ಈದ್ಗಾ ಮೈದಾನ; ಚಾಮರಾಜಪೇಟೆಯಲ್ಲಿ ಶುಕ್ರವಾರ ಪೊಲೀಸ್ ಪಥ ಸಂಚಲನ
ಬೆಂಗಳೂರು, ಆಗಸ್ಟ್, 11: ಆಗಸ್ಟ್ 15ರಂದು ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸರ್ಕಾರದಿಂದ ಧ್ವಜಾರೋಹಣ ಮಾಡಲು ವ್ಯವಸ್ಥೆ ಮಾಡಲಾಗಿದೆ. ಮೈದಾನದ ಸುತ್ತಮುತ್ತ ಈಗಾಗಲೇ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಶುಕ್ರವಾರ ಬೆಳಗ್ಗೆ 10:15ಕ್ಕೆ ಪೊಲೀಸರು ಚಾಮರಾಜಪೇಟೆಯಲ್ಲಿ ಪಥ ಸಂಚಲನ ನಡೆಸಲಿದ್ದಾರೆ.
ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದದ ಭಾರೀ ಚರ್ಚೆಗೆ ಕಾರಣವಾಗಿದೆ. ಸ್ವಾತಂತ್ರ್ಯೋತ್ಸವ ದಿನದಂದು ಧ್ವಜಾರೋಹಣ ನಡೆಯಲಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಭದ್ರತೆಯನ್ನು ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಶುಕ್ರವಾರ ಪೊಲೀಸ್ ಪಥಸಂಚಲನ ನಡೆಯಲಿದೆ.
ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆಗಸ್ಟ್ 15ರಂದು ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ರಾಜ್ಯ ಸರಕಾರದಿಂದಲೇ ಧ್ವಜಾರೋಹಣ ನೆರವೇರಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.

ಗುರುವಾರ ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, "ಆಗಸ್ಟ್ 15ರಂದು ಸರ್ಕಾರದ ಪರವಾಗಿ ಉಪವಿಭಾಗಾಧಿಕಾರಿ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಪಾಲ್ಗೊಳ್ಳಬಹುದು" ಎಂದು ಸ್ಪಷ್ಟನೆ ನೀಡಿದರು.
"ಧ್ವಜಾರೋಹಣ ಸಂದರ್ಭದಲ್ಲಿ ಯಾರೂ ಧಾರ್ಮಿಕ ಘೋಷಣೆಗಳನ್ನು ಕೂಗುವಂತಿಲ್ಲ. ಇದರ ಬದಲಾಗಿ ರಾಷ್ಟ್ರದ ಕುರಿತು ಘೋಷಣೆ ಕೂಗಲು ಅವಕಾಶವಿದೆ. ಚಾಮರಾಜಪೇಟೆ ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ್ದು, ಆದ ಕಾರಣ ಆ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುವುದು" ಎಂದು ಆರ್. ಅಶೋಕ ಹೇಳಿದರು.

"ಈದ್ಗಾ ಮೈದಾನದಲ್ಲಿ ಯಾವುದೇ ಸಂಘಟನೆ ಅಥವಾ ಆ ಕ್ಷೇತ್ರದ ಶಾಸಕರಾದ ಜಮೀರ್ ಅಹಮ್ಮದ್ ಖಾನ್ ಸೇರಿದಂತೆ ಬೇರೆಯವರೂ ಕೂಡ ವೈಯಕ್ತಿಕವಾಗಿ ಧ್ವಜಾರೋಹಣ ನೆರವೇರಿಸಲು ಅವಕಾಶವಿಲ್ಲ. ಮೈದಾನದಲ್ಲಿ ರಾಜ್ಯ ಸರಕಾರವೇ ಧ್ವಜಾರೋಹಣ ನೆರವೇರಿಸಲಿದೆ. ಆದ್ದರಿಂದ ಯಾವುದೇ ರೀತಿಯ ಗೊಂದಲಕ್ಕೆ ಅವಕಾಶವಿಲ್ಲ" ಎಂದು ಸಚಿವರು ತಿಳಿಸಿದರು.
"ಚಾಮರಾಜಪೇಟೆಯ ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದೆ. ಯಾವುದೇ ಕಾರಣಕ್ಕೂ ಯಾರಿಗೂ ಹಸ್ತಾಂತರ ಮಾಡಿಲ್ಲ. ಆಗಸ್ಟ್ 15ರ ಸ್ವಾತಂತ್ರ್ಯೋವ ದಿನದಂದು ಅಲ್ಲಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಲಾಗುತ್ತದೆ. ಸ್ಥಳೀಯ ಶಾಸಕರಾದ ಜಮೀರ್ ಅಹಮ್ಮದ್ ಖಾನ್, ಸಂಸದ ತೇಜಸ್ವಿ ಸೂರ್ಯ ಅವರನ್ನು ಆಹ್ವಾನಿಸಲಾಗುವುದು. ಈ ಸಂದರ್ಭದಲ್ಲಿ ಮೈದಾನಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುವುದು" ಎಂದು ಆರ್.ಅಶೋಕ ಹೇಳಿದ್ದಾರೆ.












Click it and Unblock the Notifications