ಮುಂಗಾರು ಪ್ರಭಾವ; ಬೆಂಗಳೂರಿನಲ್ಲಿ ಮುಂದಿನ 2 ದಿನ ಭಾರೀ ಮಳೆ ಸೂಚನೆ
ಬೆಂಗಳೂರು, ಜುಲೈ 10: ರಾಜ್ಯದಲ್ಲಿ ಗುರುವಾರದಿಂದ ಮುಂಗಾರು ಚುರುಕಾಗಿದ್ದು, ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳ ಕಾಲ ಬೆಂಗಳೂರು ನಗರ ಪ್ರದೇಶದಲ್ಲಿ ಅತಿ ಹೆಚ್ಚಿನ ಮಳೆಯಾಗುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಎರಡು ದಿನ ಮಧ್ಯ ಬೆಂಗಳೂರು ಪ್ರದೇಶಗಳಲ್ಲಿ ಗುಡುಗು ಸಿಡಿಲು ಮಿಶ್ರಿತ ಹೆಚ್ಚಿನ ಮಳೆಯಾಗುವುದಾಗಿ ಹವಾಮಾನ ಇಲಾಖೆ ಬೆಂಗಳೂರು ನಿರ್ದೇಶಕ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಜುಲೈ 11 ಹಾಗೂ 12ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ 12 ಹಾಗೂ 13ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 14ರವರೆಗೂ ಹೆಚ್ಚಿನ ಮಳೆಯಾಗುವುದಾಗಿ ತಿಳಿಸಿದೆ. ಮುಂದೆ ಓದಿ...

ಬೆಂಗಳೂರಿನಲ್ಲಿ ಭಾರೀ ಮಳೆ ಸೂಚನೆ
ಸಾಮಾನ್ಯವಾಗಿ ಹೆಚ್ಚಿನ ಮಳೆ ದಾಖಲಾಗುವ ಪ್ರದೇಶಗಳಾದ ತುಮಕೂರು ಹಾಗೂ ಬೆಂಗಳೂರು ನಗರ ಪ್ರದೇಶದಲ್ಲಿ ಜೂನ್ ತಿಂಗಳಿನಲ್ಲಿ ಕಡಿಮೆ ಮಳೆ ದಾಖಲಾಗಿತ್ತು. ಜುಲೈ ತಿಂಗಳಿನಲ್ಲಿ ಉತ್ತಮ ಮಳೆಯಾಗುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಮುಂಗಾರು ಪ್ರಭಾವದಿಂದಾಗಿ ಬೆಂಗಳೂರು ಪ್ರದೇಶದಲ್ಲಿ ಜುಲೈನಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಇಲಾಖೆ ನಿರ್ದೇಶಕ ಪಾಟೀಲ್ ತಿಳಿಸಿದ್ದಾರೆ.

ಕರಾವಳಿ ಪ್ರದೇಶಗಳಲ್ಲಿ ಮಳೆ ಶುರು
ಶನಿವಾರದಿಂದ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಮಳೆ ಆರಂಭವಾಗಲಿದ್ದು, ಹೆಚ್ಚಿನ ಮಟ್ಟದಲ್ಲಿ ಮಳೆಯಾಗುವುದಾಗಿ ಇಲಾಖೆ ತಿಳಿಸಿದೆ. ರಾಜ್ಯದ ಪಶ್ಚಿಮ ಹಾಗೂ ಕೇಂದ್ರ ಭಾಗದಲ್ಲಿ ಕಡಿಮೆ ಒತ್ತಡ ನಿರ್ಮಾಣವಾಗುವ ಹಿನ್ನೆಲೆಯಲ್ಲಿ ಕರಾವಳಿ ಪ್ರದೇಶ ಹಾಗೂ ಕೊಡಗಿನಲ್ಲಿ ಮಳೆಯಾಗಲಿದೆ ಎಂದು ಹೇಳಿದೆ. ಮುಂದಿನ ಐದು ದಿನಗಳವರೆಗೂ ರಾಜ್ಯದಲ್ಲಿ ಮಳೆಯಾಗುವುದಾಗಿ ತಿಳಿಸಿದೆ.
|
ಜುಲೈ 2ನೇ ವಾರದಲ್ಲಿ ಉತ್ತಮ ಮಳೆ
ಕೇರಳದ ನಂತರ ಜೂನ್ 6ರಂದು ರಾಜ್ಯ ಪ್ರವೇಶಿಸಿದ್ದ ಮುಂಗಾರು, ಕೆಲವೇ ದಿನಗಳಲ್ಲಿ ಕ್ಷೀಣಿಸಿತ್ತು. ನಿರೀಕ್ಷಿಸಿದಷ್ಟು ಮಳೆ ದಾಖಲಾಗಿಲ್ಲ. ಜೂನ್ 19ರ ನಂತರವಂತೂ ಮಳೆ ಸಂಪೂರ್ಣ ಸ್ತಬ್ಧವಾಗಿತ್ತು. ಹೀಗಾಗಿ ರಾಜ್ಯದಲ್ಲಿ ಕೃಷಿ ಚಟುವಟಿಕೆಗಳಿಗೂ ಅಡ್ಡಿಯಾಗಿತ್ತು. ಜುಲೈ 7ರ ನಂತರವಷ್ಟೇ ಮುಂಗಾರು ಚುರುಕುಪಡೆಯಲಿದೆ. ಜುಲೈ 2ನೇ ವಾರದ ನಂತರ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು.
Recommended Video

ಕೇರಳದಲ್ಲಿ ಹೆಚ್ಚಿದ ಮಳೆ
ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಹಾಗೂ ಕೇರಳದ ಕರಾವಳಿ ಪ್ರದೇಶಗಳಲ್ಲಿ ಜುಲೈ 9ರಿಂದ ಜುಲೈ 12ರವರೆಗೂ ಹೆಚ್ಚಿನ ಮಳೆಯಾಗಲಿರುವುದಾಗಿ ತಿಳಿದುಬಂದಿದೆ. ಮುಂದಿನ ಐದು ದಿನಗಳ ಕಾಲ ಕೇರಳ, ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.











Click it and Unblock the Notifications