ಐಎಂಎ ಹಗರಣದ ವಿಚಾರಣೆ ವಿಶೇಷ ನ್ಯಾಯಾಲಯ ಸ್ಥಾಪನೆ
ಬೆಂಗಳೂರು, ಫೆಬ್ರವರಿ 20: ಬಹುಕೋಟಿ ರೂಪಾಯಿ ಐಎಂಎ ಹಗರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ಹಗರಣದ ಎಲ್ಲಾ ರೀತಿಯ ಪ್ರಕರಣಗಳನ್ನು ವಿಚಾರಣೆ ನಡೆಸಲು ಐಎಂಎ ಪ್ರಕರಣಕ್ಕೆ ಮೀಸಲಾದ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲು ಮನವಿ ಸಲ್ಲಿಸಲಾಗಿದೆ.
ಶಿವಾಜಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಿಗೆ ಈ ಕುರಿತು ಪತ್ರ ಬರೆದಿದ್ದಾರೆ. ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಿ ನೊಂದಿರುವ ಜನಸಾಮಾನ್ಯರಿಗೆ ಶೀಘ್ರವಾಗಿ ಕಾಲಮಿತಿಯೊಳಗೆ ನ್ಯಾಯ ಸಿಗಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದ್ದ ಬಹುಕೋಟಿ ರೂಪಾಯಿ ಐಎಂಎ ಹಗರಣದ ತನಿಖೆಯನ್ನು ಕರ್ನಾಟಕ ಸರ್ಕಾರ ಸಿಬಿಐಗೆ ವಹಿಸಿದೆ. ಐಎಂಎಗೆ ಸೇರಿದ ಸ್ಥಿರ ಹಾಗೂ ಚರ ಆಸ್ತಿಗಳನ್ನು ವಶಕ್ಕೆ ಪಡೆದುಕೊಳ್ಳಲು ಸಕ್ಷಮ ಪ್ರಾಧಿಕಾರವನ್ನು ರಚನೆ ಮಾಡಲಾಗಿದೆ.
ಸಕ್ಷಮ ಪ್ರಾಧಿಕಾರ ಸ್ಥಿರ ಮತ್ತು ಚರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ವಿಶೇಷ ನ್ಯಾಯಾಲಯಕ್ಕೆ ಮಾಹಿತಿ ನೀಡಲಿದೆ. ನ್ಯಾಯಾಲಯದ ಸೂಚನೆ ಅನ್ವಯ ಆಸ್ತಿಗಳನ್ನು ಹರಾಜು ಹಾಕಿ ಸಂತ್ರಸ್ತರಿಗೆ ಹಣವನ್ನು ಹಂಚಿಕೆ ಮಾಡಲಾಗುತ್ತದೆ.

ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ
ಪತ್ರದಲ್ಲಿ ಶಾಸಕ ರಿಜ್ವಾನ್ ಅರ್ಷದ್ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾದ ಐಎಂಎ ಹಗರಣದ ತನಿಖೆಯನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿ ಸಿಬಿಐಗೆ ವಹಿಸಿದೆ. ಸರ್ಕಾರ ನೇಮಿಸಿರುವ ಸಮರ್ಥ ಪ್ರಾಧಿಕಾರವು ಮಾನ್ಯ ವಿಶೇಷ ನ್ಯಾಯಾಲಯಕ್ಕೆ ಐಎಂಎ ಆಸ್ತಿಯನ್ನು ಸಂಪೂರ್ಣ ಲಗತ್ತು ಮಾಡಿಕೊಳ್ಳಲು ಅರ್ಜಿಯನ್ನು ಹಾಕಿದೆ ಎಂದು ಹೇಳಿದ್ದಾರೆ.

ಸಾಕಷ್ಟು ಕಾಲಾವಕಾಶ ಬೇಕು
ಅರ್ಜಿಯ ವಿಲೇವಾರಿ, ಆಕ್ಷೇಪಣೆಗಳನ್ನು ಮತ್ತು ಸಾಕಷ್ಟು ಪುರಾವೆಗಳನ್ನು ಪರಿಗಣಿಸಿ ತೀರ್ಪು ನೀಡಲು ಸಾಕಷ್ಟು ಕಾಲಾವಕಾಶ ಬೇಕಾಗಿರುತ್ತದೆ. ಈಗ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಲಯವು ವಹಿಸಿದ ಬೇರೆ-ಬೇರೆ ಪ್ರಕರಣಗಳ ಬಗ್ಗೆಯೂ ಸಹ ವಿಚಾರಣೆ ನಡೆಸುತ್ತಿದ್ದು, ವಿಚಾರಣೆ ಪೂರ್ಣಗೊಂಡು ನ್ಯಾಯ ಸಿಗಲು ಬಹಳ ಕಾಲ ಹಿಡಿಯುತ್ತದೆ. ಇದರಿಂದ ಕಷ್ಟಕ್ಕೆ ಸಿಲುಕಿರುವ ಸುಮಾರು 15000ಕ್ಕೂ ಅಧಿಕ ಗ್ರಾಹಕರು ಇನ್ನೂ ಸಂಕಷ್ಟ ಅನುಭವಿಸುವ ಸಂಭವವಿರುತ್ತದೆ ಎಂದು ಹೇಳಿದ್ದಾರೆ.

ವಿಶೇಷ ನ್ಯಾಯಾಲಯ ಸ್ಥಾಪಿಸಿ
ಐಎಂಎ ಪ್ರಕರಕಣಕ್ಕೆಂದೇ ಮೀಸಲಾದ ವಿಶೇಷ ನ್ಯಾಯಾಲಯ ಸ್ಥಾಪಿಸಿ ನೊಂದಿರುವ ಜನಸಾಮಾನ್ಯರಿಗೆ ಶೀಘ್ರವಾಗಿ ಕಾಲಮಿತಿಯೊಳಗೆ ನ್ಯಾಯ ಸಿಗಲು ಸಹಕಾರ ನೀಡುವಂತೆ ಮನವಿ ಮಾಡುತ್ತೇನೆ. ಸಕ್ಷಮ ಪ್ರಾಧಿಕಾರಕ್ಕೆ ಅಗತ್ಯ ಸಿಬ್ಬಂದಿ, ಕಚೇರಿ ವಾಹನ ಹಾಗೂ ಇತರ ಮೂಲಭೂತ ಸೌಕರ್ಯಗಳನ್ನು ತಕ್ಷಣ ಒದಗಿಸಿಕೊಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಸಿಬಿಐ ತನಿಖೆಗೆ ವಹಿಸಿದ ಸರ್ಕಾರ
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರ ಸರ್ಕಾರವಿದ್ದಾಗ ಐಎಂಎ ಹಗರಣ ಬೆಳಕಿಗೆ ಬಂದಿತ್ತು. ಆಗ ಸರ್ಕಾರ ಹಗರಣದ ತನಿಖೆಗೆ ಎಸ್ಐಟಿ ರಚನೆ ಮಾಡಿತ್ತು. ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು.











Click it and Unblock the Notifications