ಅಕ್ಟೋಬರ್ 1 ರಿಂದ ಪರಿಷ್ಕೃತ ಮಾರ್ಗಸೂಚಿ ದರ ಜಾರಿ: ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು ಸೆಪ್ಟೆಂಬರ್ 19: ಅಕ್ಟೋಬರ್ 01 ರಿಂದ ರಾಜ್ಯಾದ್ಯಂತ ಪರಿಷ್ಕೃತ ನೂತನ "ಮಾರ್ಗಸೂಚಿ ದರ" (ಗೈಡೆನ್ಸ್ ವ್ಯಾಲ್ಯೂ) ಜಾರಿಯಾಗಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದರು.
ವಿಕಾಸಸೌಧದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, "ನೋಂದಣಿ ಇಲಾಖೆ ಕಾನೂನಿನ ಪ್ರಕಾರ ಪ್ರತಿ ವರ್ಷ ಮಾರ್ಗಸೂಚಿ ದರ ಪರಿಷ್ಕರಣೆಯಾಗಬೇಕು. ಆದರೆ, ಕಳೆದ ಐದು ವರ್ಷದಿಂದ ಮಾರ್ಗಸೂಚಿ ದರ ಪರಿಷ್ಕರಣೆಯಾಗಿಲ್ಲ.

ಇದರಿಂದ ಹಲವು ಕಡೆಗಳಲ್ಲಿ ಭೂಮಿ ಮಾರಾಟಗಾರರು ಮತ್ತು ರೈತರಿಗೆ ಅನ್ವಯವಾಗಿದ್ದರೆ, ಕಪ್ಪು ಹಣ ವಹಿವಾಟಿಗೂ ಕಾರಣವಾಗಿದೆ. ಮಾರ್ಗಸೂಚಿ ದರ ಪರಿಷ್ಕರಣೆಯಾಗದಿರುವುದು ಪರೋಕ್ಷವಾಗಿ ಕಪ್ಪು ಹಣ ವಹಿವಾಟಿಗೂ ಅವಕಾಶ ನೀಡಿದಂತಾಗಿದೆ. ಹೀಗಾಗಿ ಅಕ್ಟೋಬರ್ 01 ರಿಂದ ನೂತನ ಮಾರ್ಗಸೂಚಿ ದರ ಜಾರಿಯಾಗಲಿದೆ" ಎಂದು ತಿಳಿಸಿದರು.
ಮಾರ್ಗಸೂಚಿ ದರ ಹೆಚ್ಚಳ, ಎಲ್ಲೆಲ್ಲಿ ಎಷ್ಟೆಷ್ಟು?
ಮಾರ್ಗಸೂಚಿ ದರ ಯಾವ ಯಾವ ಪ್ರದೇಶಗಳಲ್ಲಿ ಎಷ್ಟು ಹೆಚ್ಚಳ ಮಾಡಲಾಗಿದೆ. ಈ ಪರಿಷ್ಕರಣೆಗೆ ಯಾವ ನಿಯಮಗಳನ್ನು ಅನ್ವಯಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಈ ಬಗ್ಗೆ ಮಾಹಿತಿ ನೀಡಿದ ಸಚಿವರು, "ಮಾರುಕಟ್ಟೆ ದರಕ್ಕೂ ಮಾರ್ಗಸೂಚಿ ದರಕ್ಕೂ ಸಾಮ್ಯತೆ ಇರುವ ಪ್ರದೇಶಗಳಲ್ಲಿ ಮಾರ್ಗಸೂಚಿ ದರವನ್ನು ಶೇ.10 ರಷ್ಟು ಏರಿಕೆ ಮಾಡಲಾಗಿದೆ. ಮಾರ್ಗಸೂಚಿ ದರಕ್ಕಿಂತ ಮಾರುಕಟ್ಟೆ ದರ 200 ಪಟ್ಟು ಹೆಚ್ಚಿರುವ ಪ್ರದೇಶಗಳಲ್ಲಿ ಪರಿಷ್ಕೃತ ದರವನ್ನು ಶೇ.20 ರಿಂದ ಶೇ.25 ರಷ್ಟು ಹೆಚ್ಚಿಸಲಾಗಿದೆ. ಇನ್ನೂ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಭಾಗದಲ್ಲಿ ಮಾರುಕಟ್ಟೆ ದರ ಮಾರ್ಗಸೂಚಿ ದರಕ್ಕಿಂತ 500 ಪಟ್ಟು ಹೆಚ್ಚಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಭೂಮಿಗಳಿಗೆ ಮಾರ್ಗಸೂಚಿ ದರ 5 ರಿಂದ 10 ಲಕ್ಷ ಇದ್ದರೆ, ಮಾರುಕಟ್ಟೆ ದರ 10 ಕೋಟಿಗೂ ಅಧಿಕವಿದೆ. ಇಂತಹ ಪ್ರದೇಶಗಳಲ್ಲಿ ನೂತನ ಮಾರ್ಗಸೂಚಿ ದರವನ್ನು ಶೇ. 50ರಷ್ಟು ಹೆಚ್ಚಿಸಲಾಗಿದೆ.
ಅಲ್ಲದೆ, ಮಾರುಕಟ್ಟೆ ದರಕ್ಕಿಂತ ಮಾರ್ಗಸೂಚಿ ದರ ಹೆಚ್ಚಾಗಿದ್ದರೆ, ಅಂತಹ ಭಾಗದಲ್ಲಿ ಮಾರ್ಗಸೂಚಿ ದರವನ್ನು ಮತ್ತಷ್ಟು ಕಡಿಮೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಾರ್ಗಸೂಚಿ ದರ ಶೇ.0 ಯಿಂದ ಶೇ.50ರ ವರೆಗೆ ಪ್ರತಿಯೊಂದು ಪ್ರದೇಶಕ್ಕೂ ಸಂಬಂಧಿಸಿದಂತೆ "ಕೇಸ್ ಬೈ ಕೇಸ್" ಹೆಚ್ಚಾಗಲಿದೆ. ಅಕ್ಟೋಬರ್ 01 ರಂದು ಮೊದಲ ಹಂತವಾಗಿ ಬೆಂಗಳೂರಿನ ಪರಿಷ್ಕೃತ ದರ ಜಾರಿಯಾಗಲಿದೆ. ಉಳಿದಂತೆ ಪ್ರತಿ ಜಿಲ್ಲೆಯಲ್ಲಿ ಅಲ್ಲಿನ "ಉಪ ಸಮಿತಿ (ಸಬ್ ಕಮಿಟಿ)" ಚರ್ಚಿಸಿ ನೂತನ ಮಾರ್ಗಸೂಚಿ ದರವನ್ನು ಹಂತಹಂತವಾಗಿ ಜಾರಿಗೊಳಿಸಲಿದೆ. ಒಟ್ಟಾರೆಯಾಗಿ ಪರಿಷ್ಕೃತ ಮಾರ್ಗಸೂಚಿ ದರ ಸರಾಸರಿ ಶೇ.25 ರಿಂದ ಶೇ.30 ರಷ್ಟು ಹೆಚ್ಚಾಗಲಿದೆ" ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು
ತಕರಾರು ಸಲ್ಲಿಸಲೂ ಅವಕಾಶವಿದೆ:
ಮಾರ್ಗಸೂಚಿ ದರಕ್ಕೂ ಮಾರುಕಟ್ಟೆ ದರಕ್ಕೂ ಅಜಗಜಾಂತರ ವ್ಯತ್ಯಾಸ ಇರಬಾರದು ಎಂಬ ಕಾನೂನಿದೆ. ಹೀಗಾಗಿ ಈ ಅಲ್ಪ ನ್ಯೂನ್ಯತೆಯನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಆ ನಿಟ್ಟಿನಲ್ಲಿ ಈ ಕ್ರಮವನ್ನು ಮಾರ್ಗಸೂಚಿ ದರ ಪರಿಷ್ಕರಣೆ ಎಂಬುದಕ್ಕಿಂತ ನ್ಯೂನ್ಯತೆಯನ್ನು ಸರಿಪಡಿಸಲಾಗಿದೆ ಎಂಬುದು ಸೂಕ್ತ ಎಂದು ಅಭಿಪ್ರಾಯಪಟ್ಟ ಸಚಿವ ಕೃಷ್ಣ ಬೈರೇಗೌಡ ಅವರು, ಮಾರ್ಗಸೂಚಿ ದರ ಪರಿಷ್ಕರಣೆಯಲ್ಲಿ ಯಾರಿಗಾದರೂ ತಕರಾರು ಇದ್ದರೆ, ಅದನ್ನೂ ಸಲ್ಲಿಸಬಹುದು. ಅಧಿಕಾರಿಗಳು ತಕರಾರುಗಳನ್ನೂ ಗಮನಿಸಿ ಹೊಸ ಮಾರ್ಗಸೂಚಿ ದರವನ್ನು ಜಾರಿಗೊಳಿಸುವರು ಎಂದು ತಿಳಿಸಿದರು.
ಕಾವೇರಿ-2 ಹೆಚ್ಚುತ್ತಿರುವ ನೋಂದಣಿಗಳು
ಕಾವೇರಿ-2 ತಂತ್ರಾಂಶದ ಬಳಕೆಯ ನಂತರ ಆಸ್ತಿ ನೋಂದಣಿಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು.
ಈ ಬಗ್ಗೆಯೂ ಮಾತನಾಡಿದ ಅವರು, "ಕಾವೇರಿ-2 ತಂತ್ರಾಂಶ ಜಾರಿಯಾದ ಸಂದರ್ಭದಲ್ಲಿ ಸಣ್ಣಪುಟ್ಟ ನ್ಯೂನ್ಯತೆಗಳು ಇದ್ದದ್ದು ನಿಜ. ಆದರೆ, ಪ್ರಸ್ತುತ ಬಹುತೇಕ ನ್ಯೂನ್ಯತೆಗಳನ್ನೂ ಸರಿಪಡಿಸಲಾಗಿದೆ. ಪರಿಣಾಮ ರಾಜ್ಯದಲ್ಲಿ ಪ್ರತಿದಿನ ಅಂದಾಜು 10 ರಿಂದ 13 ಸಾವಿರ ಆಸ್ತಿ ನೋಂದಣಿಗಳಾಗುತ್ತಿವೆ. ಕೆಲ ದಿನಗಳಲ್ಲಿ ಒಂದೇ ಕಚೇರಿಯಲ್ಲಿ 140 ಕ್ಕೂ ಅಧಿಕ ರಿಜಿಸ್ಟ್ರೇಷನ್ ಆಗಿದ್ದೂ ಇದೆ. ಕಳೆದ ವರ್ಷಕ್ಕಿಂತ ಈ ಸೆಪ್ಟೆಂಬರ್ ನಲ್ಲಿ ಈಗಾಗಲೇ 800 ಕೋಟಿ ರೂ. ಗೂ ಅಧಿಕ ಆದಾಯ ಸರ್ಕಾರಕ್ಕೆ ಬಂದಿದೆ. ಇನ್ನೂ ಜನ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ದಿನವಿಡೀ ಕಾಯುವ ಬದಲು ಕೇವಲ 20 ನಿಮಿಷದಲ್ಲಿ ತಮ್ಮ ಕೆಲಸ ಮುಗಿಸುತ್ತಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ವಿ. ರಶ್ಮಿ ಮಹೇಶ್, ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಾದ ಡಾ. ಮಮತ ಬಿ.ಆರ್ ಉಪಸ್ಥಿತರಿದ್ದರು.












Click it and Unblock the Notifications