20 ವರ್ಷಗಳಿಂದ ಅಕ್ರಮವಾಗಿ ವಾಸವಿರುವ, ಗುಜರಿ ಅಂಗಡಿ ಮಾಲೀಕನಿಗೆ ಜಾಮೀನು ನಿರಾಕರಣೆ
ಬೆಂಗಳೂರಿನಲ್ಲಿ ಕಳೆದ 20 ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ವ್ಯಕ್ತಿಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ.
ಬೆಂಗಳೂರು, ಫೆಬ್ರವರಿ. 09: ಕಳೆದ 20 ವರ್ಷಗಳಿಂದ ಅಕ್ರಮವಾಗಿ ಭಾರತದಲ್ಲಿ ನೆಲೆಸಿರುವ ಆರೋಪದಲ್ಲಿ ಬಂಧನದಲ್ಲಿರುವ ಬಾಂಗ್ಲಾ ದೇಶದ ಪ್ರಜೆ, ಗುಜರಿ ಅಂಗಡಿಯ ಮಾಲೀಕನಿಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ.
ಸೈಯದುಲ್ ಅಖೋನ್ ಅಲಿಯಾಸ್ ಶಾಹಿದ್ ಅಹ್ಮದ್ (42) ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ. ಉಮಾ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ಆರೋಪಿ ತನ್ನನ್ನು ಭಾರತದ ಪ್ರಜೆ ಎಂದು ಬಿಂಬಿಸಿಕೊಳ್ಳಲು ಆಧಾರ್ ಕಾರ್ಡ್ ಸೇರಿ ಹಲವು ನಕಲಿ ಗುರುತಿನ ಚೀಟಿ ಸೃಷ್ಟಿಸಿದ್ದಾನೆ. ಈ ಆರೋಪಗಳು ಗಂಭೀರ ಸ್ವರೂಪದ್ದಾಗಿದೆ. ಇಂತಹ ಕೃತ್ಯಗಳು ದೇಶದ ಭದ್ರತೆಗೇ ಅಪಾಯ ಉಂಟು ಮಾಡುವಂತಹದ್ದಾಗಿದೆ ಎಂದು ಅರ್ಜಿ ವಜಾಗೊಳಿಸಿದೆ.

*ಹೈಕೋರ್ಟ್ ಆದೇಶವೇನು..?*
ಅರ್ಜಿದಾರನ ವಿರುದ್ಧ ಗಂಭೀರ ಸ್ವರೂಪದ ಆರೋಪಗಳಿವೆ. ಇವು ದೇಶದ ಭದ್ರತೆಗೆ ಅಪಾಯ ಒಡ್ಡುವಂತಹ ಕೃತ್ಯಕ್ಕೆ ಸಂಬಂಧಿಸಿದ ಆರೋಪಗಳಾಗಿವೆ. ಆರೋಪಿ ಭಾರತೀಯ ಪ್ರಜೆಯಾಗಿದ್ದು, ಉತ್ತರಪ್ರದೇಶದ ನಿವಾಸಿಯಾಗಿದ್ದಾನೆಂದು ತಿಳಿಸಿ, ಅದನ್ನು ಸಾಬೀತುಪಡಿಸುವ ಹಲವು ದಾಖಲೆಗಳನ್ನು ಆರೋಪಿಯ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಆದರೆ, ಆರೋಪಿ ಬಾಂಗ್ಲಾದೇಶದ ಪ್ರಜೆಯಾಗಿದ್ದು, ಅಕ್ರಮವಾಗಿ ಭಾರತದೊಳಗೆ ನುಸುಳಿ, ಕಳೆದ 20 ವರ್ಷಗಳಿಂದ ಇಲ್ಲಿಯೇ ನೆಲೆಸಿದ್ದಾನೆ ಎನ್ನುವುದನ್ನು ತನಿಖಾಧಿಕಾರಿ ಸಲ್ಲಿಸಿರುವ ಆರೋಪಪಟ್ಟಿ ಬಹಿರಂಗಪಡಿಸಿದೆ. ಜತೆಗೆ, ಪ್ರಕರಣದ ಇನ್ನೂ ಹಲವು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅರ್ಜಿದಾರ ಜಾಮೀನಿಗೆ ಅರ್ಹನಲ್ಲ ಎಂದು ಅಭಿಪ್ರಾಯಪಟ್ಟಿದೆ.
ಆರೋಪಿಯ ಪರ ವಕೀಲರು, ಅರ್ಜಿದಾರನ ವಿರುದ್ಧ ದಾಖಲಿಸಿರುವ ಪ್ರಕರಣ ಆಧಾರ ರಹಿತವಾಗಿದೆ. ಭಾರತೀಯ ಪ್ರಜೆಯಾಗಿರುವ ಆರೋಪಿ, ಉತ್ತರಪ್ರದೇಶದಲ್ಲಿ ಜನಿಸಿದ್ದಾನೆ. ಆತನ ಕುಟುಂಬದವರು ಈಗಲೂ ಉತ್ತರ ಪ್ರದೇಶದಲ್ಲೇ ನೆಲೆಸಿದ್ದಾರೆ. ಅರ್ಜಿದಾರ ಭಾರತೀಯ ಪಾಸ್ಪೋರ್ಟ್, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತಿತರ ದಾಖಲೆಗಳನ್ನು ಹೊಂದಿದ್ದಾನೆ. ಹೀಗಿದ್ದರೂ, ತನಿಖಾಧಿಖಾರಿಗಳು ಆ ಯಾವುದೇ ದಾಖಲೆಗಳನ್ನು ಪರಿಗಣಿಸಿದೆಯೇ ಅರ್ಜಿದಾರನ ವಿರುದ್ಧ ತಪ್ಪು ಆರೋಪಪಟ್ಟಿ ಸಲ್ಲಿಸಿದ್ದಾರೆ. ಆದ್ದರಿಂದ, ಆತನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಕೋರಿದ್ದರು.
ಸರ್ಕಾರದ ಪರ ವಕೀಲರು, ಗಂಭೀರ ಸ್ವರೂಪದ ಅಪರಾಧ ಕೃತ್ಯವೆಸಗಿರುವ ಆರೋಪ ಅರ್ಜಿದಾರನ ಮೇಲಿದೆ. ಆತ ಬಾಂಗ್ಲಾದೇಶದ ಪ್ರಜೆಯಾಗಿದ್ದು, ಪಾಸ್ಪೋರ್ಟ್ ಹಾಗೂ ವೀಸಾ ಇಲ್ಲದೆಯೇ ಭಾರತ ಪ್ರವೇಶಿಸಿದ್ದಾನೆ. ಬೆಂಗಳೂರಿನಲ್ಲಿ ಗುಜರಿ ಅಂಗಡಿ ನಡೆಸುತ್ತಿರುವ ಆತ ತನ್ನ ವಾಸದ ವಿಳಾಸವನ್ನು ಬೆಂಗಳೂರಿಗೆ ಬದಲಾಯಿಸುವ ಪ್ರಯತ್ನ ಮಾಡುತ್ತಿದ್ದ. ಕಳೆದ 20 ವರ್ಷಗಳಿಂದಲೂ ಅಕ್ರಮವಾಗಿ ದೇಶದಲ್ಲಿ ನೆಲೆಸಿರುವ ಅರ್ಜಿದಾರ ಪ್ರಕರಣದ ಇತರ ಆರೋಪಿಗಳೊಂದಿಗೆ ಸೇರಿ ಹಲವು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾನೆ. ಆದ್ದರಿಂದ, ಆತನಿಗೆ ಜಾಮೀನು ನೀಡಬಾರದು ಎಂದು ಮನವಿ ಮಾಡಿದ್ದರು.

*ಪ್ರಕರಣದ ವಿವರಗಳೇನು..?*
ಅಕ್ರಮವಾಗಿ ಭಾರತದಲ್ಲಿ ನೆಲೆಸಿದ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದಲ್ಲಿ ಅರ್ಜಿದಾರನನ್ನು 2022 ರ ಮೇ 23 ರಂದು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದರು. ಆರೋಪಿಯ ವಿರುದ್ಧ ವಿದೇಶಿಯರ ಕಾಯ್ದೆ, ಮಾಹಿತಿ ತಂತ್ರಜ್ಞಾನ ಕಾಯ್ದೆ, ಪಾಸ್ಪೋರ್ಟ್ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಬಳಿಕ ತನಿಖೆ ನಡೆಸಿದ್ದ ಅಧಿಕಾರಿಗಳು ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸೈಯದುಲ್ ಅಖೋನ್ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾನೆ.












Click it and Unblock the Notifications