ಐಎಎಸ್ ಅಧಿಕಾರಿಯಾಗಿ ರಾಜಕೀಯದಲ್ಲಿ ತೊಡಗಿದ್ದಾರೆ: ಅನಿಲ್ ಕುಮಾರ್ ವಿರುದ್ಧ ಕಾನೂನು ಕ್ರಮಕ್ಕೆ ಆಪ್ ಆಗ್ರಹ
ಬೆಂಗಳೂರು, ಜುಲೈ 28: ಐಎಎಸ್ ಅಧಿಕಾರಿಯಾಗಿದ್ದರೂ ರಾಜಕೀಯದಲ್ಲಿ ತೊಡಗಿಕೊಂಡಿರುವ ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಬಿ.ಎಚ್ ಅನಿಲ್ ಕುಮಾರ್ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಆಮ್ ಆದ್ಮಿ ಪಕ್ಷ ಒತ್ತಾಯಿಸಿದೆ.
ನಗರದ ಎಎಪಿಯ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ, "ಜುಲೈ 31ರಂದು ನಿವೃತ್ತರಾಗಲಿರುವ ಅನಿಲ್ ಕುಮಾರ್ ನಿವೃತ್ತಿಗೂ ಮುನ್ನವೇ ಸಕ್ರಿಯ ರಾಜಕೀಯದಲ್ಲಿ ತೊಡಗಿಕೊಳ್ಳುವ ಮೂಲಕ ಐಎಎಸ್ ಹುದ್ದೆಗೆ ಅಗೌರವ ತರುತ್ತಿದ್ದಾರೆ. 2023ರ ವಿಧಾನಸಭಾ ಚುನಾವಣೆಗೆ ಕೊರಟಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೆಂದು ಘೋಷಿಸಿಕೊಂಡು ಪ್ರಚಾರದಲ್ಲಿ ನಿರತರಾಗಿದ್ದಾರೆ. ಇದು ಅಖಿಲ ಭಾರತ ಸೇವೆಗಳ ನಿಯಮ 1968ರ ನಿಯಮ 3 ಹಾಗೂ 5ರ ಸ್ಪಷ್ಟ ಉಲ್ಲಂಘನೆಯಾಗಿದೆ" ಎಂದು ಆರೋಪಿಸಿದ್ದಾರೆ.
ಅನಿಲ್ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ಹಾಗೂ ಕೇಂದ್ರ ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾ ಅವರಿಗೆ ದೂರು ನೀಡಲು ಆಮ್ ಆದ್ಮಿ ಪಕ್ಷ ನಿರ್ಧರಿಸಿದೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಜನರ ಮೇಲೆ ಪ್ರಭಾವ ಬೀರುತ್ತಿರುವ ಅನಿಲ್ ಕುಮಾರ್ ಚುನಾವಣೆಗೆ ಸ್ಪರ್ಧಿಸಿದರೆ ಆಮ್ ಆದ್ಮಿ ಪಕ್ಷ ಪ್ರತಿಭಟನೆ ಮಾಡಲಿದೆ ಎಂದು ಹೇಳಿದರು.

ನ್ಯಾಯಾಂಗ ತನಿಖೆಗೆ ಆಪ್ ಆಗ್ರಹ
ಅನಿಲ್ ಕುಮಾರ್ರವರ ಸ್ವಜನ ಪಕ್ಷಪಾತ, ಅಧಿಕಾರ ದುರ್ಬಳಕೆ, ಗುತ್ತಿಗೆ ಕಾಮಗಾರಿಗಳಲ್ಲಿ ಮಾಡಿರುವ ಅಕ್ರಮಗಳ ಕುರಿತು ಸರ್ಕಾರವು ಸಮಗ್ರ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು ಎಂದು ಜಗದೀಶ್ ವಿ ಸದಂ ಒತ್ತಾಯಿಸಿದ್ದಾರೆ.
ಆಪ್ ತುಮಕೂರು ಜಿಲ್ಲಾ ಉಸ್ತುವಾರಿ ಡಾ. ವಿಶ್ವನಾಥ್ ಮಾತನಾಡಿ, "ಅನಿಲ್ ಕುಮಾರ್ ಅಧಿಕಾರ ದುರ್ಬಳಕೆ ಮಾಡಿಕೊಂಡು ಕೊರಟಗೆರೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಗೆ ಲೋಕೋಪಯೋಗಿ ಇಲಾಖೆಯ ಹಲವು ತುಂಡುಗುತ್ತಿಗೆಗಳನ್ನು ನೀಡಿದ್ದಾರೆ. ಈ ಮೂಲಕ ಕೋಟ್ಯಂತರ ರುಪಾಯಿ ಮೊತ್ತದ ಕಳಪೆ ಕಾಮಗಾರಿಗಳಿಗೆ ಕಾರಣರಾಗಿದ್ದಾರೆ" ಎಂದು ಆರೋಪಿಸಿದರು.

ಜನರ ತೆರಿಗೆ ಹಣವು ಬಿಜೆಪಿ ಕಾರ್ಯಕರ್ತರ ಪಾಲಾಗುತ್ತಿದೆ. ಅನಿಲ್ ಕುಮಾರ್ ಚುನಾವಣೆಗೆ ಸ್ಪರ್ಧಿಸದಂತೆ ಚುನಾವಣಾ ಆಯೋಗ ನಿರ್ಬಂಧ ಹೇರಬೇಕು. ಅನಿಲ್ ಕುಮಾರ್ ಸಲ್ಲಿಸಲಿರುವ ಚುನಾವಣಾ ಉಮೇದುವಾರಿಕೆಯನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಿದ್ದಾರೆ.












Click it and Unblock the Notifications