ಬೆಂಗಳೂರಿನಿಂದ ಮೋದಿ ಸ್ಪರ್ಧಿಸಿದರೆ ಸೋಲು ಗ್ಯಾರಂಟಿ: ಸೌಮ್ಯಾ ರೆಡ್ಡಿ
ಬೆಂಗಳೂರು, ಮಾರ್ಚ್ 22: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಸತ್ಯವೇ ಆದರೆ ನಾವು ಅವರನ್ನು ಸ್ವಾಗತಿಸುತ್ತೇವೆ, ಅವರು ಇಲ್ಲಿಂದ ಸ್ಪರ್ಧಿಸಿದರೆ ಸೋಲಿಸುವುದು ಗ್ಯಾರಂಟಿ ಎಂದು ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಹೇಳಿದ್ದಾರೆ.
ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಅದನ್ನು ಉಲ್ಲೇಖಿಸಿದ ಜಯನಗರ ಶಾಸಕಿ ಸೌಮ್ಯಾ ರೆಡ್ಡಿ, "ನಾವು ದಕ್ಷಿಣ ಭಾರತೀಯರು ನಿಮ್ಮನ್ನು ಸ್ವಾಗತಿಸುತ್ತೇವೆ. ಇದು ಸತ್ಯವೇ ಆದರೆ ದಯವಿಟ್ಟು ಬೆಂಗಳೂರಿಗೆ ಬನ್ನಿ. ಪ್ರಧಾನಿಯವರ ಮೊದಲ ಸೋಲು ಕರ್ನಾಟಕದಲ್ಲೇ ಆಗಲಿ, ಬಿಜೆಪಿ ಸರ್ಕಾರ ಐದು ವರ್ಷಗಳಲ್ಲಿ ಮಾಡಿದ ಜನವಿರೋಧಿ, ರೈತ ವಿರೋಧಿ ಕಾರ್ಯಕ್ಕೆ ಅದೇ ನಮ್ಮ ಉತ್ತರ" ಎಂದು ಸೌಮ್ಯಾ ರೆಡ್ಡಿ ಟ್ವೀಟ್ ಮಾಡಿದ್ದಾರೆ.
ದಿವಂಗತ ಅನಂತ್ ಕುಮಾರ್ ಅವರು ಪ್ರತಿನಿಧಿಸುತ್ತಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರನ್ನು ಇನ್ನೂ ಪ್ರಕಟಿಸಿಲ್ಲ. ಗುರುವಾರ ಪ್ರಕಟವಾದ ಪಟ್ಟಿಯಲ್ಲಿ 28 ಅಭ್ಯರ್ಥಿಗಳ ಪೈಕಿ 21 ಅಭ್ಯರ್ಥಿಗಳ ಹೆಸರನ್ನು ಈಗಾಗಲೇ ಪ್ರಕಟಿಸಲಾಗಿದೆ.
ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧೆ?
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ದಿ.ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಸ್ಪರ್ಧಿಸುತ್ತಾರೆ ಎನ್ನಲಾಗಿತ್ತು.