ಬಡವರಿಗೆ 10 ಸಾವಿರ ರೂಪಾಯಿ: ಸಿದ್ಧರಾಮಯ್ಯ ಹೇಳಿದ್ದೇನು?
ಬೆಂಗಳೂರು, ಜೂನ್ 23: ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಮತ್ತೆ ತಮ್ಮ ಟೀಕೆಗಳನ್ನು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಮುಂದುವರೆಸಿದ್ದಾರೆ. ಕೊರೊನಾ ವೈರಸ್ ಹಬ್ಬುತ್ತಿರುವ ಈ ಸಮಯದಲ್ಲಿ ತಮ್ಮ ಯೋಜನೆ ಏನಿರುತ್ತಿತ್ತು ಎನ್ನುವ ಬಗ್ಗೆ ಅವರು ತಿಳಿಸಿದ್ದಾರೆ.
ಕೊರೊನಾ ಸಮಯದಲ್ಲಿ ಸಿದ್ಧರಾಮಯ್ಯ ಮುಖ್ಯಮಂತ್ರಿ ಆಗಿದ್ದರೆ, ಬಡವರಿಗೆ 10 ಸಾವಿರ ರೂಪಾಯಿಗಳನ್ನು ನೀಡುತ್ತಿದ್ದರಂತೆ. ಕೊರೊನಾ ಸಂಕಷ್ಟದ ಸಮಯದಲ್ಲಿ ಹಣಕಾಸಿನ ತೊಂದರೆಯಲ್ಲಿ ಇರುವ ಪ್ರತಿಯೊಬ್ಬರಿಗೂ ಸರ್ಕಾರದಿಂದ 10 ಸಾವಿರ ರೂಪಾಯಿ ನೀಡುತ್ತಿದ್ದೆ ಎಂದು ಅವರು ಹೇಳಿದ್ದಾರೆ.
ಇಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪ್ರತಿಜ್ಞಾವಿಧಿ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಸಿದ್ಧರಾಮಯ್ಯ ಭಾಗಿಯಾಗಿದ್ದರು. ಈ ವೇಳೆ ಅವರು ಈ ಬಗ್ಗೆ ಮಾತನಾಡಿದ್ದಾರೆ. ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ಹಿಂದೆ ಬಿದ್ದಿದೆ ಎಂದಿದ್ದಾರೆ.

''ಕೊರೊನಾ ಹರಡುತ್ತಿರುವ ಈ ಸಮಯದಲ್ಲಿ ಯಡಿಯೂರಪ್ಪನವರ ಜಾಗದಲ್ಲಿ ಇಂದು ನಾನಿದ್ದರೆ, ಬಡವರಿಗೆ, ದುರ್ಬಲ ವರ್ಗದವರಿಗೆ, ಹಣದ ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ಸರ್ಕಾರದಿಂದ 10 ಸಾವಿರ ರೂಪಾಯಿ ಘೋಷಣೆ ಮಾಡುತ್ತಿದ್ದೆ. ಅದರಿಂದ ಅವರ ಖರೀದಿ ಶಕ್ತಿ ಹೆಚ್ಚುತ್ತಿತ್ತು'' ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.












Click it and Unblock the Notifications