತದಲ್ಲಿ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್, ರಕ್ಷಣಾ ಬ್ರಿಗೇಡಿಯರ್ ಎಲ್.ಎಸ್. ಲಿಡ್ಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಮತ್ತು ಇತರ 10 ಮಂದಿ ಸಾವನ್ನಪ್ಪಿದ್ದರು. ಇದರ ಹಿನ್ನೆಲೆಯಲ್ಲಿ ಬದಲಾವಣೆಯನ್ನು ತರಲಾಗಿದೆ. ಈ ಹಿಂದೆಯೂ ಸಿಡಿಎಸ್ ನೇಮಕಕ್ಕೂ ಮುನ್ನ ಇದೇ ವ್ಯವಸ್ಥೆ ಅನುಸರಿಸಲಾಗುತ್ತಿತ್ತು.












Click it and Unblock the Notifications