ಮಳೆ; ಬೆಂಗಳೂರಲ್ಲಿ 48 ಗಂಟೆಗಳ ಕಾಲ ಯೆಲ್ಲೊ ಅಲರ್ಟ್
ಬೆಂಗಳೂರು, ಮಾರ್ಚ್ 22; ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮಾರ್ಚ್ 24ರ ತನಕ ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಲಕೊಲ್ಲಿಯಲ್ಲಿನ 'ಅಸನಿ' ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಶುಕ್ರವಾರದಿಂದ ಮಳೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಶನಿವಾರ, ಭಾನುವಾರ ಮತ್ತು ಸೋಮವಾರ ಸಂಜೆ ಮಳೆಯಾಗಿದೆ.
Recommended Video
ಭಾರತೀಯ ಹವಾಮಾನ ಇಲಾಖೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ.

ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಮಾರ್ಚ್ 22 ರಿಂದ 24ರ ತನಕ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಾರ್ಚ್ 23ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೋಮವಾರ ಸಂಜೆ ಮಳೆ; ಸೋಮವಾರ ಸಂಜೆ ಬೆಂಗಳೂರು ನಗರದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಅದರಲ್ಲೂ ಬಿಬಿಎಂಪಿಯ ದಕ್ಷಿಣ, ಪೂರ್ವ ಮತ್ತು ಮಹದೇವಪುರ ವಿಭಾಗದಲ್ಲಿ ಹೆಚ್ಚು ಮಳೆಯಾಗಿದೆ.
ಭಾನುವಾರ ಮತ್ತು ಸೋಮವಾರ ನಗರದಲ್ಲಿ 6.2 ಮಿ. ಮೀ. ಮಳೆಯಾಗಿದೆ. ಅಂಡಮಾನ್ನಿಂದ 120 ಕಿ. ಮೀ. ದೂರದಲ್ಲಿ 'ಅಸನಿ' ಚಂಡಮಾರುತ ಕೇಂದ್ರಿಕೃತವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸೋಮವಾರವೂ ಗುಡುಗು ಸಹಿತ ಮಳೆಯಾಗಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಮಾರ್ಚ್ 25ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಹವಾಮಾನ ಇಲಾಖೆ ಟ್ವೀಟ್; ಮಯನ್ಮಾರ್ ಕರಾವಳಿಗೆ 'ಅಸನಿ' ಚಂಡಮಾರುತ ಅಪ್ಪಳಿಸಿದೆ. ಅಲ್ಲದೇ ಅದು ಶಿಥಿಲಗೊಳ್ಳುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಟ್ವೀಟ್ ಮೂಲಕ ಮಾಹಿತಿ ನೀಡಿದೆ.
ಕೇರಳ, ಮಾಹೆ, ತಮಿಳುನಾಡು, ಆಂಧ್ರ ಪ್ರದೇಶ, ಕರ್ನಾಟಕದಲ್ಲಿ ಮುಂದಿನ 5 ದಿನಗಳ ಕಾಲ ಮಿಂಚು, ಗುಡುಗಿನಿಂದ ಕೂಡಿದ ಸಾಧಾರಣೆ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಬುಧವಾರ ಬೆಳಗ್ಗೆ 8 ಗಂಟೆಯ ತನಕದ ಹವಾಮಾನ ಮುನ್ಸೂಚನೆಯಂತೆ ಕೊಡಗು ಮತ್ತು ಶಿವಮೊಗ್ಗದ ಆಗುಂಬೆ ಭಾಗದಲ್ಲಿ ಸಾಧಾರಣೆ ಮಳೆ ನಿರೀಕ್ಷೆ ಇದೆ. ಕರ್ನಾಟಕದ ಕರಾವಳಿ, ಕಾಸರಗೋಡುವಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ರಾಜ್ಯದ ದಕ್ಷಿಣ ಒಳನಾಡಿನಲ್ಲಿ ತುಂತುರು ಮಳೆಯಾಗುವ ನಿರೀಕ್ಷೆ ಇದೆ.












Click it and Unblock the Notifications