ಜೀವನಾಂಶದ ಅರ್ಜಿಗಳಲ್ಲಿ ಕೋರ್ಟ್ ಮದುವೆಯ ಸಿಂಧುತ್ವದ ಬಗ್ಗೆ ತೀರ್ಮಾನಿಸುವಂತಿಲ್ಲ- ಹೈಕೋರ್ಟ್
ಬೆಂಗಳೂರು, ಮೇ 27: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೀವನಾಂಶ ಕೋರಿ ಸಲ್ಲಿಸಿದ ಅರ್ಜಿ ಸಂದರ್ಭದಲ್ಲಿ ನ್ಯಾಯಾಲಯಗಳು ಮದುವೆಯ ಸಿಂಧುತ್ವದ ಬಗ್ಗೆ ತೀರ್ಮಾನಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ಆದೇಶಿಸಿದೆ. ಅಲ್ಲದೇ, ಮದುವೆ ಸಿಂಧುತ್ವ ತೀರ್ಮಾನಿಸಿದ್ದ ಸೆಷನ್ಸ್ ನ್ಯಾಯಾಲಯದ ಆದೇಶ ರದ್ದುಪಡಿಸಿದ ಹೈಕೋರ್ಟ್, ಜೆಎಂಎಫ್ಸಿ ಆದೇಶವನ್ನು ಖಾಯಂಗೊಳಿಸಿದೆ.
ಮಹಿಳೆಯೊಬ್ಬರು ಸಲ್ಲಿಸಿದ್ದ ಕ್ರಿಮಿನಲ್ ಮರು ಪರಿಶೀಲನಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ರಾಚಯ್ಯ ಅವರ ಪೀಠ ಈ ಆದೇಶ ಮಾಡಿದೆ.

ಹೈಕೋರ್ಟ್ ಹೇಳಿದ್ದೇನು..?
ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್, ಸಾಕ್ಷಿಗಳ ಹೇಳಿಕೆ ಮತ್ತು ಇತರೆ ಸಾಕ್ಷ್ಯಧಾರ ಪರಿಗಣಿಸಿದರೆ ಪತ್ನಿಯನ್ನು ಪತಿ ಮದುವೆಯಾಗಿರುವುದು ಸ್ಪಷ್ಟವಾಗುತ್ತದೆ. ಮದುವೆ ಸಿಂಧುತ್ವದ ಬಗ್ಗೆ ಅರ್ಜಿ ಸಲ್ಲಿಸಿದ್ದರೆ ಮಾತ್ರ ಆ ಕುರಿತು ಸೆಷನ್ಸ್ ನ್ಯಾಯಾಲಯವು ಪರಿಶೀಲನೆ ನಡೆಸಿ, ಆದೇಶ ಹೊರಡಿಸಬೇಕಾಗುತ್ತದೆ.
ಜೀವನಾಂಶ ಕೋರಿ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ನ್ಯಾಯಾಲಯಗಳು ಮದುವೆ ಸಿಂಧುತ್ವದ ಬಗ್ಗೆ ಪರಿಶೀಲನೆ ನಡೆಸುವಂತಿಲ್ಲ. ಪತಿಯಿಂದ ಪತ್ನಿ ಜೀವನಾಂಶ ಪಡೆಯಲು ಅರ್ಹರಾಗಿದ್ದಾರೆಯೇ ಎಂಬುದರ ಕುರಿತು ಆಕೆಯ ಸಾಕ್ಷ್ಯವನ್ನು ಪರಿಶೀಲನೆ ಮೇಲ್ಮನವಿ (ಸೆಷನ್ಸ್) ಕೋರ್ಟ್ಗೆ ನಡೆಸಲು ಅವಕಾಶವಿರುತ್ತದೆ ಎಂದು ಹೇಳಿದೆ.
ಅಲ್ಲದೇ ಒಮ್ಮೆ ವಿಚಾರಣಾ ನ್ಯಾಯಾಲಯ (ಜೆಎಂಎಫ್ಸಿ) ಜೀವನಾಂಶ ನೀಡುವ ಬಗ್ಗೆ ಸಾಕ್ಷ್ಯಾಧಾರ ಪರಗಿಣಿಸಿ ಆದೇಶ ಪ್ರಕಟಿಸಿದಾಗ, ಪತ್ನಿ ಸ್ವತಃ ಜೀವನ ನಿರ್ವಹಣೆ ಮಾಡಲು ಸಮರ್ಥಳು ಆಗಿದ್ದಾಳೆ ಎಂಬುದು ಸಾಬೀತಾದರೆ ಜೀವನಾಂಶ ನೀಡಲು ಸೂಚಿಸಿ ಹೊರಡಿಸಿದ ಆದೇಶವನ್ನು ಮೇಲ್ಮನವಿ ನ್ಯಾಯಾಲಯವು ತಿದ್ದುಪಡಿ ಮಾಡಬಹುದು ಇಲ್ಲವೇ ರದ್ದುಪಡಿಸಬಹುದು.
ಆದರೆ, ಮದುವೆಯ ಸಿಂಧುತ್ವದ ಬಗ್ಗೆ ಯಾವುದೇ ಆದೇಶ ಪ್ರಕಟಿಸಿದರೆ, ಅದು ತನ್ನ ಅಧಿಕಾರ ವ್ಯಾಪ್ತಿ ಮೀರಿ ನಡೆದುಕೊಂಡಂತಾಗುತ್ತದೆ. ಅದರಂತೆ ಪ್ರಕರಣದಲ್ಲಿ ಸೆಷನ್ಸ್ ಕೋರ್ಟ್ ಅಧಿಕಾರ ವ್ಯಾಪ್ತಿ ಮೀರಿ ಮದುವೆಯ ಸಿಂಧುತ್ವದ ಬಗ್ಗೆ ತೀರ್ಮಾನಿಸಿ, ಜೀವನಾಂಶ ಪಾವತಿ ಕುರಿತಂತೆ ವಿಚಾರಣಾ ನ್ಯಾಯಾಲಯ (ಜೆಎಂಎಫ್ಸಿ) ಹೊರಡಿಸಿದ ಆದೇಶ ಹೊರಡಿಸಿದೆ. ಇದು ರದ್ದುಪಡಿಸಲು ಅರ್ಹ ಎಂದು ನಿರ್ಧರಿಸಿತು.
ಪತ್ನಿ ಪರ ವಕೀಲರು, ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ತನ್ನ ಅಧಿಕಾರ ವ್ಯಾಪ್ತಿ ಮೀರಿ ಮದುವೆಯ ಸಿಂಧುತ್ವದ ಬಗ್ಗೆ ತೀರ್ಮಾನಿಸಿದೆ. ಸೌಮ್ಯಾ ಚುನಾವಣಾ ಗುರುತಿನ ಚೀಟಿ ಹೊಂದಿದ್ದು, ಅದರಿಂದ ರವಿಯೇ ಆಕೆಯ ಪತಿ ಎಂಬುದು ಸ್ಪಷ್ಟವಾಗಿ ತಿಳಿಯುತ್ತದೆ. ಆ ಗುರುತಿನ ಚೀಟಿಯನ್ನು ಸೌಮ್ಯಾ ಮೋಸದಿಂದ ಪಡೆದುಕೊಂಡಿಲ್ಲ.
ಪ್ರಕರಣದಲ್ಲಿ ಸೌಮ್ಯಾ ಸಂಬಂಧಿಕಾರದ ಚಂದಪ್ಪ ಬಿರಾದಾರರ್ ಮತ್ತು ವಿವಾಹ ನಡೆಸಿಕೊಟ್ಟ ವ್ಯಕ್ತಿ, ದಂಪತಿಯ (ರವಿ ಮತ್ತು ಸೌಮ್ಯಾ) ಸಂಬಂಧವನ್ನು ದೃಢಪಡಿಸುತ್ತಾರೆ. ಹೀಗಿದ್ದರೂ ಸೆಷನ್ಸ್ ನ್ಯಾಯಾಲಯದ ಆದೇಶ ತನ್ನ ಅಧಿಕಾರ ವ್ಯಾಪ್ತಿ ಮೀರಿ ಮದುವೆ ಸಿಂಧುತ್ವದ ಬಗ್ಗೆ ನಿರ್ಧರಿಸಿದೆ. ಆ ಆದೇಶವು ದೋಷಪೂರಿತವಾಗಿದ್ದು, ರದ್ದುಪಡಿಸಲು ಅರ್ಹವಾಗಿದೆ ಎಂದು ಪ್ರತಿಪಾದಿಸಿದ್ದರು.
ಪ್ರಕರಣದ ಹಿನ್ನೆಲೆ:
ಪ್ರಕರಣದಲ್ಲಿ ದಂಪತಿ 15 ವರ್ಷಗಳ ಹಿಂದೆ ಮದುವೆಯಾಗಿದ್ದರು. 2013ರಲ್ಲಿ ಜೆಎಂಎಫ್ಸಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ಪತ್ನಿ 'ಮದುವೆ ಸಂದರ್ಭದಲ್ಲಿ ಪತಿಗೆ ತಮ್ಮ ಪೋಷಕರು ವರದಕ್ಷಿಣೆಯಾಗಿ ಹಣ ಮತ್ತು ಚಿನ್ನಾಭರಣ ನೀಡಿದ್ದರು. ಅದರ ಹೊರತಾಗಿಯೂ ಪತಿಯು ಹೆಚ್ಚುವರಿ ವರದಕ್ಷಿಣೆಗೆ ಬೇಡಿಕೆಯಿಡುತ್ತಾ ಕಿರುಕುಳ ನೀಡುತ್ತಿದ್ದರು. ಹಲವು ದಿನ ನನಗೆ ಆಹಾರ ಸಹ ನೀಡಿಲ್ಲ. ತಾಯಿ ಮತ್ತು ಸಹೋದರಿಯ ಪ್ರಚೋದನೆಯಿಂದ ಪತಿ, ನನ್ನನ್ನು ಮನೆಯಿಂದ ಹೊರ ಹಾಕಿದ್ದರು. ಇದರಿಂದ ನನಗೆ ಜೀವನಾಂಶ ಪಾವತಿಸಲು ಪತಿಗೆ ನಿರ್ದೇಶಿಸುವಂತೆ' ಕೋರಿ ಕೌಟುಂಬಿಕ ದೌರ್ಜನ್ಯಗಳಿಂದ ಮಹಿಳೆ ರಕ್ಷಣೆ ಕಾಯ್ದೆಯ ಸೆಕ್ಷನ್ 12ರ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದರು.
ಆ ಅರ್ಜಿ ವಿಚಾರಣೆ ನಡೆಸಿದ್ದ ವಿಜಯಪುರ ಜೆಎಂಎಫ್ಸಿ ನ್ಯಾಯಾಲಯ, ಪತ್ನಿಗೆ ಮಾಸಿಕ ಮೂರು ಸಾವಿರ ರೂ. ಜೀವನಾಂಶ ಪಾವತಿಸುವಂತೆ ಪತಿಗೆ 2016ರ ಅ.26ರಂದು ನಿರ್ದೇಶಿಸಿತ್ತು. ಈ ಆದೇಶ ರದ್ದು ಕೋರಿ ಪತಿ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯ ವಿಚಾರಣೆ ನಡೆಸಿದ್ದ ವಿಜಯಪುರ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ಪತಿಯೊಂದಿಗೆ ಕಾನೂನಾತ್ಮಕವಾಗಿ ವಿವಾಹವಾಗಿರುವುದನ್ನು ಸಾಬೀತುಪಡಿಸುವಲ್ಲಿ ಪತ್ನಿ ವಿಫಲವಾಗಿದ್ದಾರೆ ಎಂದು 20018ರ ಮೇ 26ರಂದು ತೀರ್ಮಾನಿಸಿ ಜೆಎಂಎಫ್ಸಿ ಆದೇಶವನ್ನು ರದ್ದುಪಡಿಸಿತ್ತು. ಈ ಆದೇಶ ಪ್ರಶ್ನಿಸಿ ಪತ್ನಿ ಹೈಕೋರ್ಟ್ಗೆ ಕ್ರಿಮಿನಲ್ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.












Click it and Unblock the Notifications