ಅನಧಿಕೃತ ಕಟ್ಟಡಗಳಿಗೆ ಕಾರಣರಾದ ಅಧಿಕಾರಿಗಳಿಗೆ ಶಿಕ್ಷೆ ಪ್ರಮಾಣ ನಿಗದಿಗೆ ಹೈಕೋರ್ಟ್ ಸೂಚನೆ
ಬೆಂಗಳೂರು,ಆ.11. ಬಿಬಿಎಂಪಿ ಕಾಯಿದೆ-2020ರ ಸೆಕ್ಷನ್ 252ರ ಅಡಿಯಲ್ಲಿ ಬೆಂಗಳೂರು ನಗರದಲ್ಲಿ ಅನಧಿಕೃತ ಕಟ್ಟಡಗಳ ನಿರ್ಮಾಣ ತಡೆಗಟ್ಟಲು ವಿಫಲರಾಗುವ ಬಿಬಿಎಂಪಿ ಅಧಿಕಾರಿಗಳಿಗೆ ಶಿಕ್ಷೆ ಪ್ರಮಾಣ ನಿಗದಿಪಡಿಸುವಂತೆ ಕೋರಿ ಹೈಕೋರ್ಟ್ ನಲ್ಲಿ ಪಿಐಎಲ್ ಹೂಡಲಾಗಿದೆ.
ವಕೀಲ ಎಸ್. ಉಮಾಪತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಸಂಬಂಧ ಹೈಕೋರ್ಟ್ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಹಾಗೂ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯಪೀಠ ಅರ್ಜಿ ವಿಚಾರಣೆ ಬಳಿಕ ಪ್ರತಿವಾದಿಗಳಾದ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.
ಅರ್ಜಿದಾರರು ಸ್ವಂತ ವಾದ ಮಂಡಿಸಿ, ಅರ್ಜಿದಾರರು, ಬೆಂಗಳೂರಿನಲ್ಲಿಅಕ್ರಮ ಕಟ್ಟಡಗಳ ನಿರ್ಮಾಣ ವ್ಯಾಪಕವಾಗಿದ್ದು, ಕಟ್ಟಡ ಬೈಲಾ ಉಲ್ಲಂಘಿಸಲಾಗುತ್ತಿದೆ. ಚರಂಡಿ, ಕೆರೆಗಳು, ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಲಾಗುತ್ತಿದೆ. ಇದರ ವಿರುದ್ಧ ತುರ್ತು ಕ್ರಮ ಕೈಗೊಳ್ಳುವ ಅಗತ್ಯವಿದೆ. ಆದ್ದರಿಂದ, ಅನಧಿಕೃತ ಕಟ್ಟಡಗಳ ನಿರ್ಮಾಣಕ್ಕೆ ಕಾರಣರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವ ನಿಟ್ಟಿನಲ್ಲಿಶಿಕ್ಷೆ ಪ್ರಮಾಣ ನಿಗದಿಪಡಿಸಲು ಸರಕಾರ ಹಾಗೂ ಬಿಬಿಎಂಪಿಗೆ ನಿರ್ದೇಶಿಸಬೇಕು ಎಂದು ಮನವಿ ಮಾಡಿದರು.
ಅಧಿಕಾರಿಗಳ ನಿರುತ್ಸಾಹ:
ಬಿಬಿಎಂಪಿ ಕಾಯಿದೆಯ ಸೆಕ್ಷನ್ 252ರ ಅನುಸಾರ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ ತಡೆಯಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ಸರ್ಕಾರ ಕ್ರಮ ಜರುಗಿಸಬಹುದಾಗಿದೆ. ಆದರೆ, ಸೆಕ್ಷ ನ್ 252ರ ಅಡಿ ಶಿಕ್ಷೆ ಪ್ರಮಾಣ ನಿಗದಿಪಡಿಸಲು ಸರಕಾರ ಉತ್ಸಾಹ ತೋರುತ್ತಿಲ್ಲ, ಇದರಿಂದ, ಬಿಬಿಎಂಪಿ ಅಧಿಕಾರಿಗಳು ಹಾಗೂ ಇಂಜಿನಿಯರ್ಗಳು ಯಾವುದೇ ನಿಬಂಧನೆಗೆ ಒಳಪಟ್ಟಿಲ್ಲ. ಕರ್ತವ್ಯಲೋಪವೆಸಗುವ ಅಧಿಕಾರಿಗಳಿಗೆ ಶಿಕ್ಷೆ ಪ್ರಮಾಣ ನಿಗದಿಪಡಿಸಿದರೆ ನಗರದಾದ್ಯಂತ ಅಕ್ರಮ ಕಟ್ಟಡಗಳ ಹಾವಳಿ ತಡೆಗಟ್ಟಬಹುದು ಎಂದರು.
6589 ಮಾರ್ಗಗಳ ತೆರವು:
ಕೊಪ್ಪಳ ನಗರದ ಬನ್ನಿಕಟ್ಟಿ ಬಳಿಯ ಬಿಸಿಎಂ ಹಾಸ್ಟೆಲ್ನಲ್ಲಿ2019ರ ಆ.15ರಂದು ಧ್ಜಜಸ್ತಂಭ ತೆರವುಗೊಳಿಸುವ ವೇಳೆ ವಿದ್ಯುತ್ ತಂತಿ ತಗುಲಿ ಐವರು ವಿದ್ಯಾರ್ಥಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಪಿಐಎಲ್ ಕೂಡ ಹಂಗಾಮಿ ಸಿಜೆ ಅಲೋಕ್ ಅರಾಧೆ ನೇತೃತ್ವದ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತು.
ರಾಜ್ಯದಲ್ಲಿ ವಿದ್ಯಾರ್ಥಿನಿಲಯಗಳ ಮೇಲೆ ಹಾದು ಹೋಗಿದ್ದ ಒಟ್ಟು 7,478 ವಿದ್ಯುತ್ ಹೈ ಟೆನ್ಷನ್ ಮಾರ್ಗಗಳ ಪೈಕಿ 6,589 ಮಾರ್ಗಗಳನ್ನು ತೆರವುಗೊಳಿಸಲಾಗಿದೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್) ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಕೆಪಿಟಿಸಿಎಲ್ ಪರ ವಕೀಲ ಶ್ರೀರಂಗ, ರಾಜ್ಯದಲ್ಲಿ7,478 ಹೈ ಟೆನ್ಷನ್ ಲೇನ್ಗಳು ಹಾಸ್ಟೆಲ್ಗಳ ಮೇಲೆ ಹಾದು ಹೋಗಿದ್ದವು. ಅವುಗಳ ಈವರೆಗೆ ಪೈಕಿ 6,589 ಲೇನ್ ತೆರವುಗೊಳಿಸಲಾಗಿದೆ. ಬಾಕಿ ಉಳಿದಿರುವ 889 ಲೇನ್ಗಳನ್ನು 2022 ಡಿ.31ರೊಳಗೆ ತೆರವುಗೊಳಿಸಲಾಗುವುದು ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಆ ಹೇಳಿಕೆ ದಾಖಲಿಸಿಕೊಂಡಿದ್ದ ವಿಭಾಗೀಯಪೀಠ, ರಾಜ್ಯದಲ್ಲಿಹಾಸ್ಟೆಲ್ ಗಳ ಸಮೀಕ್ಷೆ ನಡೆಸಿ ಸುರಕ್ಷತಾ ಕ್ರಮಗಳಿಗೆ ಶಿಫಾರಸುಗಳನ್ನು ನೀಡಲು 2021ರ ಸೆ.6ರಂದು ನೀಡಿರುವ ಆದೇಶ ಅನುಪಾಲನೆ ಮಾಡಿದ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಸರಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತು